Homeಕರ್ನಾಟಕಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

ಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

- Advertisement -
- Advertisement -

ರಾಜ್ಯದ ಸಹಕಾರ ಸಂಘಗಳಲ್ಲಿನ ಸುಸ್ತಿದಾರ ರೈತರು ಸಾಲದ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಹಾಗೂ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧರಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿತು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತದ ₹142.47 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ ನಿರ್ಮಾಣವನ್ನು ₹47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆಕೆಆರ್ ಡಿ ಬಿ ಅನುದಾನದಲ್ಲಿ ಕೈಗೊಳ್ಳಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. 2023-24ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ;’ಳಿಗೆ ₹60 ಕೋಟಿ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ ನೀಡಲಾಯಿತು.

ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಅನ್ನು ಸಂಪರ್ಕಿಸಲು ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ₹263 ಕೋಟಿಗಳ ಅಂದಾಜು ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಬೆಳಗಾವಿ ಜಿಲ್ಲೆಯ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು ₹287.55 ಕೋಟಿ ಮೊತ್ತದಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆ’ಯ ₹519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಸಭೆ ಅನುಮೋದನೆ ನೀಡಿದೆ.

ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ ₹158.10 ಕೋಟಿ ಯೋಜನಾ ವರದಿಗೆ ಅನುಮೋದನೆ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹499 ಕೋಟಿ ಮೊತ್ತದ ಯೋಜನೆ ಆರಂಭಕ್ಕೆ ಸರ್ಕಾರ ಒಪ್ಪಿಕೊಂಡಿದೆ.

‘ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು, ರಾಯಚೂರು, ಬಳ್ಳಾರಿ, ವಿಜಯಪುರಗಳಲ್ಲಿ ₹52.81 ಕೋಟಿ ವೆಚ್ಚದಲ್ಲಿ ಮತ್ತು ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರು ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ₹47.18 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ ₹120 ಕೋಟಿ ಕ್ರಿಯಾ ಯೋಜನೆಗೆ ಅನುಮತಿ ನೀಡಿ, ದಿನಾಂಕ: 12-01-2024 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು. ಜತೆಗೆ, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ , ಲಾಂಡ್ರಿ ಕಟ್ಟಡ, ಎಸ್ ಟಿ ಪಿ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಒಟ್ಟು ₹150 ಕೋಟಿ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹455 ಕೋಟಿಗಳ ಕಾಮಗಾರಿಗೆ ಸಭೆ ಒಪ್ಪಿಕೊಂಡಿದೆ.

ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ ₹208.45 ಕೋಟಿ ಅಂದಾಜು ಮೊತ್ತದ ಕುಡಿಯು ನೀರಿನ ಯೋಜನೆ, ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು ₹440.20 ಕೋಟಿಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ.

ಇದನ್ನೂ ಓದಿ; ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...