Homeಕರ್ನಾಟಕಶಿವಮೊಗ್ಗ, ಚಿಕ್ಕಬಳ್ಳಾಪುರ ಸ್ಫೋಟಗಳ ಸಾಲಿಗೆ ಸೇರಬಾರದು ಬ್ರಹ್ಮಾವರ ತಾಲೂಕಿನ ಗಣಿ

ಶಿವಮೊಗ್ಗ, ಚಿಕ್ಕಬಳ್ಳಾಪುರ ಸ್ಫೋಟಗಳ ಸಾಲಿಗೆ ಸೇರಬಾರದು ಬ್ರಹ್ಮಾವರ ತಾಲೂಕಿನ ಗಣಿ

- Advertisement -
- Advertisement -

ಅಕ್ರಮವಾಗಿ ಹಣ ಹರಿದು ಬರುವಲ್ಲಿ ಅನಾಹುತ-ಅನಾಚಾರ ಆಗಿಯೇ ಆಗುತ್ತದೆ. ಇದು ಪ್ರಕೃತಿ ನಿಯಮ. ರಾಜ್ಯದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಕಲ್ಲು ಮತ್ತು ಮರಳು ಗಣಿಗಳಲ್ಲಿ ಪ್ರತಿದಿನ ಒಂದಲ್ಲ ಒಂದು ಭಾನಗಡಿ ಇದ್ದದ್ದೇ! ಹತ್ತು-ಹನ್ನೆರಡು ಜಿಲ್ಲೆಗಳಲ್ಲಿ ನಿರಂತರ-ನಿರಾತಂಕವಾಗಿ ನಡೆಯುತ್ತಿರುವ ಕಳ್ಳ ಕಲ್ಲು ಗಣಿಗಾರಿಕೆಗೆ ಅಧಿಕಾರಸ್ಥರ ಪುಢಾರಿಗಳೇ ಪಿತಾಮಹರು. ಹೀಗಾಗಿ ಕಲ್ಲು ಕ್ವಾರಿಗಳಲ್ಲಿ ನರಬಲಿ, ರಕ್ತದೋಕುಳಿ ನಡೆಯುತ್ತಲೇ ಇದೆ. ಶಿವಮೊಗ್ಗದ ಹುಣಸೋಡು ಅಕ್ರಮ ಗಣಿಯಲ್ಲಿ ಘನಘೋರ ಸ್ಫೋಟ ಸಂಭವಿಸಿ ಆರು ಬಡ ಜೀವಗಳು ಆಹುತಿಯಾಗಿ ತಿಂಗಳಿನ್ನೂ ಕಳೆದಿಲ್ಲ; ಅದಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೇನಾಗವೇಲಿ ಜಿಲೆಟಿನ್ ಸಿಡಿತಕ್ಕೆ ಆರು ಮಂದಿ ಬಲಿಯಾಗಿದ್ದಾರೆ!!

ರಾಜ್ಯದ ಸುಮಾರು 10-15 ಸಾವಿರ ಎಕರೆ ಪ್ರದೇಶದಲ್ಲಿ ಸಾವಿರಾರು “ಅಧಿಕೃತ” ಕಲ್ಲುಕ್ವಾರಿ ಮತ್ತು ಕ್ರಶರ್‌ಗಳಿವೆ ಎಂಬುದೊಂದು ಅಂದಾಜು. ಆದರೆ ಇದಕ್ಕೆ ದುಪ್ಪಟ್ಟು ಜಾಗದಲ್ಲಿ ದುಪ್ಪಟ್ಟು ಕಲ್ಲುಗಣಿ-ಕ್ರಶರ್‌ಗಳ “ಅನಧಿಕೃತ” ದಂಧೆ ರಾಜಾರೋಷವಾಗಿ ಸಾಗಿದೆ! ಇದು ಸರ್ಕಾರ ನಡೆಸುವವರಿಗೆ ಮತ್ತವರ ಅಧಿಕಾರಿ ಗಣಕ್ಕೆ ಗೊತ್ತಿರುವ ಸತ್ಯವೇ. ಕಳ್ಳ ಮಾರ್ಗದಲ್ಲಿ ಕೋಟಿ-ಕೋಟಿ ಲೂಟಿಯಾಗುತ್ತಿದ್ದರೂ ಕಡಿವಾಣ ಹಾಕುವುದಕ್ಕಾಗುತ್ತಿಲ್ಲ. ಸರ್ಕಾರವನ್ನೇ ಉರುಳಿಸುವಷ್ಟು ಮತ್ತು ಎಂಪಿ-ಎಮ್ಮೆಲ್ಲೆಗಳ ಗೆಲ್ಲಿಸುವ-ಸೋಲಿಸುವಷ್ಟು ಕೊಬ್ಬಿರುವ ಕ್ವಾರಿ ಲಾಬಿ ಮಟ್ಟಹಾಕುವ ತಾಕತ್ತು ಯಾರಿಗೂ ಇಲ್ಲವಾಗಿದೆ.

ಕಲ್ಲು ಕ್ವಾರಿಗಳಲ್ಲಿ ಸ್ಥಳೀಯ ಅಮಾಯಕ ಕೂಲಿಗಳ ಜತೆ ಆಂಧ್ರ, ಬಿಹಾರ, ಜಾರ್ಖಂಡ್ ಮುಂತಾದ ಹೊರ ರಾಜ್ಯಗಳ ಕಾರ್ಮಿಕರು ದುಡಿಯುತ್ತಿದ್ದಾರೆ. ಇದೊಂಥರಾ ಜೀತ!! ಜೀವ ಪಣಕ್ಕಿಟ್ಟು ಬೆವರಿಳಿಸಬೇಕಾದ ಬರ್ಬರ-ಭೀಕರ ಪದ್ಧತಿ!! ಕೆಲವು ಕಡೆ ಟನ್‌ಗಟ್ಟಲೆ ಸ್ಫೋಟಕ ಸಂಗ್ರಹಿಸಿಡಲಾಗಿದೆ. ಆಂಧ್ರ-ತಮಿಳುನಾಡು ಮತ್ತಿತರ ರಾಜ್ಯಗಳಿಂದ ಜಿಲೆಟಿನ್, ಅಮೋನಿಯಮ್ ನೈಟ್ರೇಟ್, ಡಿಟೋನೇಟರ್ ಮತ್ತು ಫ್ಯೂಸ್ ಪೂರೈಕೆಯಾಗುತ್ತಿದೆ. ಈ ಸ್ಫೋಟಕಗಳನ್ನು ಒಂದೇ ಕಡೆ ಸಂಗ್ರಹಿಸಿಡುವುದು ಗಂಡಾಂತರಕಾರಿ. ಯಾವ ಸುರಕ್ಷಾ ಕ್ರಮಗಳು ಇಲ್ಲದೆ ಸ್ಫೋಟಕ ದಾಸ್ತಾನು ಮಾಡುವ ಗಣಿ ಧಣಿಗಳು ಮಾರಣಹೋಮ ಮಾಡುತ್ತಿದ್ದಾರೆ. ಬೃಹತ್ ಬಂಡೆ ಒಡೆಯುವಾಗ ಪರವಾನಗಿ ಹೊಂದಿರುವ ಪರಿಣಿತರಿಂದಲೇ ಸ್ಫೋಟ ನಡೆಸಬೇಕೆಂಬ ನಿಯಮವಿದೆ. ಇದ್ಯಾವುದೂ ಯಾವ ಗಣಿಯಲ್ಲೂ ಪಾಲನೆಯಾಗುತ್ತಿಲ್ಲ.

ಕಲ್ಲುಕ್ವಾರಿ ಹಾಗೂ ಕ್ರಶರ್ ಪರವಾನಗಿ ಕಟ್ಟುನಿಟ್ಟಿನ ನಿಯಮವೇನೋ ಇದೆ. ಅರಣ್ಯ ಸಂರಕ್ಷಣಾ ಕಾಯ್ದೆ 198 2(1) ಮತ್ತು 2(3) ಮತ್ತು ಅರಣ್ಯ ಸಂರಕ್ಷಣಾ ಕಾನೂನು 2003(6) ಹಾಗೂ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ಸಿಕ್ಕ ಬಳಿಕ 20 ಅಥವಾ 30 ವರ್ಷದ ಲೀಸ್ ನೀಡಬೇಕಾಗುತ್ತದೆ. ಇದೆಲ್ಲವನ್ನೂ ಪ್ರಜ್ಞಾಪೂರ್ವಕವಾಗೇ ಧಿಕ್ಕರಿಸಿ ಕಳ್ಳಕ್ವಾರಿಗೆ ಅವಕಾಶ ನೀಡಿ ತಮ್ಮ ಪಾಲು ಪಡೆಯುವ ಅಧಿಕಾರಿಗಳು ಏನೂ ಆಗಿಲ್ಲವೆಂಬಂತೆ ಇದ್ದು ಬಿಡುತ್ತಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಂತೂ ಲೇವಾದೇವಿ ಅಡ್ಡೆಯಂತಾಗಿ ಹೋಗಿದೆ! ಹೀಗಾಗಿ ಕಾಯ್ದಿಟ್ಟ ಅರಣ್ಯ, ಅಭಯಾರಣ್ಯ, ಪರಿಸರ ಸೂಕ್ಷ್ಮ ಪ್ರದೇಶದಲ್ಲೂ ನಾಯಿಕೊಡೆಗಳಂತೆ ಭೀಭತ್ಸ ಕ್ವಾರಿಗಳು ತಲೆಯೆತ್ತಿವೆ. ಕ್ರಶರ್‌ಗಳಿಗಷ್ಟೇ ಪರವಾನಗಿ ಪಡೆದು ಕಣ್ಕಟ್ಟು ನಡೆಸುವ ಕ್ವಾರಿ ಕುಳಗಳಿಗೆ ಕಳ್ಳ ಕ್ವಾರಿ ನಡೆಸಲು ಅಧಿಕಾರಿ ಬಳಗ ಅನುಕೂಲ ಮಾಡಿಕೊಡುತ್ತಿದೆ!

ಕಳ್ಳಕ್ವಾರಿಗಳಿಂದ ಪರಿಸರ ಶಬ್ದಮಾಲಿನ್ಯ ಆಗುತ್ತಿದೆ. ಯಂತ್ರಗಳ ಸದ್ದು ಮತ್ತು ಸ್ಫೋಟದಿಂದ ವನ್ಯ ಪ್ರಾಣಿಗಳು ದಿಕ್ಕೆಟ್ಟು ನಾಡಿಗೆ ನುಗ್ಗುತ್ತಿವೆ. ಕಲ್ಲುಸಾಗಾಟಕ್ಕೆ ರಸ್ತೆ, ಕಾರ್ಮಿಕರ ಗುಡಿಸಲು, ಯಂತ್ರಗಳ ಸ್ಥಾಪನೆ ಎಂದೆಲ್ಲ ಅರಣ್ಯ ನಾಶವಾಗುತ್ತಿದೆ. ಗಣಿಗಾರಿಕೆಯಿಂದ ನದಿಗಳು ಬತ್ತಿಹೋಗುತ್ತಿವೆ. ರೈತರ ಬೆಳೆಗೆ ಹಾನಿಯಾಗುತ್ತಿದೆ. ಮಣ್ಣಿನ ಸಾರಾಂಶ ಕಡಿಮೆಯಾಗುತ್ತಿದೆ. ಉಸಿರಾಟದ ತೊಂದರೆ, ಶ್ವಾಸಕೋಶ, ಶ್ರವಣ ಸಮಸ್ಯೆ, ಕೆಮ್ಮುಗಳಂಥ ರೋಗ ಜನರಿಗೆ ಬಾಧಿಸುತ್ತಿದೆ. ಸ್ಥಳೀಯ ಪ್ರಭಾವಿ ಮರಿ ಪುಢಾರಿಗಳ ಸಚಿವ-ಸಂಸದ-ಶಾಸಕರ ನಿಕಟವರ್ತಿಗಳೇ ಗಣಿಗಾರಿಕೆ ಯಜಮಾನರಾಗಿರುವುದರಿಂದ ನಿಷ್ಠಾವಂತ ಅಧಿಕಾರಿಗಳ ಕೈಕಟ್ಟಿಹಾಕಿದಂತಾಗಿದೆ. ಅಕ್ರಮಕ್ಕೆ ಅಂಕುಶವಿಡಲು ಪ್ರಯತ್ನಿಸುವ ಅಧಿಕಾರಿಗಳನ್ನು ಸತಾಯಿಸಿ ಪಳಗಿಸಲು ಹವಣಿಸುವುದು ಮಾಮೂಲಿ ಎಂಬಂತಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೊಪ್ಪಳ, ಚಾಮರಾಜನಗರ, ಮಂಡ್ಯ, ಬೀದರ್ ಮತ್ತು ಶಿವಮೊಗ್ಗಗಳಲ್ಲಿ ಕಲ್ಲುಕ್ವಾರಿ ಹಾವಳಿ ಜೋರಾಗಿದೆ! ಮೊನ್ನೆ ನಡೆದ ಗ್ರಾಪಂ ಇಲೆಕ್ಷನ್‌ನಲ್ಲೂ ಈ ಕ್ವಾರಿ ಕಪ್ಪು ಕಾಸು ನಿರ್ಣಾಯಕ ಆಟ ಆಡಿದೆ.

ಕಾಯ್ದೆ ಉಲ್ಲಂಘಿಸುವ ಕಲ್ಲು ಗಣಗಾರಿಕೆಯವರಿಗೆ 2 ವರ್ಷ ಶಿಕ್ಷೆ ಮತ್ತು 5 ಲಕ್ಷ ರೂ ದಂಡ ವಿಧಿಸುವ ಕಾನೂನಿದೆ. ಇದು ಬರೀ ಹೆಸರಿಗಷ್ಟೇ. ಕಳೆದ 5 ವರ್ಷದಲ್ಲಿ ಕದ್ದು ಕಲ್ಲು ಸಾಗಿಸಿದ ಸುಮಾರು 800 ಪ್ರಕರಣಗಳಲ್ಲಿ ಗಣಿ ಇಲಾಖೆ ವಾಹನಗಳ ಜಪ್ತಿ ಮಾಡಿ 9 ಕೋಟಿ ದಂಡ ವಸೂಲಿ ಮಾಡಿದೆ ಎಂಬುದು ಸರ್ಕಾರಿ ಅಂಕಿ-ಅಂಶ. ಆದರೆ ಕಳ್ಳ ಗಣಿ ದೊರೆಗಳು-ಅಧಿಕಾರಿಗಳು-ಅಧಿಕಾರಸ್ಥ ರಾಜಕಾರಣಿಗಳ ಒಳ ಒಪ್ಪಂದದಲ್ಲಿ ಸಾವಿರಾರು ಕೋಟಿ ರೂ ಕಲ್ಲು ಕಳ್ಳ ಸಾಗಾಣಿಕೆ ಆಗಿದೆ; ರಾಜಧನ ತಪ್ಪಿಸಿ ಹಗಲು ದರೋಡೆ ಮಾಡಲಾಗುತ್ತಿದೆ. ಕಳೆದ 5 ವರ್ಷದಲ್ಲಿ ಅಕ್ರಮ ಗಣಿಗಾರಿಕೆಯ 1,126 ಕೇಸ್ ದಾಖಲಾಗಿದೆ. ಇದಕ್ಕೆ ಎರಡು ಪಟ್ಟು ಮುಚ್ಚಿಹೋಗಿದೆ. ಗಣಿ ಇಲಾಖೆ ಇತಿಹಾಸದಲ್ಲಿ ಒಂದಿಷ್ಟು ತೋರಿಕೆಗೆ ದಂಡ ಹಾಕುವ ಕಾರ್ಯಾಚರಣೆ ನಡೆದಿದೆಯೇ ಹೊರತು ಯಾವ ಕಲ್ಲು ಕಳ್ಳನಿಗೂ ಶಿಕ್ಷೆಯಾದ ದಾಖಲೆಯಿಲ್ಲ!! ಹಗಲಿರುಳೆನ್ನದೆ ಸ್ಫೋಟಕ ಜಿಲೆಟಿನ್ ಲಾರಿಗಟ್ಟಲೆ ಸಾಗಾಟವಾಗುತ್ತಿದ್ದರೂ ಅಧಿಕಾರಿಗಳು ಸುಮ್ಮನಿದ್ದಾರೆ. ಕೇಂದ್ರ ಗಣಿ ಮತ್ತು ಭೂವಿಜ್ಞಾನ ಮಂತ್ರಿ ಪ್ರಹ್ಲಾದ್ ಜೋಶಿಯೇ ಶಿವಮೊಗ್ಗದಲ್ಲಿ ಸ್ಫೋಟ ಆದಾಗ- “ಅಕ್ರಮ ಗಣಿಗಾರಿಕೆ ಮತ್ತು ಅಧಿಕಾರಿಗಳ ಮಧ್ಯೆ ಹೊಂದಾಣಿಕೆಯಿದೆ” ಎಂದು ಬಹಿರಂಗವಾಗೇ ಹೇಳಿದ್ದು ಕಪ್ಪು ಕ್ವಾರಿ ದಂಧೆ ಅಸಲಿಯತ್ತು ಸಾಬೀತು ಪಡಿಸುವಂತಿದೆ!!

ರಾಜ್ಯದಲ್ಲಿ ನಡೆಯುತ್ತಿರುವ ಅಷ್ಟೂ ಅಪಾಯಕಾರಿ ಅನಧಿಕೃತ ಮತ್ತು ಅಧಿಕೃತ ಕಲ್ಲು ಗಣಿಗಳ ಭೀಭತ್ಸತೆಯ ಸ್ಯಾಂಪಲ್‌ನಂತಿದೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲ್ಲೂಕಿನ ನಾಲ್ಕೂರು ಗ್ರಾಮದಲ್ಲಿ ಬಿಜೆಪಿ ಪ್ರಭಾವಿ ಶಾಸಕರೊಬ್ಬರ ಪರಮಾಪ್ತ ಬಂಟ ಅಕ್ರಮವಾಗಿ ನಡೆಸುತ್ತಿರುವ ಕಲ್ಲುಕ್ವಾರಿ ಕರ್ಮಕಾಂಡ! ಮಂದರ್ತಿ ಜಿಪಂ ಸದಸ್ಯ ಪ್ರತಾಪ್ ಹೆಗ್ಡೆ ಮತ್ತಾತನ ಸಹೋದರ ಪ್ರವೀಣ್ ಹೆಗಡೆ ಉಡುಪಿ ಶಾಸಕ ರಘುಪತಿ ಭಟ್ಟರ ಅಚ್ಚುಮೆಚ್ಚಿನ ಗೆಣೆಕಾರರು. ಪ್ರವೀಣ್ ಹೆಗಡೆ ಯುನಿಟಿ ರಾಕ್ ಇಂಡಸ್ಟ್ರೀಸ್ ಹೆಸರಿನ ಜಲ್ಲಿ ಕ್ರಶರ್ ಮತ್ತು ಕಲ್ಲುಕ್ವಾರಿ ಉದ್ಯಮ ಸಂಸ್ಥೆ ಸುಮಾರು 15 ಕೋಟಿ ರೂ ಬಂಡವಾಳದಲ್ಲಿ ಶುರು ಮಾಡಿದ್ದಾರೆ. ಇದನ್ನು ಮೊದಲು ರೆಸಾರ್ಟ್ ಉದ್ಯಮಿ ಜಾಯ್ ಆರಂಭಿಸಿದ್ದರು. ಅದಕ್ಕೆ ಹೆಗ್ಡೆ ಸಹೋದರರು ಸ್ಲೀಪಿಂಗ್ ಪಾರ್ಟ್‌ನರ್‌ಗಳಾಗಿದ್ದರು. ಈಚೆಗೆ ನಿಧನರಾದ ಅಂಡರ್ ವರ್ಲ್ಡ್ ಡಾನ್ ಒಬ್ಬನಿಂದ ಜಾಯ್‌ಗೆ ಬೆದರಿಕೆ ಬಂತೆಂದು ಹೇಳಲಾಗುತ್ತದೆ.

ಯುನಿಟಿ ರಾಕ್ ಇಂಡಸ್ಟ್ರೀಸ್‌ಗೆ ಲೀಸ್‌ನಲ್ಲಿ ಕೊಡಲಾಗಿರುವ ನಾಲ್ಕೂರು ಗ್ರಾಮದ ಸರ್ವೆ ನಂಬರ್ 27/7, 24/2, 24/8, 24/9ರಲ್ಲಿನ 1.97 ಎಕರೆ ಇಕೋ ಸೆನ್ಸಿಟಿವ್ ಝೋನ್‌ನಲ್ಲಿದೆ. ಈ ಬಗ್ಗೆ ದೂರು ಬಂದಾಗ ಅಂದಿನ ಹೆಬ್ರಿ ವಲಯದ ಅರಣ್ಯಾಧಿಕಾರಿ ಮುನಿರಾಜು ನಿಷ್ಠುರ ತನಿಖೆ ನಡೆಸಿ ಹೆಗ್ಡೆ ಬಂಧುಗಳ ರಾಕ್ ಇಂಡಸ್ಟ್ರಿಸ್ ಪರವಾನಗಿ ರದ್ದು ಮಾಡುವಂತೆ ವರದಿ ಕೊಟ್ಟಿದ್ದರು! ಅಷ್ಟೇ ಅಲ್ಲ, ಸರ್ವೆ ನಂಬರ್ 219/1ಪಿ1ರಲ್ಲೂ ಕ್ವಾರಿ ವ್ಯಾಪಿಸಿಕೊಂಡಿದ್ದು ಇದು ಡೀಮ್ಡ್ ಫಾರೆಸ್ಟ್‌ನಲ್ಲಿದೆ ಎಂದು ಆಕ್ಷೇಪಿಸಿದ್ದರು. ಸೋಮೇಶ್ವರ ವನ್ಯಜೀವಿ ವಲಯದ ತೆಂಕಹೊಲ ಮೀಸಲು ಅರಣ್ಯಕ್ಕೆ ಕೇವಲ 4.9 ಕಿ.ಮೀ ಅಂತರದಲ್ಲಿ ಕ್ವಾರಿಯಿರುವುದರಿಂದ ಹೆಗ್ಡೆಗಳು ನಡೆಸುತ್ತಿರುವ ಅಕ್ರಮ ಕ್ವಾರಿ ಸ್ಥಗಿತಗೊಳಿಸುವಂತೆ ವರದಿಯಲ್ಲಿ ಹೇಳಿದ್ದರು.

ಕ್ವಾರಿ ಧಣಿ ಅಧಿಕಾರಸ್ಥರ ಹತ್ತಿರದವನೆಂಬ ಕಾರಣಕ್ಕೆ ಖಡಕ್ ಮುನಿರಾಜು ನಂತರ ಬಂದ ಆರ್‌ಎಫ್‌ಓ ಸದ್ರಿ ಕಲ್ಲು ಗಣಿಗಾರಿಕೆಗೆ ಅವಕಾಶ ಕೊಟ್ಟು ಸುಮ್ಮನಿದ್ದಾರೆ. ಎರಡು ವರ್ಷದ ಹಿಂದೆ ಈ ಗಣಿಗಾರಿಕೆಯಲ್ಲಿ ಉತ್ತರ ಭಾರತದ ಕೂಲಿಯೊಬ್ಬ ನಿಗೂಢವಾಗಿ ಸತ್ತು ಬಿದ್ದಿದ್ದ. ಅದನ್ನು ಸಿಡಿಲು ಹೊಡೆತದಿಂದಾದ ಸಾವೆಂದು ಸಾರಲಾಗಿತ್ತು. ಮುಚ್ಚಿರುವ ಮಜುಬೂತ್ ಗೇಟಿನ ಒಳಗಿರುವ ಈ ಕ್ವಾರಿಯಲ್ಲಿ ನಿರಂತರವಾಗಿ ಜಿಲೆಟಿನ್ ಆಸ್ಫೋಟ ಆಗುತ್ತಿರುತ್ತದೆ. ಅಪಾರ ಸ್ಫೋಟಕ ಸಂಗ್ರಹ ಇಲ್ಲಿದೆಯೆನ್ನಲಾಗಿದೆ. ಪ್ರತಿದಿನ ಕಮ್ಮಿಯೆಂದರೂ 250 ಲಾರಿ ಲೋಡ್ ಜಲ್ಲಿಕಲ್ಲು ಈ ಕ್ವಾರಿಯಿಂದ ಆಚೀಚೆಯ ಜಿಲ್ಲೆಗಳಿಗೆ ಹೋಗುತ್ತದೆ! ಒಂದು ದಿನಕ್ಕೆ ಹತ್ತಿರಹತ್ತಿರ ಮುಕ್ಕಾಲು ಕೋಟಿ ಲೂಟಿಯಿದು!!

ಹೇಳೋರಿಲ್ಲ; ಕೇಳೋರಿಲ್ಲ! ನಿತ್ಯವೂ ಕಳ್ಳ ಕಲ್ಲುಗಣಿ ದೊರೆ ಬಳಗಕ್ಕೆ ಸುಗ್ಗಿಯೇ ಸುಗ್ಗಿ!!


ಇದನ್ನೂ ಓದಿ: ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...