Homeಎಲೆಮರೆಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ...

ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ…

ಸುತಾರರ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ.

- Advertisement -
- Advertisement -

ಎಲೆಮರೆ – 12

ಅರುಣ್‌ ಜೋಳದ ಕೂಡ್ಲಿಗಿ

ಈಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿರೋಧ ಹೆಚ್ಚಾದ ಕಾರಣ, ಮುಸ್ಲಿಮರಿಂದಲೆ ಈ ಕಾಯ್ದೆಯನ್ನು ಬೆಂಬಲಿಸುವ ಹಾಗೆ ಸುಳ್ಳಿನ ನಿರೂಪಣೆಗಳನ್ನು ಕಟ್ಟತೊಡಗಿದರು. ಇಂತಹ ಹುನ್ನಾರಕ್ಕೆ ಉತ್ತರ ಕರ್ನಾಟಕದ ಸೌಹಾರ್ದದ ಕವಿ ಇಬ್ರಾಹಿಂ ಸುತಾರರೂ ಬಲಿಯಾದರು. `ಯಾವ ಭಾರತೀಯ ಮುಸಲ್ಮಾನರಿಗೂ ಪೌರತ್ವ ಕಾಯಿದೆಯಿಂದ ತೊಂದರೆ ಆಗುವುದಿಲ್ಲ, ಸಮಾಜದಲ್ಲಿ ಸುಳ್ಳು ಸುದ್ದಿ ಯಾರು ಹಬ್ಬಿಸಬಾರದು. ನಾವೆಲ್ಲರು ಭಾರತೀಯರೆ’ ಎಂಬ ಹೇಳಿಕೆಯನ್ನು Ibrahim Sutar ಎನ್ನುವ ಪೇಸ್‍ಬುಕ್ ಪೇಜಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ನನಗೆ ಇಬ್ರಾಹಿಂ ಸುತಾರರು ಹೀಗೆ ಹೇಳಿರಲಿಕ್ಕಿಲ್ಲ ಎಂದು ಸ್ವತಃ ಹಿಂಬ್ರಾಹಿಂ ಸುತಾರರ ಬಳಿ ಮಾತನಾಡಿದೆ. ತಿಳಿದ ಸಂಗತಿಯೆಂದರೆ ಸುತಾರರ ಹೆಸರಲ್ಲಿ ಯಾವುದೇ ಅಧಿಕೃತ ಪೇಸ್‍ಬುಕ್ ಪೇಜ್ ಇರಲಿಲ್ಲ. ಅವರ ಹೆಸರಿನ ಫೇಕ್‍ಪೇಜಲ್ಲಿ ಈ ಅಭಿಪ್ರಾಯ ಹಂಚಿಕೆಯಾಗಿತ್ತು. ಈ ಕಾರಣಕ್ಕೆ ಸುತಾರರು ಮಹಾಲಿಂಗಪುರ ಠಾಣೆಯಲ್ಲಿ ಕೇಸ್ ದಾಖಲಿಸಿ, ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದರು. ಸೌಹಾರ್ದ ಸಮಾಜಕ್ಕಾಗಿ ದುಡಿಯುವ ಸುತಾರ ಇವರನ್ನು ಮೂಲಭೂತವಾದಿಗಳು ಹೀಗೆ ದುರ್ಬಳಕೆ ಮಾಡಿಕೊಂಡಿದ್ದರು.

ನಾವು ಬದುಕುತ್ತಿರುವ ಈ ಕಾಲದಲ್ಲಿ ಆಧ್ಯಾತ್ಮ ಭಕ್ತಿ ಎನ್ನುವ ಸಂಗತಿಗಳು ಮಾರುಕಟ್ಟೆಯ ಸರಕಾಗಿವೆ. ಇವುಗಳು ಜನರನ್ನು ಕಂದಾಚಾರಗಲ್ಲಿ ಮುಳುಗಿಸುತ್ತಿವೆ. ಇದು ಮುಂದುವರಿದು ಜಾತೀಯತೆ, ಧಾರ್ಮಿಕ ಮೂಲಭೂತವಾದವನ್ನು ಹೆಚ್ಚಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರವಚನ, ಆಧ್ಯಾತ್ಮ, ಭಕ್ತಿಯ ದಾರಿಯಲ್ಲಿ ಸಾಮಾಜಿಕ ಸುಧಾರಣೆಯ ಕನಸನ್ನು ಹೊತ್ತವರೂ ಇದ್ದಾರೆ. ಹೀಗೆ ಪ್ರವಚನದ ಮೂಲಕ ಸಮಾಜ ಸೇವೆ, ಸಮಸಮಾಜದ ಕನಸು, ಧಾರ್ಮಿಕ ಸಾಮರಸ್ಯವನ್ನು ಹೆಚ್ಚಿಸುವ, ಜಾತಿಯ ತರತಮಗಳನ್ನು ಕಡಿಮೆ ಮಾಡುವ ನೆಲೆಯಲ್ಲಿ ಸಾಮುದಾಯಿಕ ಬದಲಾವಣೆಗೆ ತಮ್ಮದೇ ಆದ ಮಹತ್ತರ ಕಾಣಿಕೆ ಸಲ್ಲಿಸುತ್ತಿರುವವರಲ್ಲಿ ಇಬ್ರಾಹಿಂ ಸುತಾರರು ಗಮನ ಸೆಳೆಯುತ್ತಾರೆ.

ಸುತಾರ ಅವರನ್ನು ನೇರವಾಗಿ ಸಾಮಾಜಿಕ ಚಳವಳಿಯ ಚೌಕಟ್ಟಿನಲ್ಲಿ ಇರಿಸಲಾಗದು. ಆದರೆ ಅವರ ಬದುಕಿನ ತಿರುವುಗಳನ್ನು ನೋಡುತ್ತಾ ಹೋದರೆ, ಸಾಮಾಜಿಕ ಜೀವನದಲ್ಲಿ ಅವರ ಮಹತ್ವ ಅರಿವಾಗುತ್ತದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರದಲ್ಲಿ ನೆಲೆಸಿದ ಇವರು ಉತ್ತರ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಬಹುಪಾಲು ಹಳ್ಳಿಗಳು ವರ್ಷಕ್ಕೆ ಒಮ್ಮೆಯಾದರೂ ಸುತಾರ ಅವರ ಪ್ರವಚನ ಕೇಳಬೇಕು ಎನ್ನುವುದು ವಾರ್ಷಿಕ ಆಚರಣೆಯಾಗಿದೆ. ಅಂತೆಯೇ ಸುತಾರರ ದಿನಚರಿಯನ್ನು ಗಮನಿಸಿದರೆ ಬಿಡುವಿಲ್ಲದ ಓಡಾಟವೂ ಕಾಣುತ್ತದೆ. ಇಂತಹ ಇಬ್ರಾಹಿಂ ಸುತಾರರ ಒಟ್ಟು ತಿಳಿವನ್ನು ರೂಪಿಸಿದ ಬಾಲ್ಯದ ಅನುಭವಗಳು ಕುತೂಹಲಕಾರಿಯಾಗಿವೆ.

ಸುತಾರ ಅವರು ರಚಿಸುವ ಕಾವ್ಯ ಅಥವಾ ವಚನಗಳನ್ನು `ಬಸವ’ ಎಂಬ ಅಂಕಿತದಲ್ಲಿ ಬರೆಯುತ್ತಿದ್ದಾರೆ. ಪ್ರವಚನಗಳಲ್ಲಿ ಸಾಮಾಜಿಕ ಪ್ರಸಕ್ತ ವಿದ್ಯಮಾನದ ಸಂಗತಿಗಳನ್ನು ತರುವ ಕ್ರಮ ಕೂಡ ಇದೆ. ಈ ಅರ್ಥದಲ್ಲಿ ಅವರೊಬ್ಬ ಜನಪದ ಕವಿ. ಜನಪದ ಸಂವಹನದ ದಾರಿಯನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ. ಈ ನೆಲೆಯಲ್ಲಿ ದೇವದಾಸಿ ಪದ್ಧತಿಯ ವಿರುದ್ಧ, ಜಾತಿ ಪದ್ಧತಿಯ ವಿರುದ್ಧ ಜನಜಾಗೃತಿ ಮೂಡಿಸುವುದು, ಸಾಕ್ಷರತಾ ಕಾರ್ಯಕ್ರಮದಲ್ಲಿ ಶಿಕ್ಷಣದ ಮಹತ್ವ ಸಾರುವುದು ಇತ್ಯಾದಿ. ತೀರಾ ಸಾಂಪ್ರದಾಯಿಕ ಸಂಗತಿಗಳನ್ನು ಮಾತ್ರ ಸಂವಹನ ಮಾಡಲು ಸಾಧ್ಯವಿದ್ದ ದಾರಿಯಲ್ಲಿಯೇ ಈ ಬಗೆಯ ಪ್ರಯೋಗ ಮಾಡಿರುವುದು ಮುಖ್ಯವಾಗಿದೆ. ಅಂತೆಯೇ ಈ ಪ್ರಯೋಗ ಕೂಡ ಧರ್ಮಸೂಕ್ಷ್ಮದಿಂದ ಕೂಡಿದೆ. ಜಾತಿಪದ್ಧತಿಯನ್ನು ವಿರೋಧಿಸುವಾಗ ಮೇಲುಜಾತಿಗಳನ್ನು ಗುರಿಯಾಗಿಟ್ಟುಕೊಳ್ಳುವಂತಿಲ್ಲ. ಬದಲಾಗಿ ಉದಾರವಾದಿ ನೆಲೆಯಲ್ಲಿ ಇದನ್ನು ನಿಭಾಯಿಸಿದ್ದಾರೆ. ಕಾರಣ ಸುತಾರರ ಪ್ರವಚನಗಳ ಪ್ರಾಯೋಜಕರು ಸಾಮಾನ್ಯವಾಗಿ ಮೇಲುಜಾತಿಯ ಮಠಗಳು ಎನ್ನುವುದನ್ನು ಗಮನಿಸಬೇಕು.

ಇಬ್ರಾಹಿಂ ಸುತಾರ ಅವರು ಮಾಡಿದ ಪ್ರವಚನದ ದಾರಿ ಒಂದು ಬಗೆಯ ಚಳವಳಿಯ ದಾರಿಯೂ ಆಗಿದೆ. ಇಲ್ಲಿ ಸಾಹಿತ್ಯ ಓದುಬರಹದಿಂದ ದಕ್ಕುವ ವೈಚಾರಿಕತೆ ಮೂಡದಿರಬಹುದು, ಆದರೆ ಕೆಲವು ಬಿಗಿಯಾದ ಕಟ್ಟುಗಳು ಸಡಿಲವಾಗುವ ಅರ್ಥದಲ್ಲಿ ಈ ಬದಲಾವಣೆಯನ್ನು ಗ್ರಹಿಸಬೇಕಾಗಿದೆ. ಮುಖ್ಯವಾಗಿ ಸುತಾರ ತರಹದ ಪ್ರವಚನ ಮಾದರಿಯಲ್ಲಿ ಇತರರು ಎದುರಿಸದ ಕೆಲವು ಬಿಕ್ಕಟ್ಟುಗಳನ್ನು ಇವರೊಬ್ಬ ಮುಸ್ಲಿಂ ಆದ ಕಾರಣಕ್ಕೆ ಎದುರಿಸಬೇಕಿತ್ತು. ಆದರೆ ಅದನ್ನವರು ತುಂಬಾ ಜಾಗರೂಕತೆಯಿಂದ ದಾಟಿದ್ದಾರೆ. ಈ ಮಧ್ಯೆಯೂ ಅವರು `ನಿಮ್ಮನೊಡನಿದ್ದೂ ನಿಮ್ಮಂತಾಗದೆ’ ಎನ್ನುವಂತಹ ಕವಿ ನಿಸಾರ್ ಅಹಮದ್ ತರಹದ ಬಿಕ್ಕಟ್ಟನ್ನು ಸೂಕ್ಷ್ಮವಾಗಿ ಎದುರುಗೊಂಡಿದ್ದಾರೆ.

ಇಲ್ಲಿ ಮುಖ್ಯವಾಗಿ ಜನರ ನಂಬಿಕೆಯ ದಾರಿಗಳಲ್ಲಿ ನಡೆಯುತ್ತಲೇ ಅವರ ಲೋಕದೃಷ್ಟಿಯನ್ನು ತಿದ್ದುವ ರೀತಿ ಇದಾಗಿದೆ. ಅಂದರೆ ಜನರು ಸಾಂಪ್ರದಾಯಿಕವಾಗಿ ಭಕ್ತಿ, ಭಜನೆ, ಪ್ರವಚನಗಳ ಜತೆ ಬೆಸೆದುಕೊಂಡ ನಂಬಿಕೆಯ ಲೋಕಗಳನ್ನು ಬಳಸಿಕೊಂಡೇ ಧಾರ್ಮಿಕ ಕಟ್ಟಳೆಗಳನ್ನೂ, ಜಾತಿಯ ಕಟ್ಟಳೆಗಳನ್ನೂ, ಲಿಂಗದ ಕಟ್ಟಳೆಗಳನ್ನೂ, ವರ್ಗಶ್ರೇಣಿಯ ಕಟ್ಟಳೆಗಳನ್ನೂ, ಮೂಢನಂಬಿಕೆಗಳನ್ನು ಮೀರುವ ತಿಳಿವನ್ನು ಬಿತ್ತರಿಸುವುದಾಗಿದೆ.

ಸುತಾರರು `ಪಾರಮಾರ್ಥ ಲಹರಿ ತತ್ವಪದಗಳು’ `ತತ್ವಜ್ಞಾನಕ್ಕೆ ಎಲ್ಲರೂ ಅಧಿಕಾರಿಗಳು’ `ನಾವೆಲ್ಲಾ ಭಾರತೀಯರು’ ಎಂಬ ಕಾವ್ಯ ಕೃತಿಗಳನ್ನು ರಚಿಸಿದ್ದಾರೆ. ಇದರಲ್ಲಿ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ. ಸುತಾರರು ನವಮೌಖಿಕ ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರವಾಗಿದ್ದಾರೆ. ಹಾಗಾಗಿ ಈತನಕ 20 ಧ್ವನಿಸುರುಳಿಗಳು ಬಿಡುಗಡೆಯಾಗಿವೆ. ಇದರ ಪ್ರಭಾವದಿಂದ ಸುತಾರರ ಪ್ರವಚನ ಮತ್ತು ಪದಗಳು ಮೊಬೈಲ್‍ನಲ್ಲಿಯೂ, ಟಿವಿಗಳಲ್ಲಿಯೂ ವ್ಯಾಪಕವಾಗಿ ಹರಡಿವೆ.

ಸುತಾರರು ತಮ್ಮ ಪ್ರವಚನದ ಜತೆ ಸಾಮಾಜಿಕ ಕಾಳಜಿಯ ಕಡೆ ಮುಖ ಮಾಡಿರುವುದು ಮುಖ್ಯವಾಗಿದೆ. ಇಲ್ಲಿ ಅವರು ಸಾಮೂಹಿಕ ಹಿತದ ಕೆಲಸಗಳಿಗೆ ಹೆಚ್ಚು ಗಮನಹರಿಸಿದ್ದಾರೆ. ರಸ್ತೆ ಮಾಡಿಸಿದ್ದು, ಶಾಲೆ ಕಟ್ಟಿಸಿದ್ದು, ಕುಡಿಯುವ ನೀರಿನ ಟ್ಯಾಂಕ್ ಕಟ್ಟಿಸಿದ್ದು ಇತ್ಯಾದಿಗಳು. ಇಂತಹ ಕೆಲಸಗಳಿಗೆ ಬಂದೊದಗಿದ ಸಂದರ್ಭಗಳು, ಇಂತಹ ಸಂದರ್ಭವನ್ನು ಸುತಾರರು ನಿಭಾಯಿಸಿದ ಬಗೆ ಎರಡೂ ಭಿನ್ನವಾಗಿದೆ.

ಸುತಾರರನ್ನು ಉತ್ತರ ಕರ್ನಾಟಕದಲ್ಲಿ `ಕನ್ನಡದ ಕಬೀರ’ನೆಂದು ಗುರುತಿಸುತ್ತಾರೆ. ಈ ಬಗ್ಗೆ ರಂಜಾನ್ ದರ್ಗಾ ಅವರು `ಸಂತ ಕಬೀರ ದುಷ್ಟಶಕ್ತಿಗಳನ್ನು ಎದುರುಹಾಕಿಕೊಂಡು ವೈಚಾರಿಕತೆಯ ಮಾನವ ಏಕತೆಯನ್ನು ಸಾಧಿಸಿದರೆ, ಇವರು ಯಾರನ್ನೂ ಎದುರು ಹಾಕಿಕೊಳ್ಳದೆ ಮಾನವ ಏಕತೆಯನ್ನು ಸಾಧಿಸುವ ಕ್ರಮ ಆಪ್ಯಾಯಮಾನವಾಗಿದೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...