ಬೆಂಗಳೂರು: ಒಳಮೀಸಲಾತಿ ಕಲ್ಪಿಸುವ ಸಂಬಂಧ ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ನಡೆಸಲು 54 ಸಾವಿರ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರಜಾವಾಣಿ ವರದಿ ತಿಳಿಸಿದೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಈ ಸಂಬಂಧ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್ ಅವರನ್ನು ಈ ಕಾರ್ಯದ ಉಸ್ತುವಾರಿಯನ್ನಾಗಿ ಪ್ರಕಟಿಸಿದರು.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುನಿಯಪ್ಪ ಅವರು,101 ಜಾತಿಗಳಿಗೆ ಅನ್ಯಾಯ ಆಗದಂತೆ ಯಾವ ರೀತಿ ಒಳ ಮೀಸಲಾತಿ ನೀಡಬೇಕು ಎಂಬ ಕುರಿತು ಚರ್ಚಿಸಲಾಯಿತು. ಆದಿ ಕರ್ನಾಟಕ ಮತ್ತು ಆದಿ ದ್ರಾವಿಡ ಕುರಿತು ಇರುವ ಗೊಂದಲ ನಿವಾರಿಸಲು ಏನು ಮಾಡಬೇಕು ಎಂಬುದರ ಬಗ್ಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಯಿತು ಎಂದರು.
ಎರಡು ತಿಂಗಳಲ್ಲಿ ವರದಿ ಪಡೆಯಲು ಸೂಚಿಸಿದ್ದು, ಈಗಾಗಲೇ 15 ದಿನಗಳು ಕಳೆದಿವೆ. ತ್ವರಿತಗತಿಯಲ್ಲಿ ಮತ್ತು ಕಾಲ ಮಿತಿಯಲ್ಲಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.
ನಿವೃತ್ತ ನ್ಯಾಯಮೂರ್ತಿ ನಾಗ ಮೋಹನ್ದಾಸ್ ನೇತೃತ್ವದ ಆಯೋಗವು ಮಾರ್ಚ್ನಲ್ಲಿ ಮಧ್ಯಂತರ ವರದಿ ಸಲ್ಲಿಸಿ, ಒಳಮೀಸಲಾತಿ ನೀಡುವುದಕ್ಕಾಗಿ ಪರಿಶಿಷ್ಟ ಜಾತಿಯಲ್ಲಿನ 101 ಉಪಜಾತಿಗಳ ದತ್ತಾಂಶ ಸಂಗ್ರಹಿಸುವು ದಕ್ಕೆ ಹೊಸ ಸಮೀಕ್ಷೆ ನಡೆಸಬೇಕು ಎಂದು ಶಿಫಾರಸು ಮಾಡಿತ್ತು.
ಒಳಮೀಸಲಾತಿ ವರ್ಗೀಕರಣವನ್ನು ತ್ವರಿತವಾಗಿ ಮತ್ತು ವೈಜ್ಞಾನಿಕವಾಗಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ದಾಸ್ ಆಯೋಗಕ್ಕೇ ವಹಿಸಲು ಸಚಿವ ಸಂಪುಟ ಸಭೆ ನಿರ್ಣಯಿಸಿತ್ತು. ಸಮೀಕ್ಷಾ ಕಾರ್ಯವನ್ನು 60 ದಿನಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಆಯೋಗದ ಅವಧಿಯನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಗಿತ್ತು.
ಸಭೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಸಮಾಜಕಲ್ಯಾಣ ಇಲಾಖೆ ಪ್ರಧಾನಕಾರ್ಯದರ್ಶಿ ಪಿ. ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಗೋನಾಳ ಭೀಮಪ್ಪ, ತೇಗನೂರು, ಭೀಮಾಶಂಕರ್ ಇದ್ದರು.
ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್ ಅಹಿಂದ ನಾಯಕರ ಆಗ್ರಹ


