ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ಲೋಕಸಭೆಯಿಂದ ಉಚ್ಛಾಟಿಸಲ್ಪಟ್ಟಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ವಿಪಕ್ಷ ನಾಯಕರು ಬೆಂಬಲ ಸೂಚಿಸಿದರು. ಸಂಸತ್ತಿನ ಗಾಂಧಿ ಪ್ರತಿಮೆ ಮಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ನೈತಿಕ ಸಮಿತಿ ಶಿಫಾರಸ್ಸಿನ ಮೇರೆಗೆ ಲೋಕಸಭೆ ಸ್ಪೀಕರ್ ಮಹುವಾ ಅವರನ್ನು ಉಚ್ಛಾಟಿಸಿದ್ದು, ಈ ಕುರಿತು ಸಂಸತ್ತಿನ ಹೊರಗೆ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನೈತಿಕ ಸಮಿತಿಯು ಪ್ರತಿಯೊಂದು ನಿಯಮವನ್ನೂ ಉಲ್ಲಂಘಿಸಿದೆ. ನನಗೂ ಈ ಬಗ್ಗೆ ಮಾತನಾಡುವ ಹಕ್ಕಿದೆ’ ಎಂದರು.
‘ಅಸ್ತಿತ್ವದಲ್ಲೇ ಇಲ್ಲದ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಾನು ತಪ್ಪಿತಸ್ಥೆ ಎಂದು ಸಮಿತಿ ಸದಸ್ಯರು ಹೇಳಿದ್ದಾರೆ. ಸದಸ್ಯರು ತನ್ನ ವರದಿಯು ಪುಸ್ತಕದಲ್ಲಿನ ಪ್ರತಿಯೊಂದು ನಿಯಮಗಳನ್ನೂ ಮುರಿದಿದ್ದಾರೆ’ ಎಂದು ಕಿಡಿಕಾರಿದರು.
ಮೊಯಿತ್ರಾ ಅವರ ಉಚ್ಚಾಟನೆ ಆದೇಶ ಹೊರಬೀಳುತ್ತಿದ್ದಂತೆಯೇ ಸೋನಿಯಾ ಗಾಂಧಿ ಸೇರಿದಂತೆ ಇತರೆ ವಿರೋಧ ಪಕ್ಷದ ನಾಯಕರು ಲೋಕಸಭೆಯಿಂದ ಹೊರನಡೆದರು, ಕೇಂದ್ರ ಸರ್ಕಾರದ ಈ ಕ್ರಮವನ್ನು ‘ಅನೈತಿಕ ನಡವಳಿಕೆ’ ಎಂದು ವಾಗ್ದಾಳಿ ನಡೆಸಿದರು.
ಮಹುವಾ ಮೊಯಿತ್ರಾ ಅವರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡುವ ನೀತಿಸಂಹಿತೆ ಸಮಿತಿಯ ವರದಿಯನ್ನು ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದರು. ಇದೇ ವೇಳೆ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ‘ನಾನು ನಗದು ತೆಗೆದುಕೊಂಡಿದ್ದರೆ ಅದು ಎಲ್ಲಿದೆ ಎಂಬುದನ್ನು ನೀವು ಸಾಬೀತು ಮಾಡಬೇಕಾಗಿದೆ’ ಎಂದು ಮಹುವಾ ಮೊಯಿತ್ರಾ ಪ್ರಶ್ನಿಸಿದರು.
ಮಹುವಾ ಮೇಲಿನ ಆರೋಪವೇನು?
ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.
ಇದನ್ನೂ ಓದಿ; ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ