ಸಾಮಾಜಿಕ ಮಾಧ್ಯಮಗಳಲ್ಲಿ ರೈತರು ಮತ್ತು ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಣಾವತ್ ಇಂದು ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದತೆ ಸಮಿತಿ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಸಮಯ ಕೋರಿರುವ ನಟಿ ಪ್ಯಾನಲ್ ಮುಂದೆ ಹಾಜರಾಗದ ಕಾರಣ ಸಭೆ ರದ್ದಾಗಿದೆ.
ಕಂಗನಾರವರು ಸಿಖ್ಖರನ್ನು ಖಲಿಸ್ತಾನಿ ಭಯೋತ್ಪಾದಕರು ಎಂದು ಕರೆಯುವ ಮೂಲಕ ಇಡೀ ಸಿಖ್ ಸಮುದಾಯವನ್ನು ಅವಮಾನಿಸಿದ್ದಾರೆ. ಇದು ಕೋಮು ಸೌಹಾರ್ದತೆಗೆ ದೊಡ್ಡ ಧಕ್ಕೆಯಾಗಿದ್ದು ಡಿಸೆಂಬರ್ 06 ರಂದು ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ಶಾಸಕ ರಾಘವ್ ಚಡ್ಡಾ ನೇತೃತ್ವದ ಸಮಿತಿ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.
ವೈಯಕ್ತಿಕ ಮತ್ತು ವೃತ್ತಿ ಸಂಬಂಧಿತ ಕೆಲಸಗಳಿರುವ ಕಾರಣದಿಂದ ಪ್ಯಾನಲ್ ಮುಂದೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಹೆಚ್ಚಿನ ಸಮಯ ಕೊಡಿ ಎಂದು ಕಂಗನಾ ಪರ ವಕೀಲರು ಪ್ಯಾನೆಲ್ಗೆ ಪತ್ರ ಬರೆದಿದ್ದಾರೆ. ಸಭೆ ರದ್ದುಗೊಳಿಸಿರುವ ರಾಘವ್ ಚಡ್ಡಾ, ಸಮಿತಿಯು ಈ ಕುರಿತು ತೀರ್ಮಾನ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ನಂತರ ಕಂಗನಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಿಖ್ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
“ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ಪೋಸ್ಟ್ ಹಾಕಿದ್ದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್ಜಿಎಂಸಿ) ಮತ್ತು ಶಿರೋಮಣಿ ಅಕಾಲಿದಳದ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು 1984 ರ ಸಿಖ್-ವಿರೋಧಿ ದಂಗೆಗಳನ್ನು ಉಲ್ಲೇಖಿಸಿ ಕಂಗನಾ “ಉದ್ದೇಶಪೂರ್ವಕವಾಗಿ ಸಿಖ್ಖರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಆರೋಪಿಸಿ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಅದರ ಆಧಾರದಲ್ಲಿ FIR ನೊಂದಾಯಿಸಲಾಗಿದೆ.
ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!