Homeಮುಖಪುಟರಾಮನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಹುಸೇನ್: ನಿಖಿಲ್ ಕುಮಾರಸ್ವಾಮಿಗೆ ಪೈಪೋಟಿ ಸಾಧ್ಯತೆ

ರಾಮನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಹುಸೇನ್: ನಿಖಿಲ್ ಕುಮಾರಸ್ವಾಮಿಗೆ ಪೈಪೋಟಿ ಸಾಧ್ಯತೆ

- Advertisement -
- Advertisement -

ತೀವ್ರ ಕುತೂಹಲ ಮೂಡಿಸಿರುವ ವಿಧಾನಸಭಾ ಕ್ಷೇತ್ರಗಳಲ್ಲೊಂದಾದ ರಾಮನಗರಕ್ಕೆ ಇಕ್ಬಾಲ್ ಹುಸೇನ್‌ರವರನ್ನು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ಘೋಷಿಸಿದೆ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಪ್ರಬಲ ಅಭ್ಯರ್ಥಿಗಳಾಗಿದ್ದು, ಕ್ಷೇತ್ರದ ಸದ್ಯದ ಸ್ಥಿತಿಗತಿ ಹೇಗಿದೆ ಮತ್ತು ಗೆಲುವಿನ ಸಾಧ್ಯತೆ ಹೇಗಿದೆ ಎಂದು ನೋಡೋಣ.

ರಾಮನಗರ ವಿಧಾನಸಭಾ ಕ್ಷೇತ್ರದಿಂದ ಗೆದ್ದವರು ಸಿಎಂ ಆಗುತ್ತಾರೆ ಎಂಬ ಮಾತು ಮತ್ತು ಇಲ್ಲಿಂದ ಗೆದ್ದು ಸಿಎಂ ಆದವರು ಪೂರ್ಣಾವಧಿ ಪೂರೈಸುವ ಮೊದಲೇ ಸಿಎಂ ಸ್ಥಾನ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆಯೂ ಜನರಲ್ಲಿತ್ತು. ನಾಲ್ವರು ಸಿಎಂಗಳು ಐದು ಬಾರಿ ಅಧಿಕಾರ ನಡೆಸಲು ಸಹಕರಿಸಿರುವ ಜಿಲ್ಲೆಯಿದು. ಕೆಂಗಲ್ ಹನುಮಂತಯ್ಯ, ಎಚ್.ಡಿ. ದೇವೇಗೌಡರು ರಾಮನಗರದಿಂದ ಆಯ್ಕೆಯಾಗಿ ತಲಾ ಒಮ್ಮೊಮ್ಮೆ ಸಿಎಂ ಆದರೆ, ಎಚ್.ಡಿ. ಕುಮಾರಸ್ವಾಮಿಯವರು ಇಲ್ಲಿಂದ ಗೆದ್ದು ಎರಡು ಬಾರಿ ಸಿಎಂ ಆಗಿದ್ದಾರೆ. ರಾಮಕೃಷ್ಣ ಹೆಗಡೆಯವರು ಕೂಡ 1983ರಲ್ಲಿ ಸಿಎಂ ಆದ ನಂತರ ಕನಕಪುರ ಉಪಚುನಾವಣೆಯಲ್ಲಿ ಗೆದ್ದು ವಿಧಾನಸಭಾ ಸದಸ್ಯರಾಗಿದ್ದರು. ಈ ಎಲ್ಲ ಕಾರಣಗಳಿಂದ ರಾಮನಗರ ರಾಜಕೀಯ ಪಕ್ಷಗಳಿಗೆ-ನಾಯಕರಿಗೆ ಜಿದ್ದಾಜಿದ್ದಿನ ಜಿಲ್ಲೆ.

ಒಕ್ಕಲಿಗ ಪ್ರಾಬಲ್ಯದ ಈ ಕ್ಷೇತ್ರದಲ್ಲಿ ದಲಿತರು ಮತ್ತು ಮುಸ್ಲಿಮರು ಸಹ ಗಣನೀಯ ಸಂಖ್ಯೆಯಲ್ಲಿದ್ದು, ಪ್ರತಿ ಬಾರಿಯೂ ಒಕ್ಕಲಿಗರೆ ನಿರ್ಣಾಯಕ ಮತದಾರರಾಗಿದ್ದಾರೆ. 2007ರಲ್ಲಿ ರಾಮನಗರ ಅಧಿಕೃತ ಜಿಲ್ಲೆಯ ಸ್ಥಾನಮಾನ ಪಡೆದ ನಂತರ ಇಲ್ಲಿನ ಜನತೆ ಹಲವು ಕನಸುಗಳನ್ನು ಕಂಡಿದ್ದರು. ಜಿಲ್ಲೆಯಾಗಿ 15 ವರ್ಷ ಪೂರೈಸಿದರೂ ಕೆಲ ಕಟ್ಟಡಗಳನ್ನು ಎತ್ತಿರುವುದು ಬಿಟ್ಟರೆ ಮಹತ್ವದ ಬದಲಾವಣೆಯಾಗಿಲ್ಲ ಎನ್ನುವುದು ಜನರ ಕೊರಗು. ಇಲ್ಲಿಂದ ಗೆದ್ದವರು ಜನರ ಕೈಗೆ ಸಿಗುವುದಿಲ್ಲ, ಬಹುತೇಕ ರೈತಾಪಿ ಜನರಿದ್ದರೂ ಪರಿಸ್ಥಿತಿ ಸುಧಾರಿಸಿಲ್ಲ, ರೇಷ್ಮೆ ಬೆಳೆ ಕೈ ಹಿಡಿಯುತ್ತಿಲ್ಲ, ಸುಸಜ್ಜಿತ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಹಲವು ಸಮಸ್ಯೆಗಳು ಇಂದಿಗೂ ಜೀವಂತವಾಗಿವೆ. ಇಲ್ಲಿಂದ 2023ರಲ್ಲಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯನ್ನು ಗೆಲ್ಲಿಸಿ ವಿಧಾನಸಭೆಗೆ ಕಳಿಸಬೇಕೆಂದು ಮಾಜಿ ಸಿಎಂ ಎಚ್‌ಡಿಕೆ ನಿರ್ಧರಿಸಿದ್ದಾರೆ. ಕಾಂಗ್ರೆಸ್‌ ಪಕ್ಷ ಸಹ ಜಿಲ್ಲೆಯಲ್ಲಿ ಮೇಕೆದಾಟು ಯೋಜನೆಗಾಗಿನ ಪಾದಯಾತ್ರೆ ನಡೆಸಿ ಸುದ್ದಿ ಮಾಡಿತ್ತು. ಈಗ ಇಕ್ಬಾಲ್ ಹುಸೇನ್‌ರವರನ್ನು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ಘೋಷಿಸಿದೆ.

ರಾಮನಗರದಲ್ಲಿ ಒಟ್ಟು ಅಂದಾಜು 2,20,000 ಮತದಾರರಿದ್ದಾರೆ. ಒಕ್ಕಲಿಗ 90,000 ಮತಗಳು, ಮುಸ್ಲಿಂ 40,000, ಪರಿಶಿಷ್ಟ ಜಾತಿಯ 40,000, ಲಿಂಗಾಯತ 15,000 ಮತ್ತು 35,000 ಹೆಚ್ಚು ಇತರ ಸಮುದಾಯದ ಮತದಾರರಿದ್ದಾರೆ ಎನ್ನಲಾಗಿದೆ. ಆರಂಭದಲ್ಲಿ ಕಾಂಗ್ರೆಸ್ ಕೈ ಹಿಡಿದಿದ್ದ ಒಕ್ಕಲಿಗ ಮತಗಳು ಇತ್ತೀಚಿನ ವರ್ಷಗಳಲ್ಲಿ ಜೆಡಿಎಸ್‌ನ ಮತಬ್ಯಾಂಕ್ ಆಗಿ ಪರಿವರ್ತನೆ ಆಗಿವೆ. ಹಿಂದೊಮ್ಮೆ ಕೋಮು ಸೂಕ್ಷ್ಮ ಕ್ಷೇತ್ರವಾಗಿದ್ದ ಇದು ಇತ್ತೀಚಿನ ವರ್ಷಗಳಲ್ಲಿ ಅದರಿಂದ ಹೊರಬಂದಿದೆ. ಇಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಫೈಟ್ ಇರುವುದರಿಂದ ಇದು ಸಾಧ್ಯವಾಗಿದೆ.

ರಾಮನಗರ ಕ್ಷೇತ್ರದಲ್ಲಿ 1957ರಿಂದ ಒಟ್ಟು 6 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಸಿ.ಎಂ ಲಿಂಗಪ್ಪನವರು ಇಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಎರಡು ಬಾರಿ ಸಚಿವರು ಸಹ ಆಗಿದ್ದಾರೆ. ನಾಲ್ಕು ಬಾರಿ ಜೆಡಿಎಸ್, ಎರಡು ಬಾರಿ ಜನತಾ ಪಕ್ಷದ ಅಭ್ಯರ್ಥಿಗಳು, ಒಮ್ಮೆ ಜನತಾದಳ ಮತ್ತು ಒಮ್ಮೆ ಪಕ್ಷೇತರ ಅಭ್ಯರ್ಥಿ ಇಲ್ಲಿಂದ ಗೆಲುವು ಸಾಧಿಸಿದ್ದಾರೆ.

ಎಚ್.ಡಿ ದೇವೇಗೌಡರ ಪ್ರವೇಶ

ಹಾಸನ ಜಿಲ್ಲೆಯ ಎಚ್.ಡಿ ದೇವೇಗೌಡರು 1985ರಲ್ಲಿ ಸಾತನೂರು ಕ್ಷೇತ್ರಕ್ಕೆ ಕಾಲಿಟ್ಟರು. ಆ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್‌ರನ್ನು ಸೋಲಿಸಿದರು. ಆದರೆ ದೇವೇಗೌಡರು 1989ರಲ್ಲಿ ಹೊಳೆ ನರಸೀಪುರದಲ್ಲಿ ಸೋಲನ್ನು ಅನುಭವಿಸಿದ್ದರು. 1994ರಲ್ಲಿಯೂ ಅಲ್ಲಿ ಕಠಿಣ ಸವಾಲು ಎದುರಿಸಬೇಕಾದ ಪರಿಸ್ಥಿತಿಯಲ್ಲಿದ್ದಾಗ ರಾಮನಗರದ ಮುಖಂಡರು ಇಲ್ಲಿಗೆ ಆಹ್ವಾನ ನೀಡಿದರು. ಆಗ ರಾಮನಗರ ಕ್ಷೇತ್ರದಲ್ಲಿ ಜನತಾದಳದಿಂದ ಜಯಗಳಿಸಿದ ಅವರು ರಾಜ್ಯದ 14ನೇ ಸಿಎಂ ಆದರು. ಅಲ್ಲಿಂದ ರಾಮನಗರ ಹೆಚ್ಚು ಕಡಿಮೆ ಜೆಡಿಎಸ್ ಪಕ್ಷದ ಭದ್ರಕೋಟೆಯಾಯಿತು.

ಅಂಬರೀಶ್‌ಗೆ ಸೋಲು

1996 ರಲ್ಲಿ ರಾಮನಗರ ಕ್ಷೇತ್ರದ ಶಾಸಕರಾಗಿದ್ದ ದೇವೇಗೌಡರಿಗೆ ಪ್ರಧಾನಿ ಪಟ್ಟ ಒಲಿಯಿತು. ಆಗ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹಾಗಾಗಿ 1997 ರಲ್ಲಿ ರಾಮನಗರ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಯಿತು. ಆಗ ಜನಪ್ರಿಯ ಚಿತ್ರನಟರಾಗಿದ್ದ ಅಂಬರೀಶ್‌ರನ್ನು ಜನತಾದಳದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಯಿತು. ಭಾರೀ ಪ್ರಚಾರ ನಡೆಸಿದ್ದ ಅವರೇ ಬಹುತೇಕ ಜಯಗಳಿಸುತ್ತಾರೆ ಎಂದು ನಂಬಲಾಗಿತ್ತು. ಆದರೆ ಆ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಕಾಂಗ್ರೆಸ್ ಪಕ್ಷದ ಸಿ.ಎಂ ಲಿಂಗಪ್ಪನವರು 9,610 ಮತಗಳ ಅಂತರದಿಂದ ಅಂಬರೀಶ್‌ರನ್ನು ಸೋಲಿಸಿದರು.

ಕುಮಾರಸ್ವಾಮಿ ಹಿಡಿತಕ್ಕೆ ಸಿಕ್ಕ ಕ್ಷೇತ್ರ

ಇಲ್ಲಿ 2004ರಿಂದ ಜೆಡಿಎಸ್‌ನ ಎಚ್.ಡಿ ಕುಮಾರಸ್ವಾಮಿಯವರು ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. ಎರಡು ಬಾರಿ ಅವರು ಕ್ಷೇತ್ರ ತ್ಯಜಿಸಿದಾಗ ನಡೆದ ಉಪಚುನಾವಣೆಯಲ್ಲಿಯೂ ಸಹ ಜೆಡಿಎಸ್ ಜಯಭೇರಿ ಭಾರಿಸಿದೆ. ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ರಾಮನಗರ, ಬಿಡದಿಯಲ್ಲಿ ತೋಟ, ಮನೆ ಹೊಂದಿರುವ ಎಚ್.ಡಿ.ಕೆ ಇಲ್ಲಿಯೇ ನೆಲೆಯೂರಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿಯವರು 92,626 ಮತಗಳನ್ನು ಪಡೆದು ಜಯಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಕೂಡ 69,990 ಮತಗಳನ್ನು ಪಡೆದು ತೀವ್ರ ಪೈಪೋಟಿ ನೀಡಿದ್ದರು. ಆ ಚುನಾವಣೆಯಲ್ಲಿ ಎಚ್‌.ಡಿ.ಕೆ ಬದಲು ಜೆಡಿಎಸ್‌ನಿಂದ ಬೇರೆ ಯಾರು ನಿಂತಿದ್ದರೂ ಗೆಲುವು ಕಷ್ಟವಿತ್ತು. ಆಗ ರಾಮನಗರದ ಹಲವು ಬೂತ್‌ಗಳಲ್ಲಿ ಇಕ್ಬಾಲ್ ಹುಸೇನ್ ಲೀಡ್ ಪಡೆದಿದ್ದರೆ ಕೆಲ ಬೂತ್‌ಗಳಲ್ಲಿ ಕುಮಾರಸ್ವಾಮಿಯವರಿಗೆ 10 ಕ್ಕಿಂತ ಕಡಿಮೆ ಮತಗಳು ಬಿದ್ದಿದ್ದವು!. ಹಾಗಾಗಿ ಆ ಚುನಾವಣೆಯನ್ನು ಎಚ್‌.ಡಿ.ಕೆ ಮರೆಯುವಂತಿಲ್ಲ. ನಂತರ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಯವರು ಸಿಎಂ ಆದರು. ಅವರು ಚನ್ನಪಟ್ಟಣ ಕ್ಷೇತ್ರದಲ್ಲಿಯು ಸಹ ಗೆಲುವು ಸಾಧಿಸಿದ್ದರಿಂದ ರಾಮನಗರ ಕ್ಷೇತ್ರವನ್ನು ತ್ಯಜಿಸಿದರು. ಆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿಯವರನ್ನು ಜೆಡಿಎಸ್‌ನಿಂದ ಕಣಕ್ಕಿಳಿದರು. ಕಾಂಗ್ರೆಸ್ ಪಕ್ಷವು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರಿಂದ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಆದರೆ ಕಾಂಗ್ರೆಸ್ ಟಿಕೆಟ್ ಬಯಸಿದ್ದ ಸಿ.ಎಂ. ಲಿಂಗಪ್ಪನವರ ಮಗ ಎಲ್ ಚಂದ್ರಶೇಖರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಅಭ್ಯರ್ಥಿ ಆದರು. ಆದರೆ ಚುನಾವಣೆಗೆ ಎರಡು ದಿನ ಬಾಕಿ ಇದ್ದಾಗ ಅವರು ಬಿಜೆಪಿಗೆ ರಾಜೀನಾಮೆ ನೀಡಿ ವಾಪಸ್ ಕಾಂಗ್ರೆಸ್ ಸೇರಿ ಸ್ಪರ್ಧೆಯಿಂದ ಹಿಂದೆ ಸರಿದು, ನಾಮಕಾವಸ್ಥೆ ಚುನಾವಣೆ ಎದುರಿಸಿ ಸೋತರು. ಇದರಲ್ಲಿ ಡಿ.ಕೆ ಸಹೋದರರ ಕೈವಾಡವಿದ್ದಿದ್ದರಿಂದ ಬಿಜೆಪಿಗೆ ತೀವ್ರ ಮುಜುಗರ ಉಂಟಾಯಿತು. ಇದರಿಂದಾಗಿ ಆ ಚುನಾವಣೆಯಲ್ಲಿ ಜೆಡಿಎಸ್‌ನ ಅನಿತಾ ಕುಮಾರಸ್ವಾಮಿಯವರು ಅನಾಯಾಸವಾಗಿ 1,06,137 ಮತಗಳ ಅಂತರದ ಭಾರೀ ಗೆಲುವು ದಾಖಲಿಸಿದರು.

ರಾಮನಗರದಲ್ಲಿ ಡಿ.ಕೆ ಶಿವಕುಮಾರ್‌ ಪಾತ್ರವೇನು?

ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ರಾಮನಗರದ ಕನಕಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರು ಸಹ ಒಕ್ಕಲಿಗರ ನಾಯಕ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಆದರೆ ಅದೇ ಸಮಯಕ್ಕೆ ದೇವೇಗೌಡರ ಕುಟುಂಬದ ಬೆಂಬಲವನ್ನೂ ನೀರಿಕ್ಷಿಸುತ್ತಿದ್ದಾರೆ. ಹಾಗಾಗಿಯೇ ಅವರು ಕುಮಾರಸ್ವಾಮಿಯವರೊಂದಿಗೆ ಚೆನ್ನಾಗಿದ್ದಾರೋ ಇಲ್ಲವೋ ತಿಳಿಯುವುದೇ ಕಷ್ಟ ಎನಿಸಿಬಿಡುತ್ತದೆ.

ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ಈ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಒಕ್ಕಲಿಗರ ಪಕ್ಷ ಎಂಬುದು ಒಂದು ಕಾರಣವಾದರೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳನ್ನು ಹೊಂದಿಲ್ಲದಿರುವುದು ಎರಡನೇ ಕಾರಣ. ರಾಮನಗರದಲ್ಲಿ ಕಾಂಗ್ರೆಸ್ ತಲೆಹಾಕುವುದಿಲ್ಲ, ಕನಕಪುರದಲ್ಲಿ ಜೆಡಿಎಸ್ ತಲೆ ಹಾಕುವುದಿಲ್ಲ. ಡಿ.ಕೆ.ಶಿ ಮತ್ತು ಎಚ್.ಡಿ.ಕೆ ನಡುವೆ ಈ ಹೊಂದಾಣಿಕೆಯಿದ್ದು ಚುನಾವಣೆಯಲ್ಲಿ ಗೆಲ್ಲಲು ಪರಸ್ಪರ ಸಹಕರಿಸುತ್ತಾರೆ ಎಂಬ ಆರೋಪ ಸಹ ಇದೆ. ಹಾಗಾಗಿಯೇ ಕುಮಾರಸ್ವಾಮಿಯವರು ರಾಮನಗರ ನಿಖಿಲ್ ಕುಮಾರಸ್ವಾಮಿಯವರಿಗೆ ಸೇಫ್ ಕ್ಷೇತ್ರ ಎಂದು ಪರಿಗಣಿಸಿ ಅಲ್ಲಿಂದ ಕಣಕ್ಕಿಳಿಸಲು ಬಯಸಿದ್ದಾರೆ.

ನಿಖಿಲ್ ಜಯ ಸುಲಭವೇ?

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು ಕಂಡಿರುವ ನಿಖಿಲ್ ಕುಮಾರಸ್ವಾಮಿ ಈ ಬಾರಿ ಶತಾಯ ಗತಾಯ ಗೆಲ್ಲಲೇಬೇಕೆಂದು ನಿರ್ಧಿರಿಸಿದ್ದಾರೆ. ದೇವೇಗೌಡರ ಕುಟುಂಬದ ಮೇಲೆ ಜಿಲ್ಲೆಯ ಜನರಿಗಿರುವ ಪ್ರೀತಿ, ಜೆಡಿಎಸ್ ಒಕ್ಕಲಿಗರ ಪಕ್ಷವೆಂಬ ಟ್ಯಾಗ್‌ಲೈನ್ ಮತ್ತು ಈಗಾಗಲೇ ಮಂಡ್ಯದಲ್ಲಿ ಸೋತಿರುವ ಅನುಕಂಪದ ಅಲೆ ನಿಖಿಲ್ ಕುಮಾರಸ್ವಾಮಿಯವರನ್ನು ಈ ಬಾರಿ ಗೆಲುವಿನ ದಡ ಸೇರಿಸಲಿದೆ ಎಂಬುದು ಜೆಡಿಎಸ್ ಕಾರ್ಯಕರ್ತರ ಅಭಿಮತ.

ಪುಟಿದೇಳಲಿದೆಯೇ ಕಾಂಗ್ರೆಸ್?

ಇನ್ನೊಂದೆಡೆ ಕಾಂಗ್ರೆಸ್ ಪಕ್ಷವು ಇಲ್ಲಿ ಪೈಪೋಟಿ ಕೊಡುವ ಸಾಧ್ಯತೆಯಿದೆ. ಕುಮಾರಸ್ವಾಮಿಯವರ ಕುಟುಂಬದವರೆ ಇಲ್ಲಿ ಪದೇ ಪದೇ ಗೆಲ್ಲುವುದು ಏಕೆ? ಸ್ಥಳೀಯರಿಲ್ಲವೇ ಎಂಬ ಮಾನದಂಡ ಮುನ್ನಲೆಗೆ ತಂದು ಪ್ರಚಾರ ಮಾಡಬಹುದು. ಇನ್ನು ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 2018ರ ಚುನಾವಣೆಯಲ್ಲಿ 69,990 ಮತಗಳನ್ನು ಪಡೆದು ಎಚ್.ಡಿ ಕುಮಾರಸ್ವಾಮಿಯವರಿಗೆ ಪೈಪೋಟಿ ನೀಡಿದ್ದರು. ಹಾಗಾಗಿ ಅವರನ್ನು ಜೆಡಿಎಸ್ ನಿರ್ಲಕ್ಷಿಸಲು ಸಾಧ್ಯವಿಲ್ಲ. ಅವರು ಮುಸ್ಲಿಂ, ದಲಿತ ಮತ್ತು ಇತರ ಹಿಂದುಳಿದ ಮತಗಳನ್ನು ಪಡೆದು ಗೆಲ್ಲುವ ಬಯಕೆಯಲ್ಲಿದ್ದಾರೆ.

ಬಿಜೆಪಿಯ ಸ್ಥಿತಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೂ ರಾಮನಗರ ಜಿಲ್ಲೆಯಲ್ಲಿ ಬಿಜೆಪಿಗೆ ಯಾವುದೇ ನೆಲೆ ಇಲ್ಲ. ಈ ಕ್ಷೇತ್ರದಲ್ಲಿ ಇದುವರೆಗೆ ಒಮ್ಮೆಯೂ ಗೆಲ್ಲಲಾಗದ ಬಿಜೆಪಿ, ಎರಡು ಬಾರಿ ಮಾತ್ರ ರನ್ನರ್ ಅಪ್ ಆಗಿದೆ ಅಷ್ಟೇ. ಕಳೆದ ಬಾರಿಯಂತೂ ಎಲ್ ಚಂದ್ರಶೇಖರ್‌ರನ್ನು ಪಕ್ಷಕ್ಕೆ ಸೇರಿಸಿಕೊಂಡ ವಾರದಲ್ಲಿಯೇ ಪಕ್ಷ ತೊರೆದು ಭಾರೀ ಮುಜುಗರ ಮಾಡಿದ್ದಾರೆ. ಈಗ ಉಸ್ತುವಾರಿ ಮಂತ್ರಿ ಅಶ್ವಥ್ ನಾರಾಯಣ್ ಮತ್ತು ಸಿ.ಪಿ ಯೋಗೀಶ್ವರ್ ಜಿಲ್ಲೆಯಲ್ಲಿ ಬಿಜೆಪಿ ಬೇರು ಬಿಡಲು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇಲ್ಲಿನ ಜನ ಗೋ ಬ್ಯಾಕ್ ಅಶ್ವಥ್ ನಾರಾಯಣ್ ಎನ್ನುತ್ತಿದ್ದಾರೆ.

ಈ ಸಂದರ್ಭದಲ್ಲಿ ಗೌತಮ್ ಗೌಡ ಎಂಬುವವರು ಬಿಜೆಪಿ ಅಭ್ಯರ್ಥಿಯಾಗಲು ಯತ್ನ ನಡೆಸಿದ್ದಾರೆ. ಪುಣ್ಯವತಿ ಎಂಬುವವರು ಸಹ ಆಕಾಂಕ್ಷಿಯಾಗಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಇವರಿಬ್ಬರ ನಡುವೆ ಜಗಳವಾಗಿತ್ತು. ಹಾಗೆ ನೊಡಿದರೆ ಇವರಿಬ್ಬರೂ ಜನರಿಗೆ ಪರಿಚಿತರಲ್ಲ. ಹಾಗಾಗಿ ಈ ಬಾರಿಯೂ ಬಿಜೆಪಿಯದು ಕೇವಲ ನಾಮಕವಾಸ್ತೆ ಸ್ಪರ್ಧೆಯಾಗಲಿದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಿಕ್ಕಮಗಳೂರು: ಕೋಮು ಕಾರ್ಮೋಡದ ನಡುವೆ ಮೂಡಿದ “ರವಿ”ಗೆ ಗ್ರಹಣ?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...