Homeಕರ್ನಾಟಕ37 ವರ್ಷಗಳಿಂದ ಆಡಳಿತರೂಢಾ ಯಾವುದೇ ಸರ್ಕಾರ ರಾಜ್ಯದಲ್ಲಿ ಮರು ಆಯ್ಕೆಯಾಗಿಲ್ಲ; ಬಿಜೆಪಿ ಕಥೆ ಏನಾಗಲಿದೆ?

37 ವರ್ಷಗಳಿಂದ ಆಡಳಿತರೂಢಾ ಯಾವುದೇ ಸರ್ಕಾರ ರಾಜ್ಯದಲ್ಲಿ ಮರು ಆಯ್ಕೆಯಾಗಿಲ್ಲ; ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಏಪ್ರಿಲ್ – ಮೇ ವೇಳೆಗೆ ಕರ್ನಾಟಕದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. ವಿಶೇಷವೆಂದರೆ ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಆಡಳಿತರೂಢ ಪಕ್ಷದ ಸರ್ಕಾರವು ಮರು ಆಯ್ಕೆಯಾಗಿಲ್ಲ ಎಂಬುದು ಗಮನಾರ್ಹ ಸಂಗತಿ. ಹೀಗಾಗಿ ಈಗ ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಗೆಲುವು ಸಾಧಿಸಿ, ಅಧಿಕಾರಕ್ಕೆ ಮರಳುವುದೇ? ಅಥವಾ ಕರ್ನಾಟಕ ಜನತೆ ಸರ್ಕಾರ ಬದಲಿಸುವ ಪರಂಪರೆಯನ್ನು ಮುಂದುವರಿಸುತ್ತಾರೆಯೇ? ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

1985ನೇ ಇಸವಿಯೇ ಕೊನೆ, ನಂತರದ ಚುನಾವಣೆಯಲ್ಲಿ ಯಾವುದೇ ಸರ್ಕಾರ ಮರು ಆಯ್ಕೆಯಾಗಿದ್ದಿಲ್ಲ. ರಾಜ್ಯದ ಜನತೆ ಕಳೆದ 37 ವರ್ಷಗಳಿಂದ ವೈವಿಧ್ಯಮಯ ಫಲಿತಾಂಶವನ್ನು ನೀಡುತ್ತಾ ಬಂದಿದ್ದಾರೆ.

ಸತತ ಏಳು ಚುನಾವಣೆಗಳಲ್ಲಿಯೂ ಆಡಳಿತರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡಿವೆ. ಪರಿಣಾಮಕಾರಿಯಾಗಿ ಆಡಳಿತ ನಡೆಸಿದವರೂ ತಿರಸ್ಕರಿಸಲ್ಪಟ್ಟಿದ್ದಾರೆ. 1990ರ ದಶಕದಿಂದಲೂ ಮೂರು ಪ್ರಮುಖ ಪಕ್ಷಗಳು ಕಣದಲ್ಲಿದ್ದು, ಯಾವುದೇ ಪಕ್ಷವು ಸತತ ಬಹುಮತವನ್ನು ಪಡೆಯುವಲ್ಲಿ ವಿಫಲವಾಗುತ್ತಲೇ ಇವೆ.

ಮೂರು ಪಕ್ಷಗಳ ಮತಗಳು ಭೌಗೋಳಿಕವಾಗಿ ಹಂಚಿಹೋಗಿರುವಲ್ಲಿಯೂ ವ್ಯತ್ಯಾಸಗಳಿವೆ. ಕಾಂಗ್ರೆಸ್‌ಗೆ ರಾಜ್ಯಾದ್ಯಂತ ಮತದಾರರು ಗಣನೀಯವಾಗಿ ಇದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತಗಳು ಮುಖ್ಯವಾಗಿ ರಾಜ್ಯದ ಉತ್ತರ ಮತ್ತು ಮಧ್ಯ ಭಾಗದಲ್ಲಿನ ಜಿಲ್ಲೆಗಳಲ್ಲಿ ಕೇಂದ್ರೀಕೃತವಾಗಿವೆ. ಲಿಂಗಾಯತ ಸಮುದಾಯದ ಬೆಂಬಲವನ್ನು ಬಿಜೆಪಿ ಹೆಚ್ಚಿನ ಮಟ್ಟದಲ್ಲಿ ಪಡೆದಿದೆ. ಜನತಾ ದಳ-ಜಾತ್ಯತೀತ (ಜೆಡಿಎಸ್) ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿದೆ. ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಜೊತೆಯಲ್ಲಿ ಕೇಂದ್ರೀಕೃತವಾಗಿದ್ದಾರೆ. ಕಾಂಗ್ರೆಸ್ ಜೊತೆಯಲ್ಲಿ ಪರಿಶಿಷ್ಟ ಜಾತಿಗಳು, ಮುಸ್ಲಿಂ, ಒಬಿಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಗಳು ಗುರುತಿಸಿಕೊಂಡಿವೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವು ಹೆಚ್ಚು ಮತಗಳನ್ನು ಪಡೆದರೂ, ಇತರ ಪಕ್ಷಗಳು ಹೆಚ್ಚು ಸ್ಥಾನಗಳನ್ನು ಗೆಲ್ಲಲೂಬಹುದು. ಉದಾಹರಣೆಗೆ, 2004ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ 7% ಹೆಚ್ಚು ಮತಗಳನ್ನು ಗಳಿಸಿತು, ಆದರೆ ಬಿಜೆಪಿಯು ಕಾಂಗ್ರೆಸ್‌ ಪಕ್ಷಕ್ಕಿಂತ 14 ಹೆಚ್ಚಿನ ಸ್ಥಾನಗಳನ್ನು ಗೆದ್ದಿತ್ತು.

ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಶೇ. 14ರಿಂದ 17, ಒಕ್ಕಲಿಗರ ಸಂಖ್ಯೆ ಶೇ. 11-12, ಬ್ರಾಹ್ಮಣರು ಶೇ.3.5, ಒಬಿಸಿ ಶೇ. 23%, ಪರಿಶಿಷ್ಟ ಜಾತಿ (ದಲಿತರು) ಶೇ. 15ರಿಂದ 17, ಪರಿಶಿಷ್ಟ ಪಂಗಡ ಶೇ. 5- 7, ಮುಸ್ಲಿಮರ ಜನಸಂಖ್ಯೆ ಶೇ. 11- 16ರಷ್ಟಿದೆ ಎಂದು ಅಂಕಿಅಂಶಗಳು ಹೇಳುತ್ತವೆ.

ಬಲಾಢ್ಯ ಜಾತಿಗಳ ಪ್ರಾಬಲ್ಯವನ್ನು ಡಿ.ದೇವರಾಜ ಅರಸು (ಮುಖ್ಯಮಂತ್ರಿ, 1972-1980) ಅವರು ಮುರಿದಿದ್ದರು. ಲಿಂಗಾಯತರು ಮತ್ತು ಒಕ್ಕಲಿಗರನ್ನು ಬಿಟ್ಟು ಹೆಚ್ಚು ಸಂಖ್ಯೆಯಲ್ಲಿರುವ ಹಿಂದುಳಿದ ಜಾತಿಗಳನ್ನು ಸಂಘಟಿಸಿ ಚುನಾವಣಾ ನಿಯಮಗಳನ್ನು ಅರಸು ಬದಲಿಸಿದ್ದರು.

ಆದರೆ ಸಾಂಪ್ರದಾಯಿಕವಾಗಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದವರು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಪಡೆಯುತ್ತಾರೆ. ಈ ಸಮುದಾಯಗಳ ಸಂಖ್ಯಾ ಬಲಕ್ಕಿಂತ ಹೆಚ್ಚಿನ ರಾಜಕೀಯ ಸ್ಥಾನಮಾನ ಈ ಜಾತಿಗಳಿಗೆ ಇದೆ.

224 ವಿಧಾನಸಭಾ ಕ್ಷೇತ್ರಗಳು ಕರ್ನಾಟಕ ರಾಜ್ಯದಲ್ಲಿವೆ. 1983ರಲ್ಲಿ ಯಾವುದೇ ಪಕ್ಷ ಬಹುಮತ ಪಡೆದಿರಲಿಲ್ಲ. ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷವು 92 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಅವರು ಸರ್ಕಾರ ರಚಿಸಿದ್ದರು. ಆದರೆ ಬಿಜೆಪಿ ಪಕ್ಷದ ತೊಂದರೆಗಳಿಂದ ಬೇಸೆತ್ತು ಅವರು ಎರಡೇ ವರ್ಷಕ್ಕೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋದರು,

1985ರ ಅಸೆಂಬ್ಲಿ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷ 139 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಅಧಿಕಾರ ಹಿಡಿದಿತ್ತು. ಅದೇ ಕೊನೆ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದ ಪಕ್ಷವಾಗಿತ್ತು. ಕಾಂಗ್ರೆಸ್‌ ಆ ಚುನಾವಣೆಯಲ್ಲಿ 65 ಸ್ಥಾನಗಳನ್ನು ಪಡೆದಿತ್ತು. 1989ರಲ್ಲಿ ಮತ್ತೆ ಚುನಾವಣೆ ಎದುರಾಗಿ ವೀರೇಂದ್ರ ಪಾಟೀಲ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತು. 178 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಜನತಾ ದಳ 24 ಸ್ಥಾನಗಳಲ್ಲಿ ಗೆದ್ದಿತ್ತು.

ಬದಲಾದ ರಾಜಕೀಯ ಪರಿಸರದಲ್ಲಿ 1994ರಲ್ಲಿ ಎಚ್.ಡಿ.ದೇವೇಗೌಡ ಅವರ ನೇತೃತ್ವದ ಜನತಾ ದಳ 115 ಸ್ಥಾನಗಳನ್ನು ಪಡೆಯಿತು. ಬಿಜೆಪಿ 40 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್‌ ಕೇವಲ 34 ಸ್ಥಾನಗಳಿಗೆ ಕುಸಿಯಿತು. ಜನತಾ ದಳದ ನಾಯಕರಾಗಿದ್ದ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದರು.

1999ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದ ಕಾಂಗ್ರೆಸ್ 132 ಸ್ಥಾನಗಳನ್ನು ಪಡೆಯಿತು. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದರು. ಬಿಜೆಪಿ 44 ಸ್ಥಾನಗಳನ್ನು ಪಡೆದು, ಕಳೆದ ಚುನಾವಣೆಗಿಂತ 4 ಹೆಚ್ಚಿನ ಸ್ಥಾನಗಳನ್ನು ತನ್ನದಾಗಿಸಿಕೊಂಡಿತು. ಜನತಾ ದಳ ಒಡೆದು ಹೋಗಿ ‘ಜನತಾ ದಳ ಸೆಕ್ಯುಲರ್‌’ (ಜೆಡಿಎಸ್‌) ರಚನೆಯಾಗಿತ್ತು. ಈ ಚುನಾವಣೆಯಲ್ಲಿ ಜೆಡಿಎಸ್‌ 10 ಸ್ಥಾನಗಳನ್ನು ಪಡೆದಿತ್ತು.

2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿಲ್ಲ. 65 ಸೀಟ್‌ಗಳನ್ನು ಪಡೆದ ಕಾಂಗ್ರೆಸ್‌ 58 ಸೀಟ್‌ಗಳನ್ನು ಪಡೆದ ಜೆಡಿಎಸ್‌ನೊಂದಿಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿತು. ಜೆಡಿಎಸ್‌ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡು ಬಲವಾಯಿತು. ಧರಂಸಿಂಗ್‌ ಮುಖ್ಯಮಂತ್ರಿಯಾದರು. ಈ ಚುನಾವಣೆಯಲ್ಲಿ ಬಿಜೆಪಿ 79 ಸೀಟ್‌ಗಳನ್ನು ಗೆದ್ದಿತ್ತು.

2006ರಲ್ಲಿ ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯ ಯಡಿಯೂರಪ್ಪನವರೊಂದಿಗೆ 20-20 ತಿಂಗಳ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ನಿಂದ ಹೊರಬಂದು ಸರ್ಕಾರ ರಚಿಸಿದರು. ಆದರೆ 2008ರಲ್ಲಿ ಅಧಿಕಾರ ಬಿಟ್ಟುಕೊಡದ ಕಾರಣ ಸರ್ಕಾರ ಪತನವಾಯಿತು.

2008 ಚುನಾವಣೆಯಲ್ಲಿ ಮತ್ತೆ ಫಲಿತಾಂಶ ಏರುಪೇರಾಯಿತು. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ 110 ಸೀಟ್‌ಗಳನ್ನು ಗೆದ್ದಿತು. ಆಪರೇಷನ್‌ ಕಮಲ ಮಾಡಿದ ಯಡಿಯೂರಪ್ಪನವರು ಮುಖ್ಯಯಾದರು. ಆ ವೇಳೆಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿದ್ದರು.

2013ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ 122 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯಿತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರು. ಜೆಡಿಎಸ್‌ 40 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು. ಬಿಜೆಪಿ 40 ಸ್ಥಾನಗಳಿಗೆ ಕುಸಿಯಿತು. ಆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯವೆದ್ದಿದ್ದ ಬಿ.ಎಸ್.ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು, ಬಿಜೆಪಿಗೆ ಭಾರೀ ಹೊಡೆತ ನೀಡಿತು.

2013ರ ಚುನಾವಣಾ ಫಲಿತಾಂಶದಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತೆ ಯಡಿಯೂರಪ್ಪನವರನ್ನು ಬಿಜೆಪಿಗೆ ಕರೆತಂದರು. 2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತು. ಹೆಚ್ಚು ಸ್ಥಾನ ಗಳಿಸಿದ್ದರಿಂದ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದರು. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದರು.

80 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್, 37 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಜೊತೆಯಲ್ಲಿ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿತು. ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾದರು. ಆದರೆ 2019 ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿತು. ಈ ವೇಳೆಗೆ ನಡೆದ ಆಪರೇಷನ್‌ ಕಮಲದಲ್ಲಿ 17 ಶಾಸಕರು ಸರ್ಕಾರ ಉರುಳಲು ಕಾರಣವಾದರು. ರಾಜಕೀಯ ಚದುರಂಗದಾಟದಲ್ಲಿ ಬಿ.ಎಸ್.ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾದರು. ಈಗ ಯಡಿಯೂರಪ್ಪನವರನ್ನು ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲು ರಾಜ್ಯದಲ್ಲಿ ಸಾಧ್ಯವಾಗಿಲ್ಲ. ಇದು ಕರ್ನಾಟಕದ ವೈಶಿಷ್ಟ್ಯತೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ತಾವು ಯಾವ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇವೆಂದು ಹೇಳುವುದಕ್ಕಿಂತ, ಸಿದ್ದರಾಮಯ್ಯನವರನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿರುವುದೇ ರಾರಾಜಿಸುತ್ತಿದೆ.

ಶೇ. 40 ಕಮಿಷನ್ ಆರೋಪವನ್ನು ಈ ಸರ್ಕಾರ ಎದುರಿಸುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯವು ಒಂದಲ್ಲ ಒಂದು ಕೋಮು ಕೇಂದ್ರಿತ ವಿವಾದಗಳಲ್ಲಿ ಸಿಲುಕಿದೆ. ಅಭಿವೃದ್ಧಿಗಿಂತ ಹಿಂದುತ್ವವನ್ನು ಮುಂದು ಮಾಡಿ ಕೋಮು ನೆಲೆಯಲ್ಲಿ ರಾಜಕೀಯ ಧ್ರುವೀಕರಣಕ್ಕೆ ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಯಾವತ್ತೂ ಆಗದಷ್ಟು ಕೋಮು ಪ್ರಚೋದಿತ ಘಟನೆಗಳು ಇಲ್ಲಿ ಘಟಿಸುತ್ತಿವೆ. ಮತೀಯ ಗೂಂಡಾಗಿರಿ, ಹಿಜಾಬ್ ವಿವಾದ, ಹಲಾಲ್‌ ಕಟ್‌, ಜಟ್ಕಾ ಕಟ್‌, ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳ ಬಳಿ ಅವಕಾಶ ನೀಡಲ್ಲ ಎನ್ನುವುದು- ಇವೆಲ್ಲವೂ ಮುಂದಿನ ಚುನಾವಣೆಯಲ್ಲಿ ಯಾವ ಪರಿಣಾಮಗಳನ್ನು ಬೀರುತ್ತವೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...