ಸಂಸತ್ತಿನ ಭದ್ರತೆ ಉಲ್ಲಂಘಿಸಿದವರಿಗೆ ಪಾಸ್ ನೀಡಿದ ಆರೋಪದಲ್ಲಿ ಸಿಲುಕಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸರ್ಕಾರಿ ಜಾಗದಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅವರ ಸಹೋದರ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ನೂರಾರು ಮರಗಳನ್ನು ಅನಧಿಕೃತವಾಗಿ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಮ್ ವಿರುದ್ಧ ದೂರು ದಾಖಲಾಗಿದ್ದು, ಬೇಲೂರು ತಹಶೀಲ್ದಾರ್ ಮಮತಾ ಅವರು ಗ್ರಾಮಕ್ಕೆ ತೆರಳಿ ನಡೆಸಿದ ರಹಸ್ಯ ಕಾರ್ಯಾಚರಣೆ ವೇಳೆ ಸರ್ಕಾರಿ ಜಮೀನಿನಲ್ಲಿ ನಡೆದ ಕೃತ್ಯ ಬೆಳಕಿಗೆ ಬಂದಿದೆ.
ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯಿಲ್ಲದೆ ಬೆಲೆಬಾಳುವ ನೂರಾರು ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದರ ಸಹೋದರನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಘಟನೆ ಕುರಿತು ವಿವರವಾದ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ‘ಆರೋಪಿಯ ರಾಜಕೀಯ ಪ್ರಭಾವ ಲೆಕ್ಕಿಸದೆ ಕಾನೂನಿನ ಪ್ರಕಾರ ತ್ವರಿತ ಕ್ರಮ ಕೈಗೊಳ್ಳುವುದಾಗಿ’ ಅವರು ಭರವಸೆ ನೀಡಿದ್ದಾರೆ. ಆದರೆ, ಎಫ್ಐಆರ್ ದಾಖಲಾಗಿ 10 ದಿನ ಕಳೆದರೂ ಇವರೆಗೂ ವಿಕ್ರಮ್ನನ್ನು ಬಂಧಿಸಿಲ್ಲ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಕಾಫಿ ಮತ್ತು ಶುಂಠಿ ಕೃಷಿ ಮಾಡುತ್ತಿದ್ದಾರೆ. ತಮ್ಮ 5 ಎಕರೆ ಸೇರಿದಂತೆ ಸರ್ಕಾರದ 12 ಎಕರೆ ಜಮೀನಿನಲ್ಲಿದ್ದ ನೂರಾರು ನಿಗದಿತ ಮರಗಳನ್ನು ಅನಧಿಕೃತವಾಗಿ ಕಡಿದು ಕಳ್ಳಸಾಗಾಣೆ ಮಾಡುವಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿದೆ.
ಅರಣ್ಯ ಅಧಿಕಾರಿಗಳಿಂದ ಅಗತ್ಯ ಅನುಮತಿಗಳ ಪಡೆದುಕೊಳ್ಳದೆ ಇರುವುದರಿಂದ, ಈ ಘಟನೆಯು ಪರಿಸರ ಸಂರಕ್ಷಣೆ ಮತ್ತು ಕಾನೂನು ಕಾರ್ಯವಿಧಾನಗಳ ಅನುಸರಣೆಯ ಉಲ್ಲಂಘನೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಬೆಲೆಬಾಳುವ ಮರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೆ ಕಡಿದು ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಮರ ಕಡಿದಿರುವ 4 ಎಕರೆ ಜಮೀನನ್ನು ಬೇಲೂರು ತಾಲೂಕಿನ ಇಬ್ಬರು ವ್ಯಕ್ತಿಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಸರ್ಕಾರ ಮುಂದಾಗಿದ್ದು, ಆ ಜಮೀನಿನಲ್ಲಿ ಶುಂಠಿ ಕೃಷಿ ಮಾಡಲು ವಿಕ್ರಮ ಸಿಂಹ ಇಬ್ಬರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.
ಖಾಸಗಿ ಮಾಧ್ಯಮವೊಂದರ ಜತೆ ಮಾತನಾಡಿರುವ ಬೇಲೂರು ತಹಶೀಲ್ದಾರ್ ಮಮತಾ, ‘ವಿಕ್ರಮ್ ಸಿಂಹ ಎಂಬ ವ್ಯಕ್ತಿ ಕಳ್ಳಸಾಗಣೆ ಮಾಡುವ ಉದ್ದೇಶದಿಂದ ಐದು ಎಕರೆಗೂ ಹೆಚ್ಚು ಸರ್ಕಾರಿ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಹಾಕಿರುವುದು ನಿಜ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಬಂಧಿತ ಅಧಿಕಾರಿಗಳ ಅನುಮತಿಯಿಲ್ಲದೆ ಸರ್ಕಾರಿ ಭೂಮಿಯಲ್ಲಿ ಈ ಮರಗಳನ್ನು ಕಡಿಯಲು ಯಾರಿಗೂ ಅವಕಾಶವಿಲ್ಲ, ಏಕೆಂದರೆ ಇವುಗಳು ನಿಗದಿತ ಮರಗಳು – ಸರ್ಕಾರದ ಆಸ್ತಿ. ತನಿಖೆ ಪ್ರಾರಂಭಿಸಲಾಗಿದೆ; ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಾವು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿಲ್ಲ’ ಎಂದು ಹೇಳಿದ್ದಾರೆ.
ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಖಂಡ್ರೆ:
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ‘ನಾನು ಹಾಸನ ಸಿಸಿಎಫ್ನಿಂದ ಘಟನೆಯ ಬಗ್ಗೆ ವಿವರಗಳನ್ನು ಕೇಳಿದ್ದೇನೆ. ಪ್ರಾಥಮಿಕ ವರದಿಗಳ ಪ್ರಕಾರ, ನೂರಾರು ನಿಗದಿತ ಮರಗಳನ್ನು ಅಕ್ರಮವಾಗಿ ಕಡಿದುಹಾಕಿದ್ದಕ್ಕಾಗಿ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪವೂ ಇದೆ. ಯಾರೂ ಕಾನೂನಿಗಿಂತ ಮೇಲಲ್ಲ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆರೋಪಿಯ ರಾಜಕೀಯ ಸಂಬಂಧಗಳು ಏನೇ ಇರಲಿ ನಾವು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.
ಆರೋಪಿ ವಿಕ್ರಮಸಿಂಹ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಎಂಬುದು ನಿಮಗೆ ತಿಳಿದಿದೆಯೇ ಎಂದು ಚಿತ್ರದುರ್ಗದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆರೋಪಿ ಬಿಜೆಪಿ ಸಂಸದರ ಸಹೋದರ ಎಂದು ನನಗೆ ತಿಳಿದಿರಲಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅನುಮತಿಯಿಲ್ಲದೆ ನೂರಾರು ಮರಗಳನ್ನು ಕಡಿಯುವುದು ಸ್ಪಷ್ಟವಾಗಿ ಕಾನೂನಿನ ಉಲ್ಲಂಘನೆಯಾಗಿದೆ’ ಎಂದರು.
ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ವಾಗ್ದಾಳಿ:
ಅಕ್ರಮಮವಾಗಿ ಮರ ಕಡಿದು ಸಾಗಾಣೆ ಮಾಡಿರುವ ಬಗ್ಗೆ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಕಾಂಗ್ರೆಸ್, ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ’ ಎಂದು ಟೀಕಿಸಿದೆ.
ಅಣ್ಣ @mepratap ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ.
ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್… pic.twitter.com/5m5ZYZrMDl
— Karnataka Congress (@INCKarnataka) December 23, 2023
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಈಶ್ವರ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ಡಿಯರ್ ಬಿಜೆಪಿ, ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ’ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ; ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ