ರಾಜ್ಯ ಸರ್ಕಾರಿ ನೌಕರರ ಸಂಘ 7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇಂದಿನಿಂದ ರಾಜ್ಯಾದ್ಯಾಂದ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ (ಫೆ28)ದಂದು ರಾಜ್ಯ ಸರ್ಕಾರಿ ನೌಕರರ ಜೊತೆ ನಡೆಸಿದ ಸಭೆ ವಿಫಲವಾಗಿದೆ. ಹಾಗಾಗಿ ರಾಜ್ಯದಲ್ಲಿ ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್ ಆಗುವ ಸಾಧ್ಯತೆಗಳಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ”ಸಭೆಯಲ್ಲಿ ಬೇಡಿಕೆ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ, ಭರವಸೆ ನೀಡಿದ್ದಾರೆ, ಹಾಗಂತ ನಾವು ಅದನ್ನು ಒಪ್ಪಿಕೊಂಡು ಮುಷ್ಕರ ಕೈಬಿಡುವ ಪ್ರಶ್ನೆ ಇಲ್ಲ. ಆದರೆ ನಾವು ಈಗ ಸಂಘದ ಪದಾಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸುತ್ತೇವೆ. ಈ ಸಭೆಯಲ್ಲಿ ಕೈಗೊಳ್ಳುವ ನಿರ್ಧಾರದ ಬಗ್ಗೆ ಸಿಎಂ ಗಮನಕ್ಕೆ ತಂದು, ಆನಂತರ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ ಎಂದರು. ಸಿಎಂ ಜೊತೆಗಿನ ಸಭೆ ಸಫಲವೂ ಆಗಿಲ್ಲ, ವಿಫಲವೂ ಆಗಿಲ್ಲ. ಸರ್ಕಾರದ ಜತೆ ಯಾವುದೇ ಸಂಘರ್ಷವೂ ಇಲ್ಲ. ಆದರೆ ಬೇಡಿಕೆ ಈಡೇರುವವರೆ ಮಾತ್ರ ಮುಷ್ಕರ ನಡೆಸಲಾಗುವುದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಇಷ್ಟು ದಿನ ಬರೀ ಭರವಸೆ ಕೊಡುವ ಕೆಲಸವನ್ನು ಮುಂದುವರೆಸಿತ್ತು, ಈಗಲೂ ಅದೇ ಛಾಳಿಯನ್ನು ಮುಂದುವರೆಸಿದೆ. ಆದರೆ ಇದರಿಂದ ಬೇಸತ್ತ ಸರ್ಕಾರಿ ನೌಕರರು ಭರವಸೆಗಳಿಗೆ ಬಗ್ಗದೇ, ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇಂದು ರಾಜ್ಯ ಎಲ್ಲಾ ಸರ್ಕಾರಿ ಇಲಾಖೆಗಳು ಏಕಕಾಲದಲ್ಲಿ ಬಂದ್ ಆಗಲಿವೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಪೌರ ಕಾರ್ಮಿಕರು ಸೇರಿ ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಸುಮಾರು 40 ಸಂಘಗಳು ಮುಷ್ಕರಕ್ಕೆ ಬೆಂಬಲ ನೀಡುತ್ತೀವೆ.
ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ
ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸೇರಿದಂತೆ ಇತರೆ ಇಲಾಖೆಗಳ ನೌಕರರ ಸಂಘ ಸಹ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಇದರಿಂದ ಸುಮಾರು 10 ಲಕ್ಷ ಸರ್ಕಾರಿ ನೌಕರರರಿಂದ ಮುಷ್ಕರದಲ್ಲಿ ಭಾಗಿಯಾಗಲಿದ್ದು, ಜನಸಾಮಾನ್ಯರಿಗೆ ಸರ್ಕಾರಿ ಸೇವೆಗಳು ಲಭ್ಯವಿರುವುದಿಲ್ಲ. ಇದು ಒಂದು ರೀತಿಯಲ್ಲಿ ಕರ್ನಾಟಕ ಬಂದ್ ಎಂದೇ ಹೇಳಬಹುದಾಗಿದೆ.
ಈ ಬಗ್ಗೆ ಮಾತನಾಡಿರುವ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ”ಇಂದು ಓಪಿಡಿ ಸೇರಿದಂತೆ ಉಳಿದ ಸೇವೆಗಳು ಇರುವುದಿಲ್ಲ. ಆಸ್ಪತ್ರೆಯಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ. ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಸೇವೆಗೆ ಹಾಜರಾಗುತ್ತಾರೆ. ಆದರೆ ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪ್ರಾಥಮಿಕ ಆರೋಗ್ಯ ಕೇಂದ್ರ, 19 ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಓಪಿಡಿ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳ ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸಹ ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದಾರೆ. ಹಾಗಾಗಿ ರಾಜ್ಯದ ಎಲ್ಲಾ ಶಿಕ್ಷಕರು ಕೂಡ ಮುಷ್ಕರದಲ್ಲಿ ಭಾಗಿಯಾಗಲಿದ್ದು, ತರಗತಿಗಳು ನಡೆಯುವುದಿಲ್ಲ. ಇದೇ ತಿಂಗಳು (ಮಾರ್ಚ್) ಮಕ್ಕಳಿಗೆ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕ ಶುರುವಾಗಿದೆ. ಆದರೆ ಸರ್ಕಾರ ಮಾತ್ರ ಈ ಬಗ್ಗೆ ಯೋಚನೆ ಮಾಡುತ್ತಿಲ್ಲ ಎಂದೆನಿಸುತ್ತದೆ.
ರಾಜ್ಯ ಸರ್ಕಾರಿ ನೌಕರರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ(ಫೆ.28) ಮಧ್ಯರಾತ್ರಿ 2.30ರ ವರೆಗೂ ಸಭೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಬೊಮ್ಮಾಯಿ ಇಂದು (ಮಾ.1) ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆ ಇದೆ.