ಈಶಾನ್ಯ ರಾಜ್ಯ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸಿದ್ದವು. ಇಂದು (ಜೂನ್ 30, ಶುಕ್ರವಾರ) ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಾರೆ ಎಂದು ಹೇಳಲಾಗಿತ್ತು ಆದರೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ನಿರ್ಣಾಯಕ ಘಟ್ಟದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.
At this crucial juncture, I wish to clarify that I will not be resigning from the post of Chief Minister.
— N.Biren Singh (@NBirenSingh) June 30, 2023
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ರಾಜಭವನಕ್ಕೆ ಹೋಗದಂತೆ ಅವರ ಬೆಂಬಲಿಗರು ತಡೆಯುತ್ತಿದ್ದಂತೆ ಇಂಫಾಲ್ನಲ್ಲಿ ಹೈ ಡ್ರಾಮಾ ನಡೆಯಿತು. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ, ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ಸುದ್ದಿ ಸಿಎಂ ರಾಜೀನಾಮೆ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ, ಅವರ ಬೆಂಬಲಿಗರು ಸಿಎಂ ನಿವಾಸದ ಮುಂದೆ ಪ್ರತಿಭಟನೆ ನಡೆಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದರು ಎಂದು ಸ್ಥಳೀಯರೊಬ್ಬರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.
ಮಣಿಪುರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದ್ದರೂ, ನಿಯಂತ್ರಿಸುವಲ್ಲಿ ಬಿರೇನ್ ವಿಫಲರಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.
ಸಿಎಂ ರಾಜೀನಾಮಗೆ ಪ್ರತಿಪಕ್ಷಗಳ ಆಗ್ರಹ
ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಆಡಳಿತದಲ್ಲಿ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ಶನಿವಾರದಂದು ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದೆ.
ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಅವರು ಸರ್ವಪಕ್ಷಗಳ ಸರಾಸರಿಯಲ್ಲಿ ಎಂಟು ಅಂಶಗಳ ಬೇಡಿಕೆಗಳ ಚಾರ್ಟರ್ ಅನ್ನು ಪ್ರಸ್ತುತಪಡಿಸಿದರು, ಇದು ಪ್ರಸ್ತುತ ಸಿಎಂ ಬಿರೇನ್ ಸಿಂಗ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸುವುದನ್ನು ಉಲ್ಲೇಖಿಸಿದೆ. ಈ ಸಭೆಯನ್ನು ಗೃಹ ಸಚಿವ ಅಮಿತ್ ಶಾ ಕರೆದಿದ್ದರು.
”ಮಣಿಪುರದ ಸಿಎಂ ಅವರನ್ನು ತಕ್ಷಣವೇ ಪದಚ್ಯುತಗೊಳಿಸುವುದು ನಮ್ಮ ಬೇಡಿಕೆಯಾಗಿದೆ. ರಾಜೀನಾಮೆ ನೀಡದೇ ಮಣಿಪುರದಲ್ಲಿ ಶಾಂತಿ ಮತ್ತು ಸಹಜತೆ ಸ್ಥಿತಿಗೆ ಮರಳಲು ಸಾಧ್ಯವಿಲ್ಲ” ಎಂದು ಹೇಳಿದ್ದರು.
ಸಭೆಯ ನಂತರ, ಒಕ್ರಾಮ್ ಇಬೋಬಿ ಸಿಂಗ್ ಅವರು ”ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಹೆಚ್ಚಿನ ಸಮಯವನ್ನು ನೀಡಿರುವುದು “ದುರದೃಷ್ಟಕರ” ಎಂದು ಅಸಮಧಾನ ಹೊರಹಾಕಿದ್ದರು. ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸಬೇಕಿತ್ತು. ಕಳೆದ 50 ದಿನಗಳಲ್ಲಿ ಮಣಿಪುರದ ಬಗ್ಗೆ ಒಂದೇ ಒಂದು ಮಾತನ್ನೂ ಆಡಿಲ್ಲ” ಎಂದು ಪ್ರಧಾನಿ ಮೋದಿಯವರ ಮೇಲೆ ದಾಳಿ ಮಾಡಿದರು.
”ರಾಜ್ಯ ಸರ್ಕಾರವು ಅತ್ಯಂತ ಅಗತ್ಯವಿರುವಾಗ ಪರಿಣಾಮಕಾರಿ ಆಡಳಿತವನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮತ್ತು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿಗಳು ತಮ್ಮ ವೈಫಲ್ಯವನ್ನು ಎರಡು ಬಾರಿ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಜನರ ಕ್ಷಮೆಯನ್ನೂ ಕೇಳಿದ್ದಾರೆ. ಕೂಡಲೇ ಮುಖ್ಯಮಂತ್ರಿಯನ್ನು ಬದಲಾಯಿಸಬೇಕು” ಎಂದು ಒಕ್ರಾಮ್ ಇಬೋಬಿ ಸಿಂಗ್ ಆಗ್ರಹಿಸಿದ್ದರು.
ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೆಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಾಜ್ಯದಾದ್ಯಂತ ತೆರೆಯಲಾಗಿರುವ 300 ಪರಿಹಾರ ಕೇಂದ್ರಗಳಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.