Homeಕರ್ನಾಟಕಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿ ಹಂಚಿಕೆಯಲ್ಲಿ ಮಾದಿಗ ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ಕೂಗು ಎದ್ದಿದೆ.

- Advertisement -
- Advertisement -

ಒಳಮೀಸಲಾತಿಯನ್ನು ಜಾರಿಗೊಳಿಸುವುದಾಗಿ ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಮೀಸಲಾತಿ ಹಂಚಿಕೆಯ ಪ್ರಮಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

ಮಾದಿಗ ಸಂಬಂಧಿತ ಜಾತಿಗಳಿಗೆ ಶೇ. 6, ಹೊಲೆಯ ಸಂಬಂಧಿತ ಜಾತಿಗಳಿಗೆ ಶೇ.5.5, ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಶೇ. 4.5, ಇತರೆ ಅಲೆಮಾರಿ ಸಮುದಾಯಗಳಿಗೆ ಶೇ. 1 ಮೀಸಲಾತಿಯನ್ನು ಹಂಚಿಕೆ ಮಾಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.

ಒಳಮೀಸಲಾತಿಯ ಸಮಸ್ಯೆ ಬಗೆಹರಿದಿರುವಂತೆ ಸರ್ಕಾರ ಬಿಂಬಿಸಿಕೊಳ್ಳಲು ಯತ್ನಿಸಿದರೂ ತಾಂತ್ರಿಕ ಅಂಶಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಅಲ್ಲದೆ ಸುಮಾರು 30 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಸಿರುವ ಮಾದಿಗ ಸಮುದಾಯಕ್ಕೆ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ಕೂಗು ಎದ್ದಿದೆ.

ಸಾಮಾಜಿಕ ನ್ಯಾಯಕ್ಕಾಗಿ ಜನಸಂಖ್ಯೆ ಆಧರಿಸಿ ಪರಿಶಿಷ್ಟ ಜಾತಿಯಲ್ಲಿನ 101 ಉಪ ಪಂಗಡಗಳಿಗೆ ಮೀಸಲಾತಿ ಸೌಲಭ್ಯವನ್ನು ಹಂಚಬೇಕು. ಏಕೆಂದರೆ ಕೆಲವೇ ಜಾತಿಗಳು ತಮ್ಮ ವರ್ಚಸ್ಸಿನಿಂದ ಕಬಳಿಸುತ್ತಿವೆ ಎನ್ನುವ ದೂರು ವ್ಯಾಪಕವಾದ ಹಿನ್ನೆಲೆಯಲ್ಲಿ 2005ರ ಸೆಪ್ಟೆಂಬರ್‌ನಲ್ಲಿ ಧರಂಸಿಂಗ್ ನೇತೃತ್ವದ ಸರಕಾರವು ನ್ಯಾಯಮೂರ್ತಿ ಎ.ಜೆ.ಸದಾಶಿವ ನೇತೃತ್ವದ ಆಯೋಗವನ್ನು ರಚಿಸಿತು. ಸದಾಶಿವ ಆಯೋಗ(2005)ವು ಕೇವಲ 2 ವರ್ಷದ ಸಮೀಕ್ಷಾ ಕಾರ್ಯದ ಮಿತಿ ಹೊಂದಿತ್ತಾದರೂ, ಹಣಕಾಸು ಹಾಗೂ ಇನ್ನಿತರ ಸಮರ್ಪಕ ಸೌಲಭ್ಯ ದೊರೆಯದೆ 7 ವರ್ಷಗಳ ನಂತರ ಸಾಕಷ್ಟು ವಿಳಂಬವಾಗಿ 2012ರ ಜೂನ್‌ನಲ್ಲಿ ತನ್ನ ಶಿಫಾರಸು ವರದಿಯನ್ನು ನೀಡಿತು. ಆಗ ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿದ್ದರು. ಆನಂತರದಲ್ಲಿ ವರದಿ ಬಿಡುಗಡೆಯೇ ಆಗಲಿಲ್ಲ.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಸಾರ್ವಜನಿಕವಾಗಿ ಲಭ್ಯವಾಗಿಲ್ಲ, ಚರ್ಚೆಗೂ ಒಳಪಟ್ಟಿಲ್ಲ. ಆದರೆ ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ ಎ.ಜೆ.ಸದಾಶಿವ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಸಮುದಾಯಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ.33.4ರಷ್ಟಿರುವ ಎಡಗೈ (ಮಾದಿಗ) ಸಮುದಾಯಕ್ಕೆ ಶೇ.6ರಷ್ಟು, ಶೇ.32ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ.5ರಷ್ಟು, ಶೇ.23.64ರಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ.3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ.1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಿರುವುದಾಗಿ ಹೇಳಲಾಗುತ್ತಿದೆ.

ರಾಜ್ಯ ಸರ್ಕಾರ ಕಳೆದ ವರ್ಷ ಪರಿಶಿಷ್ಟ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸುವುದಾಗಿ ಹೇಳಿತು. ಜಸ್ಟಿಸ್ ಎಚ್.ಎನ್.ನಾಗಮೋಹನದಾಸ್ ಸಮಿತಿ ವರದಿಯ ಅನ್ವಯ ಪರಿಶಿಷ್ಟರಿಗೆ ಶೇ.2ರಷ್ಟು ಮೀಸಲಾತಿಯನ್ನು ಹೆಚ್ಚಿಸುವ ನಿರ್ಧಾರ ಪ್ರಕಟಿಸಿತು. ಅದರನ್ವಯ ರಾಜ್ಯದಲ್ಲಿ ಎಸ್‌ಸಿ ಮೀಸಲಾತಿಯು ಶೇ.17ಕ್ಕೆ ಏರಿಕೆಯಾಗುತ್ತದೆ. ಈಗ ಮೀಸಲಾತಿ ಹಂಚಿಕೆ ಮಾಡುವಾಗಲೂ ಹೆಚ್ಚಳವಾದ ಮೀಸಲಾತಿ ಪ್ರಮಾಣವನ್ನು ಸೇರಿಸಿಕೊಂಡು ಸರ್ಕಾರ ನಿರ್ಧಾರ ಪ್ರಕಟಿಸಿದೆ. ಅಂದರೆ ಸದಾಶಿವ ಆಯೋಗದ ವರದಿಯಲ್ಲಿ ಸೂಚಿಸಿದ ಪ್ರಮಾಣವಷ್ಟೇ (ಶೇ.6) ಮಾದಿಗ ಸಮುದಾಯಕ್ಕೆ ನೀಡಲಾಗಿದೆ ಹೊರತು, ಮೀಸಲಾತಿ ಹೆಚ್ಚಳದಲ್ಲಿ ಒಂದು ನಯಾಪೈಸೆ ಕೂಡ ಮಾದಿಗರಿಗೆ ದೊರೆತ್ತಿಲ್ಲ. ಜೊತೆಗೆ ಇತರೆ ಸಮುದಾಯಗಳ ಪಟ್ಟಿಯಲ್ಲಿನ ಅಲೆಮಾರಿಗಳಿಗೂ ಹೆಚ್ಚಳವಾಗಿಲ್ಲ.

ಶೇ.2ರಷ್ಟು ಹೆಚ್ಚಳ ಮಾಡಲಾಗಿರುವ ಮೀಸಲಾತಿಯಲ್ಲಿ ಬರೋಬ್ಬರಿ ಒಂದೂವರೆ ಪರ್ಸೆಂಟ್ ಮೀಸಲಾತಿಯನ್ನು ಸ್ಪೃಶ್ಯ ಸಂಬಂಧಿತ ಜಾತಿಗಳಿಗೆ ನೀಡಿದರೆ, ಅಸ್ಪೃಶ್ಯ ಹೊಲೆಯ ಸಮುದಾಯಕ್ಕೆ ಅರ್ಧ ಪರ್ಸೆಂಟ್ ನೀಡಲಾಗಿದೆ. ಮಾದಿಗ ಸಮುದಾಯದ ಜನಸಂಖ್ಯೆ ಹೆಚ್ಚಳವಾಗಿಲ್ಲ ಎಂಬಂತೆ ಸರ್ಕಾರ ವರ್ತಿಸಿದೆ. ಮತ್ತೆ ಮಾದಿಗ ಸಮುದಾಯವನ್ನು ವಂಚಿಸುವ ಕೆಲಸವಾಗಿದೆ. ಯಾವ ಅಂಕಿ-ಅಂಶದ ಮೇಲೆ ಈ ವಿಂಗಡಣೆಯನ್ನು ಮಾಡಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇದರ ಜೊತೆಗೆ ಒಬಿಸಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ಕಿತ್ತುಹಾಕಿ, ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಹಂಚಿಕೆ ಮಾಡುವ ಪ್ರಸ್ತಾಪವನ್ನು ಮಾಡಿರುವುದು ಯಾವ ಸಮೀಕ್ಷೆಯ ಅಂಕಿ-ಅಂಶಗಳ ಆಧಾರದ ಮೇಲೆ ಎಂಬುದಕ್ಕೂ ಸಾರ್ವಜನಿಕವಾಗಿ ಉತ್ತರ ಲಭ್ಯವಿಲ್ಲ.

ಈ ಅನ್ಯಾಯದ ವಿರುದ್ಧ ದನಿ ಎತ್ತಿರುವ ದಲಿತ ಮುಖಂಡ ಭಾಸ್ಕರ್‌ ಪ್ರಸಾದ್, “ಬೊಮ್ಮಾಯಿ ಸರ್ಕಾರ ಶಿಫಾರಸ್ಸು ಮಾಡಿರುವುದು 17% ಮೀಸಲಾತಿಯನ್ನು ಆಧರಿಸಿ. ಇದರಲ್ಲಿ 6% ಎಡಗೈ ಸಮುದಾಯಕ್ಕೆ, 5.5% ಬಲಗೈ ಸಮುದಾಯಕ್ಕೆ. ಕೋಲಂಬೋ (ಕೊರಚ, ಲಂಬಾಣಿ, ಭೋವಿ) ಸಮುದಾಯಗಳಿಗೆ 4.5% ಎಂದು. ನಿಜ ಹೇಳಿ ಜನಸಂಖ್ಯೆಗೆ ಅನುಗುಣವಾಗಿ ಇಲ್ಲಿ ಮೀಸಲಾತಿ ಹಂಚಿಕೆ ಆಗಿದೆಯಾ? ಹೆಚ್ಚಿಸಲಾಗಿದೆ ಎಂದು ಹೇಳುತ್ತಿರುವ 2% ಮೀಸಲಾತಿಯಲ್ಲಿ 1.5% ಮೀಸಲಾತಿಯನ್ನು ಕೊಲಂಭೋ ಸಮುದಾಯಗಳಿಗೆ ಮಾತ್ರ ಶಿಫಾರಸು ಮಾಡಲಾಗಿದೆ, ಕೇವಲ 0.5% ಮೀಸಲಾತಿ ಹೆಚ್ಚಳವನ್ನು ಬಲಗೈ ಸಮುದಾಯಕ್ಕೆ ನೀಡಲು ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಲಾಗಿದೆ. ಅತಿ ಮುಖ್ಯವಾಗಿ ಈಗ ಅತಿ ಹೆಚ್ಚಿನ ಸಂಭ್ರಮಾಚರಣೆಯಲ್ಲಿ ತೊಡಗಿರುವ ಮಾದಿಗ ಸಮುದಾಯಕ್ಕೂ 2% ಪ್ರಮಾಣದ ಮೀಸಲಾತಿ ಹೆಚ್ಚಳಕ್ಕೂ ಯಾವ ಬಾದರಾಯನ ಸಂಬಂಧವು ಇಲ್ಲವೇ ಇಲ್ಲ ಎಂದು ನೇರವಾಗಿ ತಿಳಿಸಲಾಗಿದೆ. ಈ ಶಿಫಾರಸ್ಸಿನ ಪ್ರಕಾರವಾಗಿ ನೋಡಿದರೇ, ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಹೊಲೆಯರ ಜನಸಂಖ್ಯೆ ಹೆಚ್ಚಳ ಕೇವಲ 0.5% ಆಗಿದೆಯೆಂದೂ, ಮಾದಿಗರ ಜನಸಂಖ್ಯೆ ಹೆಚ್ಚಳ ಪ್ರಮಾಣ ಸೊನ್ನೆ, ಸೊನ್ನೆ, ಸೊನ್ನೆ‌ ಎಂದೂ, ಆದರೇ, ಕೊಲಂಭೋಗಳ ಜನಸಂಖ್ಯೆ ಮಾತ್ರ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಇಲ್ಲಿ ಪ್ರತಿಪಾದಿಸಲಾಗಿದೆ. ಹಾಗಾಗಿ ಅವರಿಗೆ 1.5% ಮೀಸಲಾತಿಯನ್ನು ಹೆಚ್ಚಾಗಿ ನೀಡಲಾಗಿದೆ ಎಂದೂ ಒಪ್ಪಿಕೊಳ್ಳಬೇಕಾಗುತ್ತದೆ. ಈಗ ಸಂಭ್ರಮದಿಂದ ಮೈ ಮರೆತಿರುವವರು ಈ ಅನ್ಯಾಯವನ್ನು ಒಪ್ಪಿಕೊಳ್ತೀರಾ?” ಎಂದು ಪ್ರಶ್ನಿಸಿದ್ದಾರೆ.

“ಈಗ ಮತ್ತೊಂದು ಅತೀ ಮುಖ್ಯ ಪ್ರಶ್ನೆ ಏನೆಂದರೆ, ಈ 17% ಮೀಸಲಾತಿ ಜಾರಿ ಆಗಿದ್ದು ಯಾವಾಗ? ಜಾರಿಯೇ ಆಗದ ಮೀಸಲಾತಿ ಪ್ರಮಾಣವನ್ನು 15% ಮೀಸಲಾತಿ ಪ್ರಮಾಣದ ಬದಲಾಗಿ ಹೀಗೆ ತನಗಿಷ್ಟ ಬಂದಂತೆ ಮಾದಿಗ ಮತ್ತು ಸಂಬಂಧಿತ ಜಾತಿಗೆ 6%, ಹೊಲೆಯ ಮತ್ತು ಸಂಬಂಧಿತ ಜಾತಿಗೆ 5.5%, ಕೊಲಂಭೋಗಳಿಗೆ 4.5%, ಮತ್ತು ಇತರರಿಗೆ 1% ಎಂದು 15 ಅನ್ನು 17ಕ್ಕೆ ಹೆಚ್ಚಿಸಿ ವಿಂಗಡಿಸುವುದಾದರು ಎಲ್ಲಿ ಮತ್ತು ಹೇಗೆ?” ಎಂದು ಕೇಳಿದ್ದಾರೆ.

“ಮೀಸಲಾತಿ ಹೆಚ್ಚಳದ ಬಗ್ಗೆ ಲೋಕಸಭೆಯಲ್ಲಿ ಸ್ವತಃ ಎ. ನಾರಾಯಣಸ್ವಾಮಿ ಅವರೇ ಮಾತನಾಡುತ್ತಾ, ಮೀಸಲಾತಿಯನ್ನು 15% ನಿಂದ 17% ಹೆಚ್ಚಿಸುವ ಯಾವ ಪ್ರಸ್ತಾಪವೂ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ. ಮತ್ತೀಗ 17% ಮೀಸಲಾತಿ ಪೈಕಿ ಮಾದಿಗರಿಗೆ 6% ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಹೊಟ್ಟೆ ಉರಿತಿದೆ ಸ್ವಾಮಿ, ಕೇವಲ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ತನ್ನದೇ ಸಮುದಾಯಕ್ಕೆ ಸುಳ್ಳು ಹೇಳಿ ಮೋಸ ಮಾಡ್ತಾ ಇದ್ದಾರಲ್ಲಾ, ತನ್ನ ಸಮುದಾಯಕ್ಕೆ ಮೋಸ ಮಾಡುವುದಕ್ಕೂ, ತನ್ನ ಹೆತ್ತ ತಾಯಿಯ ಎದೆಗೆ ಒದೆಯುವುದಕ್ಕೂ ಏನಾದರೂ ವ್ಯತ್ಯಾಸ ಇದೆಯಾ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸರ್ಕಾರದ ನಿರ್ಧಾರಗಳಲ್ಲಿನ ತೊಡಕುಗಳನ್ನು ಪ್ರಸ್ತಾಪಿಸಿದ್ದಾರೆ. “ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್ ಗಳಿಗೆ ಜನ ಬಲಿಯಾಗಬಾರದು” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿಯ ಮುಂಚೂಣಿ ನಾಯಕ ಅಂಬಣ್ಣ, ಬಿ.ಗೋಪಾಲ್ ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆ

“ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯ ಅನುಷ್ಠಾನ ಒಂದು ದೀರ್ಘ ಪ್ರಕ್ರಿಯೆ. ಇದಕ್ಕಾಗಿ ಸಂವಿಧಾನದ ಪರಿಚ್ಛೇದ 341ಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ. ಈ ಬಗ್ಗೆ ಸಂಪುಟ ಕೈಗೊಂಡಿದ್ದ ತೀರ್ಮಾನವನ್ನು ಇಲ್ಲಿಯವರೆಗೆ ಕೇಂದ್ರ ಸರ್ಕಾರಕ್ಕೆ ಕಳಿಸದೆ ಇರುವುದು ರಾಜ್ಯ ಸರ್ಕಾರದ ಅಪ್ರಾಮಾಣಿಕತೆಗೆ ಸಾಕ್ಷಿ” ಎಂದು ತಿಳಿಸಿದ್ದಾರೆ.

“ಮುಸ್ಲಿಮರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಇದು ಸುಲಭಸಾಧ್ಯ ಅಲ್ಲ. ಬೇರೆ ರಾಜ್ಯಗಳಲ್ಲಿಯೂ ಮುಸ್ಲಿಮರು ಇರುವ ಕಾರಣ ಒಂದು ರಾಜ್ಯದ ವ್ಯಾಪ್ತಿಯಲ್ಲಿ ಮೀಸಲಾತಿ ಮರುಹಂಚಿಕೆ ಮಾಡಲು ಸಾಧ್ಯ ಇಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...