ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲ ವಾರ್ಡ್ಗಳಲ್ಲಿ ಸ್ಪರ್ಧಿಸಲಿದೆ ಎಂದಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, “ಪಕ್ಷವೂ ಅಧಿಕಾರಕ್ಕೆ ಬಂದರೆ ಬೆಂಗಳೂರಿನಾಧ್ಯಂತ ದೆಹಲಿ ಮಾದರಿಯ ಮೊಹಲ್ಲಾ ಕ್ಲಿನಿಕ್ ಆರಂಭಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ಸ್ಥಾಪಿಸಿರುವ “ಆಮ್ ಆದ್ಮಿ ಕ್ಲಿನಿಕ್”ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು “ದೆಹಲಿ ಜನರಿಗೆ ಉತ್ತಮವಾದ ವೈದ್ಯಕೀಯ ಸೌಲಭ್ಯ ಮತ್ತು ಶಿಕ್ಷಣ ಒದಗಿಸುವುದಕ್ಕೆ ನಮ್ಮ ಪಕ್ಷ ಆದ್ಯತೆ ನೀಡುತ್ತಿದ್ದು, ಬೆಂಗಳೂರಿನಲ್ಲೂ ಅದೇ ಮಾದರಿ ಅನುಷ್ಠಾನಕ್ಕೆ ತರುತ್ತೇವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್
“ದೆಹಲಿಯ ಮೊಹಲ್ಲಾ ಕ್ಲಿನಿಕ್ಗಳು ವೈದ್ಯರ ಸೇವೆ, ಉಚಿತ ಔಷಧಿ ವಿತರಣೆ ಮತ್ತು ಶುಚಿತ್ವಕ್ಕೆ ಹೆಸರುವಾಸಿಯಾಗಿದ್ದು, ಈ ಕಾರಣಕ್ಕಾಗಿಯೇ ದೆಹಲಿಯ ಮೊಹಲ್ಲಾ ಕ್ಲಿನಿಕ್ಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಪ್ರಮುಖ ಮಾದರಿ ಎಂಬ ಮನ್ನಣೆ ಪಡೆದಿದೆ. ಅದೇ ಮಾದರಿಯ ಕ್ಲಿನಿಕ್ಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರೆಯಲಾಗುವುದು” ಎಂದಿದ್ದಾರೆ.
“ಆಮ್ ಆದ್ಮಿ ಪಕ್ಷದ ಐದು ವರ್ಷಗಳ ಅವಧಿ ದೆಹಲಿಯಲ್ಲಿ ಸರ್ಕಾರಿ ಶಾಲೆಗಳಿಗೆ ಹೊಸ ಸ್ಪರ್ಶ ನೀಡಿದೆ. ಸರ್ಕಾರಿ ಶಾಲೆಗಳ ಮಕ್ಕಳು ಈಗ ಹೆಚ್ಚಿನ ಸಂಖ್ಯೆಯಲ್ಲಿ ಐಐಟಿಗಳಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಅದೇ ಮಾದರಿಯಲ್ಲಿ ಬೆಂಗಳೂರಿನ ಶಾಲೆಗಳಲ್ಲೂ ಸುಧಾರಣೆ ತರುವ ಗುರಿಯನ್ನು ತಮ್ಮ ಪಕ್ಷ ಹೊಂದಿದೆ” ಎಂದು ಅವರು ಹೇಳಿದ್ದಾರೆ.
ಬಿಬಿಎಂಪಿ ಚುನಾವಣೆಯಲ್ಲಿ ನೆಪಮಾತ್ರಕ್ಕೆ ಸ್ಪರ್ಧಿಸುವುದು ಪಕ್ಷದ ಉದ್ದೇಶವಲ್ಲ. ಎಲ್ಲ ವಾರ್ಡ್ಗಳಲ್ಲೂ ಗೆಲುವು ಸಾಧಿಸುವ ಗುರಿಯೊಂದಿಗೆ ಸ್ಪರ್ಧೆ ಮಾಡಲಾಗುವುದು. ಬಿಬಿಎಂಪಿ ಚುನಾವಣೆಯಲ್ಲಿ ಬೆಂಗಳೂರಿನ ಜನರು ಅತ್ಯಂತ ಜವಾಬ್ಧಾರಿಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಬೆಂಗಳೂರಿನ ಜನತೆಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ’ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ…ದೆಹಲಿಗರೆ’: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್