ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದ್ದು, ಮಾನವ ಹಕ್ಕುಗಳ ಆಯೋಗದ ಸದಸ್ಯರು ಪೊಲೀಸ್ ಠಾಣೆಗೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ. ಕಳ್ಳತನ ಪ್ರಕರಣದಲ್ಲಿ ಬಂಧಿಸಿದ ಆರೋಪಿಯನ್ನು 10 ದಿನಗಳಿಂದ ನ್ಯಾಯಾಲಯಕ್ಕೆ ಹಾಜರುಪಡಿಸದೆ ಅಕ್ರಮವಾಗಿ ಬಂಧನದಲ್ಲಿಡಲಾಗಿದೆ ಎಂದು ಆರೋಪಿಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರು ಶನಿವಾರ ಅಮೃತಹಳ್ಳಿ ಪೊಲೀಸ್ ಠಾಣೆಗೆ ದಾಳಿ ನಡೆಸಿದ್ದಾರೆ.
ಶನಿವಾರ ಬೆಳಗ್ಗೆ ಅಮೃತಹಳ್ಳಿ ಠಾಣೆಗೆ ಮಾನವ ಹಕ್ಕುಗಳ ಆಯೋಗದ ಸದಸ್ಯರು ಉಪ ಎಸ್ಪಿ ಸುಧೀರ್ ಹೆಗ್ಡೆ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಪರಿಶೀಲನೆಯ ವೇಳೆ ಮುಂಬೈ ಮೂಲದ ಯಾಸಿನ್ ಮೆಹಬೂಬ್ ಖಾನ್ ಅವರನ್ನು ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ತನಿಖಾಧಿಕಾರಿಗಳು ಈ ವೇಳೆ ಕಂಡುಕೊಂಡಿದ್ದಾರೆ.
ಫೆಬ್ರವರಿ 1ರಿಂದ ಯಾಸಿನ್ನನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. 2023 ರಲ್ಲಿ ಯಾಸಿನ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿತ್ತು ಮತ್ತು ಪೊಲೀಸ್ ದೂರಿನ ನಂತರ ಆತ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ. ನ್ಯಾಯಾಲಯ ಆತನ ಬಂಧನಕ್ಕೆ ವಾರಂಟ್ ಹೊರಡಿಸಿದ್ದು, ಅಮೃತಹಳ್ಳಿ ಪೊಲೀಸರು ಆತನನ್ನು ಮುಂಬೈನಲ್ಲಿ ಬಂಧಿಸಿದ್ದರು. ಆದರೆ ಆತನ ಕುಟುಂಬಕ್ಕೆ ಬಂಧನದ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಆರೋಪಿಸಲಾಗಿದೆ.
ಇದಲ್ಲದೆ ಅಮೃತಹಳ್ಳಿ ಠಾಣೆ ಪೊಲಿಸರು ಆರೋಪಿಯನ್ನು ಬಂಧಿಸಿದ ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿಲ್ಲ. ಇದರಿಂದಾಗಿ ಆರೋಪಿಯ ಕುಟುಂಬವು ಕರ್ನಾಟಕ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗದ ಅಧಿಕಾರಿಗಳು ಪ್ರಸ್ತುತ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಬಗ್ಗೆ ತನಿಖಾಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಿದ್ದಾರೆ.
ಅಕ್ರಮ ಬಂಧನದಲ್ಲಿರುವ ಆರೋಪಿಯು ತನ್ನ ಪರಿಸ್ಥಿತಿಯ ಬಗ್ಗೆ ತನ್ನ ಕುಟುಂಬಕ್ಕೆ ವಕೀಲರ ಮೂಲಕ ಸಂದೇಶವನ್ನು ರವಾನಿಸಿದ್ದ. ಇದರಿಂದಾಗಿ ಕುಟುಂಬಸ್ಥರು ಸಹಾಯ ಕೋರಿ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಿದ್ದರು.
ಇದನ್ನು ಓದಿ: ಕೇರಳದ 3 ರಾಜಕೀಯ ಕೊಲೆಗಳ ಸ್ಟೋರಿ…