Homeಮುಖಪುಟಅನ್ನಾ ಅಖ್ಮತೋವಾರ ಶಾಂತಿಗೀತೆಗೊಂದು ಪ್ರವೇಶ: ಭಾಗ-2

ಅನ್ನಾ ಅಖ್ಮತೋವಾರ ಶಾಂತಿಗೀತೆಗೊಂದು ಪ್ರವೇಶ: ಭಾಗ-2

- Advertisement -
- Advertisement -

(ಮಾರ್ಚ್ 16ರ ಸಂಚಿಕೆಯಲ್ಲಿ ಶಾಂತಿಗೀತೆಯ ಅನುವಾದದ ಪೂರ್ಣ ಪಠ್ಯ ಮತ್ತು ಮಾರ್ಚ್ 23ರ ಸಂಚಿಕೆಯಲ್ಲಿ ಶಾಂತಿಗೀತೆಗೊಂದು ಪ್ರವೇಶದ ಮೊದಲ ಭಾಗ ಪ್ರಕಟವಾಗಿತ್ತು… ಮುಂದುವರಿದಿದೆ..)

ಅಸಹನೀಯ ನೋವನ್ನು ನಿಭಾಯಿಸುವ ಪ್ರಯತ್ನ ಒಂಬತ್ತನೆಯ ಕವಿತೆಯಲ್ಲೂ ಮುಂದುವರೆದಿದೆ. ಏಳನೆಯ ಕವಿತೆಯಲ್ಲಿ ಸಂವೇದನೆಯನ್ನು ಕಳಕೊಳ್ಳುವುದು, ಎಂಟನೆಯ ಕವಿತೆಯಲ್ಲಿ ಸಾವು – ಈಗ ಸಂಪೂರ್ಣ ಮರೆವು ಬಿಡುಗಡೆಯ ದಾರಿಯಾಗಿ ಕಾಯುತ್ತದೆ. ಹಾಗಾಗಿ ಈ ಕವಿತೆಯ ಮೊದಲಿನಲ್ಲೇ ’ಹುಚ್ಚು ಚಾಚಿರುವ ರೆಕ್ಕೆಯ ನೆರಳು’, ಎಂಬ ಪ್ರತಿಮೆ ಬಂದಿದೆ. ’ಶಾಂತಿಗೀತೆ’ಯ ಸೂಕ್ತಿ ವಾಕ್ಯದಲ್ಲೂ ರೆಕ್ಕೆ ಅನ್ನುವುದು ರಕ್ಷಣೆಯ, ಆಸರೆಯ ಪ್ರತಿಮೆಯಾಗಿಯೇ ಬಳಕೆಯಾಗಿದೆ. ಈ ರೂಪಕ ಬೈಬಲಿನಿಂದ ಬಂದದ್ದು; ದೇವರ ರಕ್ಷಣೆಯನ್ನು ಹಕ್ಕಿಯ ರೆಕ್ಕೆಯ ರಕ್ಷಣೆ ಅನ್ನುವ ರೂಪಕದ ಮೂಲಕ ಬೈಬಲಿನಲ್ಲಿ ವರ್ಣಿಸಲಾಗಿದೆ. ಆದರೆ, ಇಲ್ಲಿ ರಕ್ಷಣೆಯಾಗಿ ತೋರುವ ಮರೆವಿನ ರೆಕ್ಕೆಯಲ್ಲಿ ಆರ್ಥಸಂಧಿಗ್ಧತೆ ಇದೆ; ಮರೆವು ಎಷ್ಟೇ ಆಕರ್ಷಕವಾಗಿ ಕಂಡರೂ ಅದು ತರುವ ಮರುಳು ಅಪಾಯಕಾರಿಯಾದದ್ದು. ನಿರೂಪಕಿ ತನಗೆ ಹುಚ್ಚು ಹಿಡಿದರೂ ಪರವಾಗಿಲ್ಲ. ನೋವಿನಿಂದ ಬಿಡುಗಡೆ ಬೇಕು ಎಂದು ಬಯಸುತ್ತಾಳೆ. ಆದರೆ ಆಕೆ ಮರೆಯಲು ಬಯಸುವ ನೋವಿನ ಭಾಗವಾಗಿ ಅವಳ ಮಗನ ನೆನಪೂ ಇದೆ. ನೆನಪು ಕಳೆದುಕೊಳ್ಳುವುದೆಂದರೆ ಮಗನ ನೆನಪನ್ನೂ ಕಳಕೊಳ್ಳುವುದೇ ಅಲ್ಲವೇ.

ಹುಚ್ಚನ್ನು ಹೀಗೆ ಆಕರ್ಷಕವಾಗಿಯೂ ಅಸಹ್ಯವಾಗಿಯೂ ಕಾಣುವ ವಿರೋಧಾಭಾಸ ಇಲ್ಲಿದೆ. ನಾನು ಮರವೆಗೆ ಸಂದಿದ್ದೇನೆ ಎಂದು ಹೇಳುತಿದ್ದ ಹಾಗೇ ಆಕೆಗೆ ತನ್ನದೇ ಮಾತು ಬಡಬಡಿಕೆಯ ಹಾಗೆ ಕೇಳುತ್ತದೆ; ಆದರೂ
ನಿರೂಪಕಿಯ ನೆನಪು ಸ್ಥಿರವಾಗಿದೆ; ಆಕೆ ಹುಚ್ಚಿಯಾಗಿದ್ದಿದ್ದರೆ ನೆನಪಿಟ್ಟುಕೊಳ್ಳಲು ಸಾಧ್ಯವೇ ಇರದಿದ್ದ ಸಂಗತಿಗಳೆಲ್ಲ, ಅವಳ ಅರಿವಿನಲ್ಲಿವೆ. ಈ ಕವಿತೆಯ ಮೊದಲ ಸ್ಟಾಂಜಾದಲ್ಲಿ ಭಾವತೀವ್ರತೆಯ ಪ್ರತಿಮೆಗಳಿದ್ದರೆ ಕೊನೆಯಲ್ಲಿ ಅಸ್ತವ್ಯಸ್ತ ಮನಸ್ಸಿಗೆ ಹೊಳೆಯಲು ಸಾಧ್ಯವೇ ಇರದ ಪ್ರತಿಮೆಗಳಿವೆ. ಈ ಭಾಗದ ತಣ್ಣನೆಯ ದನಿ ಗಮನಾರ್ಹವಾಗಿದೆ. ಎರಡು, ಮೂರು, ನಾಲ್ಕನೆಯ ಕವಿತೆಗಳಲ್ಲಿ ಹೇಳಿದ ಹಾಗೆ ತನ್ನಿಂದ ತಾನು ಬೇರೆಯಾಗುವುದಲ್ಲ, ಏಳು ಮತ್ತು ಎಂಟನೆಯ ಕವಿತೆಗಳಲ್ಲಿ ಹೇಳಿದ ಹಾಗೆ ಪ್ರಜ್ಞೆಯನ್ನು ಒರೆಸಿಹಾಕುವುದರಲ್ಲೂ ಅಲ್ಲ, ನೋವಿನ ಮೂಲದಲ್ಲಿರುವ, ಹಿಂಸೆ ಪಡುತ್ತಿರುವ ತನ್ನ ಪ್ರಿಯ ವ್ಯಕ್ತಿಯನ್ನು ಕುರಿತ ಪ್ರೀತಿಯನ್ನು ನಿಷ್ಠೆಯ ಶಕ್ತಿಯಾಗಿ ಪರಿವರ್ತಿಸಿಕೊಳ್ಳುವ ಬಯಕೆ, ನೋವುಣ್ಣುತ್ತಿರುವವನ ಪಕ್ಕದಲ್ಲೆ ಇರುವ, ಅವನಿಗೆ ಆಸರೆಯಾಗುವ, ಅದು ಸಾಧ್ಯವಾಗದಿದ್ದರೆ ಅವನನ್ನು ಸದಾ ನೆನೆಯುವ ಹಂಬಲ ಇಲ್ಲಿ ಮೂಡಿದೆ. ನೋವಿನಿಂದ ದೂರ ಓಡಿಹೋಗಬೇಕೆಂಬ ಅತ್ಯಂತ ಸಹಜವಾದ ಪ್ರವೃತ್ತಿಯ ಮೇಲೆ ಗೆಲುವು ಸಾಧಿಸಿದಾಗ ನಿರೂಪಕಿಯು ಸಹನೆಯ ಆಧ್ಯಾತ್ಮದ ಅನುಭವಕ್ಕೆ ಸಿದ್ಧಳಾಗುತ್ತಾಳೆ. ’ಪೀಠಿಕೆಯ ಬದಲಾಗಿ’ ಎಂಬ ಭಾಗದಲ್ಲಿ ಕಾಣಿಸಿದ ನೀಲಿತುಟಿಯ ಅಪಾರವೇದನೆಯ ಮಹಿಳೆಯ ಹಾಗಲ್ಲ ಈ ನಿರೂಪಕಿ. ಈಕೆ ಸಾಕ್ಷಿ ಪ್ರಜ್ಞೆಯಾಗುವಷ್ಟು ಬೆಳೆದುಬಿಟ್ಟಿದ್ದಾಳೆ.

*******

ಈ ಸಾಕ್ಷಿಯಾಗುವುದು, ಈ ಸಹನೆ ಇವೇ ಹತ್ತನೆಯ ಕವಿತೆ ’ಶಿಲುಬೆ’ಯ ಕೇಂದ್ರದಲ್ಲಿರುವ ಸಂಗತಿಗಳು. ಇಲ್ಲಿ ಅಖ್ಮತೋವಾ ಶಿಲುಬೆಗೇರಿದ ಯೇಸುವಿನ ಮುಂದೆ ನಿಂತಿರುವ ತಾಯಿ ಮೇರಿಯ ಚಿತ್ರವನ್ನು ಮೂಡಿಸಿದ್ದಾಳೆ. ಮಾತೆ/ಸಾಕ್ಷಿ ಪ್ರಜ್ಞೆಯ ಪರಮ ನಿದರ್ಶನವಾಗಿದ್ದಾಳೆ ಮೇರಿ. ಭೀತಿಯ ಯುಗದಲ್ಲಿ ಪ್ರಾಣ ತೆತ್ತ ಎಲ್ಲ ಮಕ್ಕಳ ತಾಯಂದಿರೊಡನೆ ಮೇರಿಯನ್ನು ಸಮೀಕರಿಸುವುದಕ್ಕೆ ರಶಿಯನ್ ಆರ್ಥಡಾಕ್ಸ್ ಚರ್ಚ್‌ನ ಉಲ್ಲೇಖ ಒದಗಿ ಬಂದಿದೆ. ’ನನ್ನನ್ನು ಗೋರಿಯಲ್ಲಿ ಕಂಡಾಗ ಅಳಬೇಡ ಅಮ್ಮಾ’ ಎನ್ನುವುದು ಈ ಉಕ್ತಿಯ ಸರಿಯಾದ ರೂಪ. ಆದರೆ ಗುಲಾಗ್ ಯಾತನಾಶಿಬಿರಗಳಲ್ಲಿ ಪ್ರಾಣ ಕಳೆದುಕೊಂಡವರ ಗೋರಿ ಎಲ್ಲಿರುತ್ತಿತ್ತೋ ಯಾರಿಗೂ ಗೊತ್ತಾಗುತ್ತಿರಲಿಲ್ಲ, ತಾಯಂದಿರು ಮಕ್ಕಳ ಗೋರಿಯ ಹತ್ತಿರ ಹೋಗಿ ಅಳುವುದು ಸಾಧ್ಯವೂ ಇರಲಿಲ್ಲ. ಹಾಗಾಗಿ ಕವಿ ಅರ್ಥಡಾಕ್ಸ್ ಚರ್ಚ್‌ನ ಪಠ್ಯದ ಮಾತನ್ನು ’ಮಣ್ಣಿಗಿಟ್ಟಿರುವ ನನಗಾಗಿ ಅಳಬೇಡ, ಅಮ್ಮಾ’ ಎಂದು ಬದಲಿಸಿಕೊಂಡಿದ್ದಾಳೆ.

’ಶಿಲುಬೆ’ ಎಂಬ ಈ ಕವಿತೆಯಲ್ಲಿ ಅಭಿನೀತವಾಗುವುದು ಮನುಷ್ಯ ಬದುಕಿನ ನಾಟಕವೇ ಹೊರತು ಧಾರ್ಮಿಕ, ತಾತ್ವಿಕ ಸಂಗತಿಗಳಲ್ಲ. ಯೇಸುವಿನ ’ತಂದೆಯೇ, ನನ್ನನ್ನೇಕೆ ತೊರೆದೆ?’ ಎಂಬ ಪ್ರಶ್ನೆಗೆ ಉತ್ತರ ದೊರೆಯಲಿಲ್ಲ; ಇಲ್ಲಿ, ಸಾಯುತ್ತಿರುವ ಮಗ ಬಯಸುವುದು ಪವಾಡವನ್ನಲ್ಲ, ಶಕುನವನ್ನಲ್ಲ, ಮನುಷ್ಯ ಸಂಪರ್ಕದ ಸರಳ ನೆಮ್ಮದಿಯನ್ನು, ಹಾಗಾಗಿ ತಾಯಿಯತ್ತ ತಿರುಗಿ ಅಳಬೇಡಮ್ಮಾ ಎನ್ನುತ್ತಾನೆ. ಒಂಬತ್ತನೆಯ ಕವಿತೆಯಲ್ಲಿಯ ಹಾಗೆಯೇ ಇಲ್ಲಿಯೂ ನಿರೂಪಕಿ ತನ್ನ ಮಗನ ಮಾತುಗಳ ನೆನಪನ್ನು ಗಟ್ಟಿಯಾಗಿ ಹಿಡಿದಿದ್ದಾಳೆ. ಯೇಸುವು ಮೇರಿಗೆ ನೇರವಾಗಿ ಹೇಳುವ ಮಾತು, ಆಕೆ ತನ್ನ ಆಸರೆಯೂ ಹೌದು, ಸಾಕ್ಷಿಯೂ ಹೌದು ಅನ್ನುವುದನ್ನು ಸೂಚಿಸುತ್ತದೆ. ಅಳುವ ಮೇರಿ ಮ್ಯಾಗ್ದಲೀನಳ ಚೀರಾಟ ಮೊದಲನೆಯ ಕವಿತೆಯಲ್ಲಿ ಕ್ರೆಮ್ಲಿನ್ ಗೋಡೆಯ ಬಳಿ ಹೆಂಗಸರ ಅಳುವಿನ ಪ್ರಸ್ತಾಪವಾಗಿತ್ತಲ್ಲ ಅದನ್ನು ನೆನಪಿಗೆ ತರುತ್ತದೆ. ಜಾನ್ ದುಃಖದಲ್ಲಿ ಕಲ್ಲಾದ ಎಂಬ ಮಾತು ಏಳನೆಯ ಕವಿತೆಯಲ್ಲಿ ನಿರೂಪಕಿ ತನ್ನ ಹೃದಯ ಕಲ್ಲಾಗಲಿ ಎಂದು ಕೋರಿದ್ದನ್ನು ನೆನಪಿಗೆ ತರುತ್ತದೆ. ಮೇರಿ ಮ್ಯಾಗ್ದಲೀನ್ ಮತ್ತು ಜಾನ್ ಇಬ್ಬರೂ ಅಂತಿಮ ವೇದನೆಯನ್ನು ನೋಡಲಾಗದೆ ಎದುರಿಸಲಾಗದೆ ಒಳಸರಿದುಕೊಳ್ಳುವವರು. ಅಳುವ ತಾಯಿಯನ್ನು ನೋಡಲಾರರು ಅವರು. ಆದರೂ ಅವರು ನೋಡಲಾಗದ್ದನ್ನೂ ಸಹಿಸುವ ಗಟ್ಟಿಗಿತ್ತಿ ತಾಯಿ.

******

ಸಾಕ್ಷಿಯಾಗಿರುವ ನಿರೂಪಕಿ ನೋವಿನಿಂದ ಬಿಡುಗಡೆ ಪಡೆಯುವುದಿಲ್ಲ. ಆದರೆ ಆ ನೋವಿನಲ್ಲಿ ಬದುಕಿನ ಉದ್ದೇಶ, ಸ್ಥಿರತೆಗಳನ್ನು ಕಂಡುಕೊಳ್ಳುತ್ತಾಳೆ. ’ಸಮಾರೋಪ’ ಕವಿತೆಯ ಮೊದಲ ಭಾಗದಲ್ಲಿ ಈ ನೋವು ಸಮೀಪದ್ದೂ ಹೌದು ದೂರದ್ದೂ ಹೌದು. ಅತ್ಯಂತ ಚಿತ್ರವತ್ತಾದ ಈ ಸಾಲುಗಳು ವೇದನೆಯನ್ನಲ್ಲ ವೇದನೆಯ ಪರಿಣಾಮಗಳನ್ನು ಖಚಿತವಾದ ವಿವರಗಳಲ್ಲಿ ನೀಡುತ್ತವೆ. ಕುಗ್ಗಿ, ಹಳ್ಳ ಬಿದ್ದು, ಮೂಳೆ ಕಾಣುವ ಮುಖ, ನೋವಿನ ಅಕ್ಷರಗಳ ಸಹಿ ಬಿದ್ದಿರುವ ಕೆನ್ನೆ ಹಾಳೆ, ಒಂದೇ ರಾತ್ರಿಯಲ್ಲಿ ನೆರೆತ ಕೂದಲು, ಶುಷ್ಕ ನಗು ಇವೆಲ್ಲವೂ ದಾರುಣ ಅನುಭವ ಉಳಿಸಿ ಹೋಗಿರುವ ಗುರುತುಗಳು. ನೋವು ಕಳೆದಿದೆ, ನಿಜ; ಆದರೂ ನೋವು ಇದ್ದೇ ಇದೆ. ಯಾಕೆಂದರೆ ಆ ನೋವಿನಿಂದಾದ ಪರಿಣಾಮ ಶಾಶ್ವತವಾದದ್ದು.

ಕವಿ-ಸಾಕ್ಷಿ ಈಗ ತನ್ನದೇ ನೋವಿಗೆ ಶರಣಾದವಳಲ್ಲ, ಆ ನೋವಿನಿಂದ ಕುರುಡಾದವಳೂ ಅಲ್ಲ. ಈಗ ಆಕೆ ತನ್ನ ಸುತ್ತಲೂ ಇರುವ ಇತರ ಹೆಂಗಸರ ನೋವು ದುಃಖಗಳ ಬಗ್ಗೆ ಸಂವೇದನೆ ಬೆಳೆಸಿಕೊಂಡವಳು. ತನ್ನ ಮಗನ ನೆನಪನ್ನು ಸ್ಥಿರಗೊಳಿಸಿಕೊಂಡ ಹಾಗೆಯೇ ಅಕಸ್ಮಾತ್ ಗೆಳೆಯರಾದರಲ್ಲ ಅವರ ಬಗ್ಗೆಯೂ ಕವಿ-ಸಾಕ್ಷಿಯ ನಿಷ್ಠೆ ದೃಢವಾಗುತ್ತದೆ. ಕೇವಲ ತನ್ನ ಪ್ರೀತಿಪಾತ್ರರ ಬಗ್ಗೆ ಮಾತ್ರ ಕಾಳಜಿ, ದುಃಖ ಇರುವ ಒಬ್ಬೊಬ್ಬರೂ ಕವಿ-ಸಾಕ್ಷಿಯ ಮೂಲಕ ಸಮುದಾಯವಾಗುತ್ತಾರೆ. ಎರಡನೆಯ ಭಾಗದಲ್ಲಿ ಬರುವ ’ನೆನೆಯುವ ಹೊತ್ತು’ ಎಂಬ ನುಡಿಯು ದಿವಂಗತರ ಆತ್ಮಗಳಿಗೆ ಸಲ್ಲಿಸಲಾಗುತ್ತಿದ್ದ ಸಾಂಪ್ರದಾಯಿಕ ಪ್ರಾರ್ಥನೆಯನ್ನು ಸೂಚಿಸುತ್ತದೆ. ತೀರಿಕೊಂಡ ಒಬ್ಬೊಬ್ಬರ ಹೆಸರನ್ನೂ ಪ್ರಾರ್ಥನೆಯ ಹೊತ್ತಿನಲ್ಲಿ ಹೇಳುವ ಪದ್ಧತಿಗೆ ಈಗ ಅವಕಾಶವಿಲ್ಲ; ಸತ್ತವರ ಹೆಸರ ಪಟ್ಟಿಯನ್ನು ಜಪ್ತಿ ಮಾಡಿದ್ದಾರೆ. ಒಬ್ಬೊಬ್ಬರ ವೈಯಕ್ತಿಕ ನೆನಪೂ ಅಸಾಧ್ಯವಾಗಿ ಕವಿಯು ನೆನಪಿನಲ್ಲುಳಿದ ಮಾತು ಬಳಸಿ ಶಬ್ಬಗಳ ಹೆಣಬಟ್ಟೆ ನೇಯ್ದಿದ್ದಾಳೆ. ರಶಿಯನ್ ಭಾಷೆಯ ಪೊಕ್ರೊವ್ ಎಂಬ ಮಾತಿಗೆ ಸೆರಗು, ಹೊದಿಕೆ ಎಂಬರ್ಥ ಮಾತ್ರವಲ್ಲದೆ ರಶಿಯನ್ ಅರ್ಥಡಾಕ್ಸ್ ಚರ್ಚಿನ ಉತ್ಸವದ ಸಮಯದಲ್ಲಿ ಕನ್ಯೆ ಮೇರಿಗೆ ಹೊದಿಸುತಿದ್ದ ಹೊಳಪಿನ ಚಾದರ ಎಂಬರ್ಥವೂ ಇದೆಯಂತೆ. ಅದು ಭಕ್ತರೆಲ್ಲರನ್ನು ರಕ್ಷಿಸುವ ಚಾದರ. ಹಾಗೆಯೇ ಕವಿಯ ಶಬ್ದ ಚಾದರ ದುಃಖಾರ್ತರಾದ ಇಡೀ ಸ್ತ್ರೀ ಸಮೂಹ ಹೊದೆಯಬಹುದಾದ ರಕ್ಷಣೆಯೂ ಹೌದು, ಸತ್ತವರಿಗಾಗಿ ಅಳುವವರ ನೆನಪೂ ಹೌದು.

ವೇದನೆ ಪಡುತ್ತಿರುವ ಹೆಂಗಸರು ವಿಸ್ಮೃತಿಗೆ ಗುರಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಕವಿ-ಸಾಕ್ಷಿಯದ್ದು. ಸುತ್ತಲ ಬದುಕು ಕಾಲಕ್ರಮದಲ್ಲಿ ಬದಲಾಗುವುದು, ದುಃಖಿತರ ನೆನಪನ್ನು ಒರೆಸಿಬಿಡುವುದು ಖಚಿತ; ಆದರೂ ಕವಿ-ಸಾಕ್ಷಿ ತಾನು ಮಾತ್ರ ಬದಲಾಗದೆ ಉಳಿಯಲು ಬಯಸುತ್ತಾಳೆ. ಅವಳ ಮಟ್ಟಿಗೆ ಕಾಲವೆನ್ನುವುದು ಸೆರೆಮನೆಯ ಮುಂದಿನ ಇಷ್ಟಗಲ ಜಾಗದಲ್ಲಿ ಸ್ಥಿರವಾಗಿ ನಿಂತುಬಿಟ್ಟಿದೆ. ಹಾಗಾಗಿ ಭೀತಿಯುಗದ ದುಃಖದ ನೆನಪಿನ ತೀವ್ರತೆ ಕಡಿಮೆಯಾಗುವುದೇ ಇಲ್ಲ. ಗತಕಾಲದಲ್ಲಿ ಅವಿತಿಟ್ಟುಕೊಂಡು ವರ್ತಮಾನದ ನೋವನ್ನು ಮರೆಯಲು ಆಗದು ನಿರೂಪಕಿಯ ಬಾಲ್ಯ ಕಾಲದ ಕಡಲ ದಂಡೆ, ಯೌವನ ಕಾಲದ ಅತೃಪ್ತ ಭೂತ ಅಲೆಯುವ ಅರಸರ ಉದ್ಯಾನ ಇವೆರಡೂ ಭಾವನಾತ್ಮಕವಾಗಿ ಬಲು ದೂರದ, ಕೈಗೆಂದೂ ಎಟುಕದ ಸಂಗತಿಗಳು. ತೆಗೆಯದ ಚಿಲುಕದ, ಜಗ್ಗದ ಬಾಗಿಲಿನ ವರ್ತಮಾನವೊಂದೇ ಅವಳ ನೋವನ್ನು ಕೊನೆಯಿರದ ಹಾಗೆ ಹಿಗ್ಗಿಸಿವೆ. ಹಿಂದೊಮ್ಮೆ ಅನಿಸಿದ್ದಂತೆ ಸಾವಿನಲ್ಲಿ ಬಿಡುಗಡೆ ಕಾಣಬಹುದಿತ್ತೋ ಏನೋ. ಈಗ ಆಕೆ ಪರಮತ್ಯಾಗವನ್ನು ಮರೆಯುತ್ತಾಳೆ. ಬಿಡುಗಡೆಯ ಎಲ್ಲ ದಾರಿಗಳನ್ನೂ ಧಿಕ್ಕರಿಸಿ ಇಲ್ಲೇ ಇದ್ದು, ಬದುಕಿನಾಚೆಗೆ ಸಾಗಿದವರನ್ನು ನೆನೆಯುವ ಗಟ್ಟಿಗಿತ್ತಿಯಾಗುತ್ತಾಳೆ ಎಂದೂ ಬದಲಾಗದ ಎಂದೂ ಚಲಿಸದ ಸ್ಥಿರ ವಿಗ್ರಹವಾಗುತ್ತಾಳೆ (ರಶಿಯನ್ ಭಾಷೆಯಲ್ಲಿ ವಿಗ್ರಹ ಅನ್ನುವುದಕ್ಕೆ ಪಮ್ಯಕ್-ನಿಕ್ ಎಂಬ ಶಬ್ದವಿದೆಯಂತೆ, ಅದರಲ್ಲಿ ಪಮ್ಯಕ್ ಅನ್ನುವುದು ಸ್ಮರಣೆಯನ್ನು ಸೂಚಿಸುತ್ತದಂತೆ). ಬಲಿಯಾದವರೆಲ್ಲರ ನೆನಪಾಗಿ ಆಕೆ ಉಳಿಯುತ್ತಾಳೆ. ನಿಸರ್ಗದ ಹೊಸ ಬದುಕು ತೊಡಗುವ ಪ್ರತಿ ಚೈತ್ರದಲ್ಲೂ ಅವಳ ಕಂಬನಿ ಹರಿದು ಎಂದೂ ಕರಗದ ದುಃಖದಂತಿರುವ ಹಿಮದೊಡನೆ ಸೇರುತ್ತದೆ. ಬದುಕು ಸಾಗುತ್ತಿರುತ್ತದೆ.

ಅಖ್ಮತೋವಾ ಕಾಯುತ್ತ ನಿಂತಿದ್ದ ಎಡೆಯಲ್ಲಿ ಕಂಚಿನ ವಿಗ್ರಹ ಇಲ್ಲ. ಆದರೆ ಪ್ರಾಚೀನ ಸಾಹಿತ್ಯವನ್ನು ಬಲ್ಲ ಅಖ್ಮತೋವಳಿಗೆ ಹೊರೇಸನೆಂಬ ಪ್ರಾಚೀನ ’ಕಂಚಿಗಿಂತ ಹೆಚ್ಚು ಕಾಲ ಉಳಿದಿರುವ ನುಡಿ ಸ್ಮಾರಕ ನಿರ್ಮಿಸಿದ್ದೇನೆ’ ಎಂದು ತನ್ನ ಕವಿತೆಯ ಬಗ್ಗೆಯೇ ಹೇಳಿಕೊಂಡ ಮಾತು ಗೊತ್ತಿತ್ತು. ’ಶಾಂತಿಗೀತೆ’ ಅಂಥದೊಂದು ನುಡಿ ಸ್ಮಾರಕ; ಸತ್ತವರನ್ನು ದುಃಖದಿಂದಲೂ ನಿಷ್ಠೆ ಪ್ರೀತಿಗಳಿಂದಲೂ ದಿಟ್ಟಿಸುತ್ತ ನಿಂತೇ ಇರುವ ಸ್ಮಾರಕ.

(ಇಲ್ಲಿಗೆ ಶಾಂತಿಗೀತೆಗೊಂದು ಪ್ರವೇಶ ಪ್ರಬಂಧ ಮುಕ್ತಾಯಗೊಂಡಿದೆ)

ಪ್ರೊ. ಓ ಎಲ್ ನಾಗಭೂಷಣಸ್ವಾಮಿ

ಪ್ರೊ. ಓ ಎಲ್ ನಾಗಭೂಷಣಸ್ವಾಮಿ
ನಾಗಭೂಷಣಸ್ವಾಮಿ ಖ್ಯಾತ ಬರಹಗಾರರು. ’ನನ್ನ ಹಿಮಾಲಯ’, ’ಯುದ್ಧ ಮತ್ತು ಶಾಂತಿ’ (ವಾರ್ ಅಂಡ್ ಪೀಸ್), ನೆರೂಡ ನೆನಪುಗಳು (ಪಾಬ್ಲೋ ನೆರೂಡ ಆತ್ಮಕತೆ), ’ಬೆಂಕಿಗೆ ಬಿದ್ದ ಬಯಲು ಮತ್ತು ಪೆದ್ರೋ ಪರಾಮೋ’ (ಹ್ವಾನ್ ರುಲ್ಫೋನ ಕಥೆಗಳು ಮತ್ತು ಕಾದಂಬರಿ) ಅವರ ಪ್ರಕಟಿತ ಪುಸ್ತಗಳಲ್ಲಿ ಕೆಲವು. ’ಕ್ರೈಂ ಅಂಡ್ ಫನಿಶ್ಮೆಂಟ್’ ಅನುವಾದ ಪ್ರಕಟಣೆಗೆ ಸಿದ್ಧವಾಗಿದೆ.


ಇದನ್ನೂ ಓದಿ: ಅನ್ನಾ ಅಖ್ಮತೋವಾರ ಶಾಂತಿಗೀತೆಗೊಂದು ಪ್ರವೇಶ: ಭಾಗ-1

ಇದನ್ನೂ ಓದಿ: ಹೊಸ ಅನುವಾದ; ಅನ್ನಾ ಅಖ್ಮತೋವಾರ ಶಾಂತಿಗೀತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...