ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬಂದರೆ, ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅಂಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ತೀರ್ಮಾನದ ಕುರಿತು ಬುಧವಾರ (ಆ.20) ಅವರು ವಿಧಾನಸಭೆಯಲ್ಲಿ ಹೇಳಿಕೆ ನೀಡಿದರು.
ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ದಾಸ್ ಅವರ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ 1 ಆಗಸ್ಟ್ 2025ರಂದು ವರದಿ ನೀಡಿತ್ತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿದೆ ಎಂದು ಸಿಎಂ ತಿಳಿಸಿದರು.
19 ಆಗಸ್ಟ್ 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ. ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.6ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬಂಧಿತ ಜಾತಿಗಳನ್ನು ಎಡಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿದೆ ಎಂಬುವುದನ್ನು ಗಮನಿಸಿದ ಸಚಿವ ಸಂಪುಟವು, ಈ ಜಾತಿಗಳನ್ನು ಬಲಗೈ ಸಂಬಂಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬಂಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಸಿಎಂ ವಿವರಿಸಿದರು.
ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬಂಧಿತ ಮತ್ತು ಬಲಗೈ ಸಂಬಂಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಸ್ಪೃಶ್ಯ ಜಾತಿಗಳ ಗುಂಪಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಶೇ. 4ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ, 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ.6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ.6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ ಎಂದರು.
ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ. ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ ಎಂದರು.
ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ ಎಂದರು.
ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ


