ಹಲವು ನಾಯಕರ ಗೈರು ಹಾಜರಿ ಕಾರಣ ದೆಹಲಿಯಲ್ಲಿ ನಾಳೆ (ಬುಧವಾರ) ನಡೆಯಬೇಕಿದ್ದ ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಪ್ರಕಟಿಸಿಲ್ಲ.
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗಳ ಪೈಕಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಸೋಲು ಕಂಡ ಬೆನ್ನಲ್ಲೇ ಸಭೆ ಕರೆಯಲಾಗಿತ್ತು. ಆದರೆ, ಒಕ್ಕೂಟದ ಪ್ರಮುಖ ನಾಯಕರಾದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ ಹಿನ್ನೆಲೆ ಮುಂದೂಡಿಕೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.
ನಿತೀಶ್ ಕುಮಾರ್ ಮತ್ತು ಅಖಿಲೇಶ್ ಯಾದವ್ ಬೇರೆ ಕಾರ್ಯಕ್ರಮ ನಿಮಿತ್ತ ಸಭೆಗೆ ಗೈರಾಗುವುದಾಗಿ ತಿಳಿಸಿದ್ದಾರೆ. ಆದರೆ, ಮಮತಾ ಬ್ಯಾನರ್ಜಿ ಸಭೆಯ ಬಗ್ಗೆ ನನಗೆ ಮಾಹಿತಿಯೇ ಇಲ್ಲ ಎಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇಂಡಿಯಾ ಒಕ್ಕೂಟದಲ್ಲಿ ಬಿರುಕು ಮೂಡಿದೆಯಾ? ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಇದಕ್ಕೆ ಪುಷ್ಠಿ ನೀಡುವಂತೆ, ಎಲ್ಲವೂ ಕಾಂಗ್ರೆಸ್ ಹೇಳಿದಂತೆ ಕೇಳಲು ಆಗುವುದಿಲ್ಲ. ಅವರೂ ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇಂಡಿಯಾ ಟುಡೇ ವರದಿ ಮಾಡಿರುವಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟದ ಸಭೆಗೆ ಗೈರು ಹಾಜರಾದರೂ, ತನ್ನ ಬದಲಾಗಿ, ಜೆಡಿಯು ಮುಖ್ಯಸ್ಥ ಲಾಲನ್ ಸಿಂಗ್ ಮತ್ತು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಝಾ ಅವರನ್ನು ಸಭೆಗೆ ಕಳಿಸಲು ತೀರ್ಮಾನಿಸಿದ್ದರು.
ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಸಭೆಯಲ್ಲಿ ಪಾಲ್ಗೊಳ್ಳಲು ಸಿದ್ದರಿದ್ದರೂ, ಅವರ ರಾಜ್ಯದಲ್ಲಿ ಮಿಚಾಂಗ್ ಚಂಡಮಾರುತದ ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ, ಭಾರೀ ಮಳೆಯಿಂದ ಸ್ಟಾಲಿನ್ ವಿಮಾನ, ಹೆಲಿಕಾಫ್ಟರ್ ಮೂಲಕ ಹಾರಾಟ ನಡೆಸುವುದು ಅಸಾಧ್ಯವಾಗಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಇಂಡಿಯಾ ಒಕ್ಕೂಟದ ಮೂರನೇ ಸಭೆ ಮುಂಬೈನಲ್ಲಿ ನಡೆದಿತ್ತು. ಇದಾಗಿ ಸುಮಾರು ಮೂರು ತಿಂಗಳ ಬಳಿಕ ನಾಲ್ಕನೇ ಸಭೆ ಕರೆಯಲಾಗಿತ್ತು. ಅದು ವಿಫಲವಾಗಿದೆ.
ಇದನ್ನೂ ಓದಿ: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ