Homeಕರ್ನಾಟಕಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

ಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

- Advertisement -
- Advertisement -

|ತುಂಟ |

ಅದು ಕಂಠೀರವ ಸ್ಟೂಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿ. ರಾತ್ರಿ ಹನ್ನೆರಡೂವರೆ ಒಂದು ಗಂಟೆ ಸಮಯವಿರಬಹುದು. ಬಿಳಿ ಪಂಚೆ, ಬಿಳಿ ಶರ್ಟು ಹಾಕಿದ, ತಲೆಗೆ ಮಫ್ಲರಿನಂತೆ ಟವೆಲ್ ಸುತ್ತಿಕೊಂಡ  ವಯಸ್ಸಾದ ಹಿರಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಸಮಾಧಿ ಮುಂದೆ ನಿಂತು ಸಣ್ಣಗೆ ಕಣ್ಣೀರು ಮಿಡಿಯುತ್ತಿದ್ದರು. ಕುತೂಹಲಗೊಂಡು ಹತ್ತಿರ ಹೋಗಿ ನೋಡಿದೆ. ಏನಾಶ್ಚರ್ಯ, ಅದು ನಮ್ಮ ಮಾಜಿ ಪ್ರಧಾನಿ ದೇವೇಗೌಡರು!

ಆ ಭಾವನಾತ್ಮಕ ವಾತಾವರಣ ಕದಡಲು ಇಷ್ಟವಾಗಲಿಲ್ಲ. ಸದ್ದು ಮಾಡದೆ, ದೇವೇಗೌಡರ ಪಕ್ಕಕ್ಕೆ ಹೋಗಿ ನಿಂತೆ. ನನ್ನತ್ತ ತಿರುಗಿ ನೋಡಿದ ಗೌಡರ ಕಣ್ಣುಗಳಲ್ಲಿ ಆ ಕ್ಷಣಕ್ಕೆ ಕಿಂಚಿತ್ತೂ ಕಪಟತೆ ಇರಲಿಲ್ಲ. ಮತ್ತೆ ಸಮಾಧಿಯತ್ತ ತಿರುಗಿದ ಅವರು ಅಂಬಿ ಸಮಾಧಿ ಜೊತೆ ಮಾತು ಮುಂದುವರೆಸಿದರು,

“ಅಂಬಿ, ನೀನು ನನ್ನ ಪಕ್ಷದಲ್ಲಿ ಇರಲಿ, ಇಲ್ಲದಿರಲಿ ಯಾವತ್ತೂ ನೀನು ನನ್ನ ಹುಡುಗನಾಗಿದ್ದೆ. ಅದೇ ಒರಟು ಭಾಷೆಯ, ಬೆಣ್ಣೆ ಹೃದಯದ ಹುಡುಗ. ನೀನು ಇಷ್ಟು ಬೇಗ ನಮ್ಮನ್ನೆಲ್ಲ ಅಗಲಿ ಹೋಗುತ್ತೀಯ ಅಂದುಕೊಂಡಿರಲಿಲ್ಲ. ನನ್ನ ಕಣ್ಣಮುಂದೆ ಆಡಿ ಬೆಳೆದ, ಸಿನಿಮಾ ಮಾಡಿದ ಹುಡುಗ ಕೊನೆಗೆ ನನ್ನ ಕಣ್ಣ ಮುಂದೆಯೇ ಅಗಲಿಹೋದದ್ದನ್ನು ನೆನೆಸಿಕೊಂಡರೆ ದುಃಖ ಉಕ್ಕಿ ಬರುತ್ತೆ. ನಿನ್ನ ಇಪ್ಪತ್ತೆರಡನೇ ವಯಸ್ಸಲ್ಲಿ ಮೊದಲ ಸಿನಿಮಾ ಮಾಡುವ ಹುಮ್ಮಸ್ಸಿನಲ್ಲಿ ನೀನಿದ್ದಾಗ ನಾನಾಗಲೇ ಎಂಎಲ್ಎ ಆಗಿ ಹತ್ತು ವರ್ಷ ಕಳೆದಿದ್ದೆ. ನನಗಿನ್ನೂ ಚೆನ್ನಾಗಿ ನೆನಪಿದೆ, ನಿನ್ನ ನಾಗರಹಾವು ಸಿನಿಮಾ ರಿಲೀಸ್ ಆದಾಗ ಅದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಾನು ಸಿನಿಮಾ ನೋಡಿ, ಈ ನಮ್ಮ ಮಂಡ್ಯದ  ಹುಡುಗ ಮುಂದೊಂದು ದಿನ ದೊಡ್ಡ ಸ್ಟಾರ್ ಆಗಿ ಬೆಳೆಯುತ್ತಾನೆ ನೋಡ್ತಾ ಇರಿ ಎಂದು ಎಲ್ಲರೆದುರು ಹೆಮ್ಮೆಯಿಂದ ಹೇಳಿಕೊಂಡು ತಿರುಗಾಡಿದ್ದೆ. ನನ್ನ ಮಾತು ಸುಳ್ಳಾಗಲಿಲ್ಲ. ನೀನು ನಿಜಕ್ಕೂ ಕರ್ಣನಂತವನು ಕಣಪ್ಪಾ…”

ಕ್ಷಣಕಾಲ ಮೌನಕ್ಕೆ ಶರಣಾದ ಗೌಡರು, ಮತ್ತೆ ನನ್ನತ್ತ ತಿರುಗಿ ನೋಡಿದರು. ಕಣ್ಣೀರಿನ ಪ್ರಮಾಣ ಕೊಂಚ ತಗ್ಗಿದಂತೆ ಕಾಣಿಸಿತು. ಬಹುಶಃ ಹೊರಟುಹೋಗುತ್ತಾರೇನೊ ಅಂತ ಭಾವಿಸಿದೆ. ಆದರೆ, ಮತ್ತೆ ಸಮಾಧಿಯತ್ತ ತಿರುಗಿದರು. ಈ ಮೊದಲು ಮೆದುವಾಗಿದ್ದ ಅವರ ದನಿಯಿಂದ ತುಸು ಬಿಗಿಯಾದ ಮಾತುಗಳು ತೇಲಿಬಂದವು. “ಈ ಸಲ ನೀನು ಮತ್ತೆ ಕಾಂಗ್ರೆಸ್ ಮೇಲೆ ಮುನಿಸಿಕೊಂಡೆ. ನನ್ನ ಹುಡುಗನ ಗುಣ ಎಂತದ್ದು ಅಂತ ಗೊತ್ತಿದ್ದರಿಂದ ನಾನು ಮತ್ತೆ ನಿನ್ನನ್ನು ಹತ್ತಿರಕ್ಕೆ ಸೆಳೆದುಕೊಂಡೆ. ಅದಕ್ಕೇ ಅಲ್ಲವೇ, ಕಾಂಗ್ರೆಸ್ ಮೇಲೆ ಬೇಸರಿಸಿಕೊಂಡ ನಿನ್ನನ್ನು ನಾನೇ ಸಂತೈಸಿ ನಮ್ಮ ಬೀಗ ತಮ್ಮಣ್ಣನ ಕಾರಿನಲ್ಲಿ ಮತದಾನ ಮಾಡಲು ಕಳಿಸಿದ್ದು. ನನ್ನ ಲೆಕ್ಕಾಚಾರ ಸರಿ ಇದ್ದಿದ್ದರೆ, ನಿನ್ನನ್ನ ಈ ಸಲ ಮಂಡ್ಯದ ಪಾರ್ಲಿಮೆಂಟ್ ಚುನಾವಣೆಗೆ ನನ್ನ ಪಾರ್ಟಿಯಿಂದ ನಿಲ್ಲಿಸೋಣ ಅಂದುಕೊಂಡಿದ್ದೆ. ಆದರೆ ವಿಧಿಯಾಟ, ನೀನೇ ನಮ್ಮನ್ನೆಲ್ಲ ಬಿಟ್ಟು ಹೋದೆ”. ಮತ್ತೆ ದೇವೇಗೌಡರ ಕಣ್ಣುಗಳು ನೀರಾಡಿದವು.

ಟವೆಲ್ಲಿನಿಂದ ಕಣ್ಣೊರೆಸಿಕೊಂಡ ಅವರು ಕ್ಷಣ ತಡೆದು ಇನ್ನಷ್ಟು ನಿಖರವಾಗಿ ಮಾತು ಮುಂದುವರೆಸಿದರು, “ನೀನು ಅಗಲಿದ ನೋವು ನಮ್ಮನ್ನೆಲ್ಲ ತುಂಬಾ ಕಾಡಿತು. ಕುಮಾರಸ್ವಾಮಿಯವರಂತೂ ಹಾರ್ಟ್ ಪೇಶೆಂಟಾಗಿದ್ದ್ರೂ ಒಡಹುಟ್ಟಿದ ಸೋದರನಂತೆ ಮುಂದೆ ನಿಂತು ಅಂತ್ಯಸಂಸ್ಕಾರ ಮಾಡಿದರು. ನನಗಂತೂ ಮೊಮ್ಮಗ ನಿಖಿಲ್ ರವರ ಮುಖದಲ್ಲಿ ನೀನೇ ಎದ್ದು ಬಂದಂತಾಗುತ್ತಿತ್ತು. ಅವರೂ ನಿನ್ನಂತೆಯೇ ಸಿನಿಮಾ ಸ್ಟಾರು. ನಿಖಿಲ್ ರವರನ್ನು ನೋಡಿದಾಗಲೆಲ್ಲ ನಿನ್ನದೇ ನೆನಪಾಗುತ್ತಿತ್ತು. ಅದಕ್ಕೆ ಅವತ್ತೇ ಡಿಸೈಡ್ ಮಾಡಿದೆ, ನೀನು ಪ್ರತಿನಿಧಿಸುತ್ತಿದ್ದ ಮಂಡ್ಯದಲ್ಲೇ ಅವರನ್ನು ಎಲೆಕ್ಷನ್ನಿಗೆ ನಿಲ್ಲಿಸಿ, ಅಂಬಿ ಇಲ್ಲದ ಕೊರಗು ನೀಗಿಕೊಳ್ಳೋಣ ಅಂತ!”.

ದೇವೇಗೌಡರ ಮಾತು ಕೇಳಿ ನನಗೆ ಶಾಕ್ ಆಯ್ತು! ಹಾಗಾದ್ರೆ, ನಿಖಿಲ್ ನನ್ನು ಮಂಡ್ಯದ ಚಕ್ರವ್ಯೂಹದೊಳಕ್ಕೆ ತಳ್ಳಿದ್ದು ಕುಟುಂಬ ರಾಜಕಾರಣದ ವಿಸ್ತರಣೆಯ ಭಾಗವಾಗಿ ಅಲ್ಲ, ಅಂಬಿ ಇಲ್ಲದ ಕೊರಗನ್ನು ನಿಖಿಲ್ ಮೂಲಕ ತುಂಬಲು..!!!! ಅಯ್ಯಯ್ಯೋ ಇಂಥಾ ಪುಣ್ಯಾತ್ಮನನ್ನ ತಪ್ಪಾಗಿ ತಿಳಿದುಬಿಟ್ಟಿದ್ದೆನ್ನಲ್ಲಾ ಅಂತ ವಿಪರೀತ ಸಂಕಟವಾಯ್ತು. ಜೊತೆಗೆ ದೇವೇಗೌಡರ ಮೇಲೆ ಗೌರವವೂ ಹೆಚ್ಚಾಯ್ತು. ಅಷ್ಟರೊಳಗೆ ಮತ್ತೆ ದೇವೇಗೌಡರ ಮಾತುಗಳು ಶುರುವಾಗಿದ್ದವು, “ಆದ್ರೆ ಇದನ್ನು ನನ್ನ ಮಗಳು ಸುಮಲತಾ ಅರ್ಥಾನೆ ಮಾಡಿಕೊಳ್ಳಲಿಲ್ಲ. ಪಾಪಾ, ಆಕೆಯಾದ್ರು ಏನು ಮಾಡುವಳು. ಸುತ್ತವರೆದಿರುವ ಮೀರ್ ಸಾದಿಕ್.ಗಳ ಮಾತು ಕೇಳಿ ಹಾಗೆ ಮಾಡ್ತಿದಾಳೆ. ನನಗಂತೂ ಸುಮಲತಾ ಮೇಲೆ ಸ್ವಲ್ಪವೂ ಬೇಸರವಿಲ್ಲ. ನನ್ನ ಮಕ್ಕಳಾದ ಕುಮಾರಸ್ವಾಮಿಯವರು ಮತ್ತು ರೇವಣ್ಣನವರ ಮೇಲಿಗಿಂತ ಜಾಸ್ತಿ ಪ್ರೀತಿ ಇದೆ. ಆದರೆ ನಿನಗೇ ಗೊತ್ತಲ್ಲವಾ ಈ ಹಾಳಾದ ರಾಜಕಾರಣದಲ್ಲಿ ಅದನ್ನೆಲ್ಲ ತೋರಿಸಿಕೊಳ್ಳಲು ಆಗುತ್ತಿಲ್ಲ. ಒಂದಲ್ಲ ಒಂದು ದಿನ  ಅರ್ಥವಾಗುತ್ತೆ. ಒಂದಂತೂ ಸತ್ಯ, ನನ್ನ ಮಗ ರೇವಣ್ಣನವರು ಅದ್ಯಾವುದೋ ಆತುರದಲ್ಲಿ ಆ ಮಗಳು ಸುಮಲತಾಗೆ ‘ಗಂಡ ಸತ್ತು ಆರು ತಿಂಗಳು ಕಳೆದಿಲ್ಲ, ಅಷ್ಟರಲ್ಲೇ ರಾಜಕೀಯ ಬೇಕಿತ್ತಾ?’ ಅಂತ ಕೇಳಿದ್ದು ನನಗೆ ತುಂಬಾನೇ ದುಃಖ ಉಂಟುಮಾಡಿದೆ. ಅದಕ್ಕೆ ನಾನೇ ಖುದ್ದಾಗಿ ಕಿವಿಹಿಂಡಿ ಬುದ್ದಿ ಹೇಳಿದೆ ನಮ್ಮ ಪಾರ್ಟಿ ಪ್ರೆಸಿಡೆಂಟು ಎಚ್.ವಿಶ್ವನಾಥರದ್ದು, ಕೊನೆಗೆ ಅವರಿಂದಲೇ ರೇವಣ್ಣನವರ ಪರವಾಗಿ ಕ್ಷಮೆಯನ್ನೂ ಕೇಳಿಸಿದ್ದೇನೆ”.

ನನಗೇ ಗೊತ್ತಿಲ್ಲದೆ ಈಗ ನನ್ನ ಕಣ್ಣಾಲಿಗಳಲ್ಲೂ ನೀರು ಜಿನುಗ ತೊಡಗಿದವು. ದೇವೇಗೌಡರ ಮಮಕಾರ ಕಂಡು ಕರಗಿಹೋದೆ.  ದೇವೇಗೌಡರು ಈಗ ಶಪಥಗೈಯ್ಯುವ ದನಿಯಲ್ಲಿ ಹೂಂಕರಿಸಿದರು, “ಇಲ್ಲಾ ಅಂಬಿ, ನಿನಗಿಂತ ನನ್ನ ಮೊಮ್ಮಗನ ಎಲೆಕ್ಷನ್ ದೊಡ್ಡದಲ್ಲ. ಅದಕ್ಕಿಂತಲೂ ಮುಖ್ಯವಾಗಿ, ಎಷ್ಟೇ ಬಾರಿ ಪಕ್ಷಾಂತರ ಮಾಡಿದರು ಕಾಂಗ್ರೆಸ್-ಜನತಾದಳ ನಡುವೆ ಓಡಾಡಿದೆಯೇ ವಿನಾಃ ಆ ಕೋಮುವಾದಿ ಬಿಜೆಪಿಯತ್ತ ತಲೆ ಹಾಕದ ನಿನ್ನ ಸಿದ್ಧಾಂತ ಕಾಯುವುದು ನನ್ನ ಧರ್ಮ ಅನ್ನಿಸುತ್ತಿದೆ. ಇವತ್ತು ಅದೇ ಬಿಜೆಪಿಯವರು ಮಗಳು ಸುಮಲತಾಗೆ ಬೆಂಬಲ ನೀಡುವ ನೆಪದಲ್ಲಿ ತಮ್ಮ ಕೈಗೊಂಬೆ ಮಾಡಲು ಯತ್ನಿಸುತ್ತಿದ್ದಾರೆ. ಅವರ ಆ ಆಸೆ ಈಡೇರಲು ನಾನು ಬಿಡುವುದಿಲ್ಲ. ನಿನ್ನ ಆತ್ಮ ಪರಿತಪಿಸುವುದನ್ನು ನಾನು ನೋಡಲಾರೆ. ಅದಕ್ಕೇ ಇವತ್ತು ರಾಜಾರೋಷವಾಗಿ ಜನರ ಮುಂದೆ ಘೋಷಿಸಿದ್ದೇನೆ ‘ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮುಗಿಸಿಯೇ ನಾನು ಹೋಗೋದು’ ಅಂತ. ಅದರ ಮೊದಲ ಹೆಜ್ಜೆಯನ್ನು ನಿನ್ನ ಪ್ರೀತಿಯ ಮಂಡ್ಯದಿಂದಲೇ ಶುರು ಮಾಡ್ತೀನಿ ಅಂಬಿ. ನನ್ನ ಮೊಮ್ಮಗನ ನಾಮಪತ್ರವನ್ನ ವಾಪಾಸು ಪಡೆದು, ಮಗಳು ಸುಮಲತಾ ಅವಿರೋಧವಾಗಿ ಆಯ್ಕೆ ಆಗುವಂತೆ ಮಾಡುತ್ತೇನೆ. ಕೋಮುವಾದಿ ಬಿಜೆಪಿಗಳಿಗೆ ಇಲ್ಲಿಂದಲೇ ಶಾಕ್ ಟ್ರೀಟ್ ಮೆಂಟ್ ಶುರು ಮಾಡ್ತೀನಿ. ಮಂಡ್ಯದಂತಹ ಹೊಸ ಜಾಗದಲ್ಲಿ ಬಿಜೆಪಿ ಬೇರೂರಲು ಬಿಡುವುದಿಲ್ಲ. ಇದು ನನ್ನ ಶಪಥ!”

ಗೌಡರ ಶಪಥ ಕೇಳಿ ನನ್ನ ಮೈ ರೋಮಗಳೆಲ್ಲ ಎದ್ದು ನಿಂತವು, ಎದೆ ಬಡಿತ ಅಂಕೆಗೇ  ಸಿಗದಷ್ಟು ಡಬಗುಟ್ಟಲು ಶುರುವಾಯ್ತು, ಮೈಯಲ್ಲೆಲ್ಲ ಬೆವರು ಬಸಿಯತೊಡಗಿತು. ಕಣ್ಮುಚ್ಚಿ, ಜೋರಾಗಿ ಉಸಿರು ಒಳಗೆಳೆದುಕೊಂಡು, ದೇವೇಗೌಡರಿಗೆ ಗಟ್ಟಿಯಾಗಿ ಜೈಕಾರ ಕೂಗಲು ಶುರು ಮಾಡಿದೆ.

ಛಟೀರ್…!

ಕೆನ್ನೆಯ ಮೇಲೆ ಏಟೊಂದು ಬಿತ್ತು. ರಾತ್ರಿ ಮಲಗಿದ ಹಾಸಿಗೆಯಲ್ಲೇ ನಾನಿದ್ದೆ. ಪಕ್ಕದಲ್ಲಿ ಹೆಂಡತಿ ಗೊಣಗುತ್ತಾ ಕೂತಿದ್ದಳು “ಹಗಲೆಲ್ಲ ಕೆಲ್ಸ ಮಾಡಿ ಸುಸ್ತಾಗಿ ರಾತ್ರಿ ನೆಮ್ದಿಯಿಂದ ಮಲಗೋಣ ಅಂದ್ರೆ, ದರಿದ್ರ, ನಿಮ್ಮದೊಂದು ಕಾಟ ನಮಿಗೆ. ನಿಮ್ ಜರ್ನಲಿಸ್ಟ್ ಬುದ್ದೀನ ಅಲ್ಲೇ ಆಫೀಸ್ನಲ್ಲಿ ಬಿಟ್ಟು ಬರೋಕೆ ಆಗಲ್ವಾ. ಹೀಗೆ ಕನಸ್ನಲ್ಲೂ ಕನವರಿಸ್ಕೊಂಡು ಯಾಕ್ರೀ ಪ್ರಾಣ ತಿಂತೀರಾ….?”

“ಹ್ಞಾಂ……!!!!”

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...