ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು.
ಈ ವೇಳೆ ಮಾತನಾಡಿದ ಅವರು, ”ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು” ಎಂದರು.
ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ವಿರುದ್ಧ ಕಿಡಿಕಾರಿದರು. ”ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ. 90ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ” ಎಂದು ಎಚ್ಚರಿಸಿದರು.
”We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ” ಎಂದರು.
ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ”ಸಂವಿಧಾನವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ,ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮಕ್ಕೆ ರಾಜ್ಯ, ದೇಶ, ವಿದೇಶಗಳಿಂದ ನೋಂದಣಿಯಾಗಿದ್ದ ಜನರು ತಾವಿರುವ ಸ್ಥಳದಲ್ಲಿಯೇ ಸಂವಿಧಾನ ಪೀಠಿಕೆ ಓದಿದರು. ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.