Homeಮುಖಪುಟನಿತೀಶ್ ಕುಮಾರ್ - ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಲವೇ?

ನಿತೀಶ್ ಕುಮಾರ್ – ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಲವೇ?

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ತಯಾರಿಯನ್ನು ವಿರೋಧ ಪಕ್ಷಗಳು ಎರಡು ವರ್ಷ ಮುಂಚೆಯೇ ಆರಂಭಿಸಿವೆ. ವಿಭಿನ್ನ ಸಂಯೋಜನೆಗಳಲ್ಲಿ ವಿಭಿನ್ನ ಆಯಾಮದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಕಾಂಗ್ರೆಸ್ ಪಕ್ಷ ’ಭಾರತ್ ಜೋಡೋ ಯಾತ್ರಾ’ ಹೆಸರಿನಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಆರಂಭಿಸಿದೆ. 2500 ಕಿಲೋಮೀಟರ್ ಉದ್ದದ ಈ ಕಾಲ್ನಡಿಗೆ ಜಾಥಾದ ನಾಯಕತ್ವವನ್ನು ಖುದ್ದು ರಾಹುಲ್ ಗಾಂಧಿ ವಹಿಸಿಕೊಂಡಿದ್ದಾರೆ. ಈ ಪಾದಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡರೆ ಇದೊಂದು ಚರಿತ್ರಾರ್ಹ ಯಾತ್ರೆ ಎನಿಸಿಕೊಳ್ಳಲಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಈಗ ಆರು ದಿನಗಳನ್ನು ಪೂರೈಸಿರುವ ಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಹರಿದುಬರುತ್ತಿದ್ದು ಕಾಂಗ್ರೆಸ್ ಪಕ್ಷ ಕ್ರಿಯಾಶೀಲವಾದಂತೆ ಕಂಡುಬರುತ್ತಿದೆ. ಸಾಮಾಜಿಕ ಸಂಘಟನೆಗಳು, ಜನಪರ ಚಿಂತಕರು ಗಣನೀಯ ಸಂಖ್ಯೆಯಲ್ಲಿ ’ಭಾರತ್ ಜೋಡೋ ಯಾತ್ರೆ’ಯನ್ನು ಬೆಂಬಲಿಸಿ ಭಾಗವಹಿಸುತ್ತಿರುವುದು ಈ ಪಾದಯಾತ್ರೆಯಲ್ಲಿ ಎದ್ದುಕಾಣುತ್ತಿರುವ ವಿದ್ಯಮಾನ. ಈ ಯಾತ್ರೆಗೆ ಜನಸಾಮಾನ್ಯರು ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವುದು ಆರೆಸ್ಸೆಸ್-ಬಿಜೆಪಿ ನಾಯಕರ ಚಿಂತೆಗೆ ಕಾರಣವಾಗಿದೆ.

ರಾಹುಲ್ ಗಾಂಧಿ

ಮತ್ತೊಂದೆಡೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಂದ್ರಿತವಾಗಿ ವಿರೋಧ ಪಕ್ಷಗಳು ಒಂದುಗೂಡುವ ಕಸರತ್ತು ಆರಂಭವಾಗಿದೆ. ನಿತೀಶ್‌ರ ಜೆಡಿಯು ಪಕ್ಷ ಬಿಜೆಪಿಗೆ ಸರಿಯಾದ ಗುನ್ನ ಇಟ್ಟು ವಿರೋಧ ಪಕ್ಷಗಳ ಪಾಳಯಕ್ಕೆ ಲಾಗಹೊಡೆದು ಆರ್‌ಜೆಡಿ, ಕಾಂಗ್ರೆಸ್‌ಗಳ ಜೊತೆ ಸೇರಿ ಹೊಸ ಮೈತ್ರಿ ಸರ್ಕಾರ ರಚಿಸಿದ್ದು ಕೇವಲ ಬಿಹಾರ ರಾಜ್ಯವೊಂದಕ್ಕೆ ಸೀಮಿತವಾದ ರಾಜಕೀಯ ವಿದ್ಯಮಾನವಲ್ಲ, ಈ ಮೈತ್ರಿಯ ಹಿಂದೆ 2024ರ ರಾಷ್ಟ್ರೀಯ ರಾಜಕಾರಣದ ಲೆಕ್ಕಾಚಾರ ಬಹುಮುಖ್ಯವಾಗಿ ಕೆಲಸ ಮಾಡಿದೆ ಎಂಬ ಮಾತು ಆಗಲೇ ಕೇಳಿಬಂದಿತ್ತು. ಹೊಸ ಸರ್ಕಾರ ರಚಿಸಿದ ಒಂದೆರಡು ವಾರಗಳಲ್ಲೇ ನಿತೀಶ್ ಪಾಟ್ನಾದಿಂದ ಹೊರಬಿದ್ದು ದೇಶ ಸಂಚಾರ ಆರಂಭಿಸಿರುವುದು ಆ ಮಾತನ್ನು ರುಜುವಾತು ಮಾಡಿದೆ. 2024ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ವಿರೋಧ ಪಕ್ಷಗಳನ್ನು ಒಂದುಗೂಡಿಸುವ ಕೆಲಸದಲ್ಲಿ ನಿತೀಶ್ ಬಹಳ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇಲ್ಲಿ ಮತ್ತೊಂದು ಅಂಶವನ್ನು ನಾವು ಗಮನಿಸಲೇಬೇಕು. ಗೋದಿ ಮೀಡಿಯಾದ ನಿರೂಪಕರು ವಿರೋಧ ಪಕ್ಷಗಳ ವಕ್ತಾರರ ಮುಂದೆ ಪದೇಪದೇ ಒಡ್ಡುತ್ತಿದ್ದ ಪ್ರಶ್ನೆ: ’ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರು?’, ’ಪ್ರಧಾನಿ ಮೋದಿ ಅಲ್ಲವಾದರೆ ಯಾರಿದ್ದಾರೆ?’- ಎಂಬುದು. ಉತ್ತರ ಕಾಣದ ಒಗಟಿನಂಥಾ ಪ್ರಶ್ನೆಗೆ ಇದೀಗ ಬಹುಮಟ್ಟಿಗೆ ಉತ್ತರ ಸಿಕ್ಕಂತಾಗಿದೆ. ನಿತೀಶ್ ಕುಮಾರ್ ಅವರ ಹೆಸರನ್ನಾಗಲಿ ಅಥವಾ ಇನ್ನಾರದೇ ಹೆಸರನ್ನಾಗಲಿ ಪ್ರಧಾನಿ ಅಭ್ಯರ್ಥಿ ಎಂದು ವಿರೋಧ ಪಕ್ಷಗಳು ಘೋಷಿಸುವ ಪರಿಸ್ಥಿತಿಯಲ್ಲಿಲ್ಲ ಎಂಬುದು ನಿಜ. ಆದರೆ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವ, ವಿವಿಧ ಪಕ್ಷಗಳನ್ನು ಒಂದುಕಡೆಗೆ ತರಬಲ್ಲ ಸಮನ್ವಯಕಾರ ಯಾರಾದರೂ ಇದ್ದರೆ ಅದು ನಿತೀಶ್ ಕುಮಾರ್ ಮಾತ್ರ ಎಂಬುದು ಎಲ್ಲ ರಾಜಕೀಯ ವಿಶ್ಲೇಷಕರ ಅಭಿಮತ.

ಶರದ್ ಪವಾರ್

ತನ್ನ ಅವಕಾಶವಾದಿ ಲೆಕ್ಕಾಚಾರಗಳಿಂದಾಗಿ ನಿತೀಶ್ ಕುಮಾರ್ ನಿನ್ನೆಮೊನ್ನೆಯವರೆಗೆ ಬಿಜೆಪಿಯ ಸಖ್ಯದಲ್ಲಿದ್ದರಾದರೂ ಕೋಮುವಾದಿ ರಾಜಕಾರಣವನ್ನು ಬೆಂಬಲಿಸಿದವರಲ್ಲ ಎಂಬುದು ಸಮಾಧಾನಕರ ಸಂಗತಿ. ಮೋದಿಯ ಎದುರಾಳಿ ಚಹರೆಯಾಗಿ ನಿತೀಶ್ ಕುಮಾರ್ ಅವರಿಗೆ ಬಹಳಷ್ಟು ಸಕಾರಾತ್ಮಕ ಅಂಶಗಳಿವೆ. ನಿತೀಶ್ ಇಂಜಿನಿಯರಿಂಗ್ ಪದವೀಧರ, ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಗದ್ದುಗೆಯೇರಿದವರು. ಜೊತೆಗೆ ಉತ್ತಮ ಆಡಳಿತಗಾರ ಎಂಬ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ. ಬಿಹಾರದ ಗೂಂಡಾ ರಾಜ್?ಅನ್ನು ಕಟ್ಟುನಿಟ್ಟಾಗಿ ನಿಭಾಯಿಸಿದ ಇಮೇಜು ಪಡೆದುಕೊಂಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ನಿತೀಶ್ ಸಾಮಾಜಿಕವಾಗಿ ಅತಿ ಹಿಂದುಳಿದ ಕುರ್ಮಿ ಜಾತಿಯ ಹಿನ್ನೆಲೆಯಿಂದ ಬಂದವರು. ಮೋದಿ ಹಿಂದುಳಿದ ಜಾತಿಯ ನಾಯಕ ಎಂಬುದು ಪ್ರಚಾರದಲ್ಲಿದೆಯಾದರೂ ನಿತೀಶ್ ಮೂರ್ನಾಲ್ಕು ರಾಜ್ಯಗಳಲ್ಲಿ ಹರಡಿಕೊಂಡಿರುವ ಜಾತಿಸಮೂಹದ ಬೆಂಬಲ ಹೊಂದಿರುವ ನಾಯಕ. ಮೇಲಾಗಿ ನಿತೀಶ್ ಭಾರತದ ಹಿಂದಿ ಪಟ್ಟಿಯಿಂದ ಬಂದಿರುವ ಹಿಂದಿ ಭಾಷಿಕ ಎಂಬ ಅಂಶ ಬಿಜೆಪಿ ಪ್ರಾಬಲ್ಯ ಇರುವ ಹಿಂದಿ ಭಾಷಿಕ ರಾಜ್ಯಗಳಲ್ಲಿ ಪರಿಣಾಮ ಬೀರಬಲ್ಲುದು.

ರಾಜಕೀಯ ತಂತ್ರಗಾರಿಕೆಯಲ್ಲಿ ವಿಶೇಷ ನೈಪುಣ್ಯತೆ ಹೊಂದಿರುವ ಹಿರಿಯ ರಾಜಕಾರಣಿ ಶರದ್ ಪವಾರ್ ಈ ಎಲ್ಲ ಬೆಳವಣಿಗೆಗಳ ಹಿಂದೆ ಇದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಎಲ್ಲರೊಂದಿಗೆ ಹೊಂದಿಕೊಂಡು ಸಂಭಾಳಿಸಿಕೊಂಡು ಹೋಗಬಲ್ಲ ಮೃದು ಭಾಷಿ ನಿತೀಶ್ ಅವರನ್ನು ಮುಂದಿಟ್ಟು ಮೈತ್ರಿ ರಂಗ ರಚಿಸುವ ವ್ಯೂಹ ತಂತ್ರ ಹೆಣೆಯಲಾಗಿದೆ ಎಂದು ಬಹುತೇಕ ರಾಜಕೀಯ ವಿಶ್ಲೇಷಕರ ಅಭಿಪ್ರಾಯಪಡುತ್ತಿದ್ದಾರೆ. ಬಿಹಾರದಲ್ಲಿ ದಿಢೀರನೆ ಅಧಿಕಾರ ಕಳೆದುಕೊಂಡಿದ್ದು ಮಾತ್ರವಲ್ಲದೆ, ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ರಾಜಕೀಯ ಆಧಿಪತ್ಯಕ್ಕೆ ಸವಾಲೊಡ್ಡಬಹುದಾದ ಈ ಬೆಳವಣಿಗೆ ನಿಜಕ್ಕೂ ಬಿಜೆಪಿ-ಆರೆಸ್ಸೆಸ್ ನಾಯಕರ ನಿದ್ದೆಗೆಡಿಸಿದೆ.

ಸೀತಾರಾಂ ಯೆಚೂರಿ

ನಿತೀಶ್ ಕಳೆದ ವಾರ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದು ಮಾಮೂಲಿ ಪ್ರವಾಸವಾಗಿರದೆ ಅವರು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿಯಾಗಿದ್ದಾರೆ. ’ಈ ಭೇಟಿಯ ಉದ್ದೇಶ ರಾಜಕೀಯವಲ್ಲದೆ ಬೇರೇನಲ್ಲ, 2024ರ ಲೋಕಸಭಾ ಚುನಾವಣೆಗೆ ಪೂರ್ವ ತಯಾರಿಯಾಗಿ ಎಲ್ಲ ವಿರೋಧ ಪಕ್ಷಗಳನ್ನು ಒಟ್ಟಿಗೆ ತರುವುದು ಎಂದು ಬಹಿರಂಗವಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಸುಮಾರು 50 ನಿಮಿಷಗಳ ಮಾತುಕತೆ ನಡೆಸಿದ್ದಾರೆ; ಸೀತಾರಾಂ ಯೆಚೂರಿಯವರದ್ದು ಸಕಾರಾತ್ಮಕ ಭೇಟಿಯಾಗಿತ್ತು. ಇಂದಿನ ಸನ್ನಿವೇಶದಲ್ಲಿ ಎಲ್ಲ ವಿರೋಧ ಪಕ್ಷಗಳು ಒಂದಾಗುವುದು ಅನಿವಾರ್ಯವೆಂದೆನಿಸಿ, ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿಕೊಟ್ಟು ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತೆಲಂಗಾಣ ಕೆ.ಚಂದ್ರಶೇಖರ ರಾವ್‌ರನ್ನು ಭೇಟಿ ಮಾಡಲು ಹಲವು ರಾಜ್ಯಗಳಲ್ಲಿ ಸುತ್ತಾಡಿದ್ದಾರೆ. ಅಲ್ಲದೆ ಒಂದುಕಾಲದ ಜನತಾ ಪರಿವಾರದ ನಾಯಕರಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಹರಿಯಾಣದ ನಾಯಕ ಚೌಟಾಲ ಅಂಥವರನ್ನೂ ಭೇಟಿಯಾಗಿ ಚರ್ಚಿಸಿದ್ದಾರೆ. ಕೆಸಿಆರ್ ಈಗಾಗಲೇ ’ಬಿಜೆಪಿ ಮುಕ್ತ ಭಾರತ’ ಯಾತ್ರೆ ಕೈಗೊಳ್ಳುವುದಾಗಿ ಘೋಷಿಸಿ, ಬಿಜೆಪಿಯೊಂದಿಗೆ ಸಂಘರ್ಷಕ್ಕೆ ಇಳಿದಿರುವುದನ್ನು ಗಮನಿಸಬಹುದು.

ಎಲ್ಲಕ್ಕಿಂತ ಬಹಳ ಮಹತ್ವವಾದ ಅಂಶವೆಂದರೆ ಉತ್ತರಪ್ರದೇಶದ ಲಕ್ನೋದಲ್ಲಿ ಮುಲಾಯಂ ಸಿಂಗ್ ಮತ್ತು ಅಖಿಲೇಶ್ ಅವರೊಂದಿಗಿನ ಭೇಟಿ. ಲೋಕಸಭೆಗೆ ಬರೋಬ್ಬರಿ 80 ಸಂಸದರನ್ನು ಕಳಿಸಿಕೊಡುವ ಉತ್ತರಪ್ರದೇಶದಲ್ಲಿ ವಿರೋಧ ಪಕ್ಷಗಳು ಐಕ್ಯ ಹೋರಾಟ ನಡೆಸಿದರೆ ಬಿಜೆಪಿಗೆ ಬಹು ದೊಡ್ಡ ಹೊಡೆತ ನೀಡಬಲ್ಲುದು ಎಂಬ ಲೆಕ್ಕಾಚಾರವಿದೆ. ನಿತೀಶ್ ಭೇಟಿಯ ಸಂದರ್ಭದಲ್ಲಿ ಲಕ್ನೋದ ಸಮಾಜವಾದಿ ಪಕ್ಷದ ಕಚೇರಿಯ ಮುಂಭಾಗ ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಹಾಕಲಾಗಿತ್ತು ಎಂಬುದೂ ವಿಶೇಷವಾದ ಸಂಗತಿಯೇ!

‘ಯುಪಿ + ಬಿಹಾರ್ = ಗಯೀ ಮೋದಿ ಸರಕಾರ್’ ಅಂದರೆ ಉತ್ತರಪ್ರದೇಶ ಮತ್ತು ಬಿಹಾರದ ಶಕ್ತಿಗಳು ಒಂದಾದರೆ ಮೋದಿ ಸರ್ಕಾರ ತೊಲಗುತ್ತೆ ಅನ್ನೋ ಅರ್ಥದ ಈ ಪೋಸ್ಟರ್ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು.

ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರು? ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸಾಮರ್ಥ್ಯ ಯಾರಿಗಿದೆ? ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಸೀತಾರಾಂ ಯೆಚೂರಿ ಕೊಟ್ಟ ಉತ್ತರವನ್ನು ಉಲ್ಲೇಖಿಸುವುದು ಸೂಕ್ತ. -ನಮ್ಮ ದೇಶದ ರಾಜಕೀಯ ಚರಿತ್ರೆಯನ್ನು ಒಮ್ಮೆ ತಿರುಗಿ ನೋಡಿದರೆ ಒಂದು ವಿಷಯ ಸ್ಪಷ್ಟವಾಗಿ ಅರ್ಥವಾಗುತ್ತದೆ. ಹಲವಾರು ಯಶಸ್ವಿ ಸರ್ಕಾರಗಳು ರಚನೆಯಾಗಿದ್ದು ಚುನಾವಣೋತ್ತರ ಮೈತ್ರಿಗಳಿಂದ. ದೇವೇಗೌಡ ನೇತೃತ್ವದ ಸರ್ಕಾರ, ವಾಜಪೇಯಿ ನೇತೃತ್ವದ ಸರ್ಕಾರ ಹಾಗೂ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರಗಳು ರಚನೆಯಾಗಿದ್ದು ಚುನಾವಣೆಗಳ ಫಲಿತಾಂಶ ಹೊರಬಿದ್ದ ನಂತರ ಏರ್ಪಟ್ಟ ಮೈತ್ರಿಗಳಿಂದ. ಈಗಿನ ಪರಿಸ್ಥಿತಿ ಕೂಡ ಹಾಗೆಯೇ ಇದೆ.

ಮಮತಾ ಬ್ಯಾನರ್ಜಿ

ಭಾರತದ ರಾಜಕಾರಣದಲ್ಲಿ ಬಿಜೆಪಿಯ ಪ್ರಾಬಲ್ಯ 2024ರಲ್ಲೂ ಮುಂದುವರಿಯುತ್ತದೆ ಎಂಬುದು ಸಾಮಾನ್ಯ ಗ್ರಹಿಕೆಯಾಗಿತ್ತು. ಆದರೆ ಬಿಹಾರದಲ್ಲಾದ ರಾಜಕೀಯ ಬದಲಾವಣೆ ಈ ಸಾಮಾನ್ಯ ಗ್ರಹಿಕೆಯನ್ನು ಬದಲಾಯಿಸಿದೆ. ಬಿಜೆಪಿಗೆ ಇಂದು ಬಿಹಾರದಲ್ಲಿ ಯಾವುದೇ ಮೈತ್ರಿ ಪಕ್ಷ ಜೊತೆಯಲ್ಲಿಲ್ಲ. 2024ರ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸುವುದು ಅನಿವಾರ್ಯವಾಗಿದೆ. ಈ ಸನ್ನಿವೇಶದಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆಲ್ಲುವುದೂ ಕಷ್ಟವಾಗಲಿದೆ. ಇದು ಇತರೆ ಹಲವು ರಾಜ್ಯಗಳ ವಿಷಯದಲ್ಲೂ ಹೀಗೇ ಇದೆ.

ಮೈತ್ರಿ ಪಕ್ಷಗಳ ಜೊತೆ ಬಿಜೆಪಿಯ ಅತಿಯಾದ ಆಧಿಪತ್ಯ ಧೋರಣೆಯಿಂದಾಗಿ, ಅದರಲ್ಲೂ ನಿರ್ದಿಷ್ಟವಾಗಿ ಮೋದಿ-ಶಾ ಜೋಡಿಯ ನಿರಂಕುಶ ರೀತಿಯ ನಿರ್ವಹಣೆಯಿಂದಾಗಿ ಎನ್‌ಡಿಎ ಎಂಬ ಮೈತ್ರಿಕೂಟ ಈಗ ವಾಸ್ತವದಲ್ಲಿ ಕೆಲಸ ಮಾಡುತ್ತಿಲ್ಲ. ಒಂದಾದ ನಂತರ ಒಂದರಂತೆ ವಿವಿಧ ಪಕ್ಷಗಳು ಬಿಜೆಪಿಯನ್ನು ತೊರೆದಿದ್ದರಿಂದಾಗಿ ಈಗ ನಾಮಕಾವಸ್ಥೆಯ ಮೈತ್ರಿಕೂಟವಾಗಿ ಉಳಿದಿದೆ.

ನಿತೀಶ್ ನೇತೃತ್ವದ ಬೆಳವಣಿಗೆ ಯಾವ ದಿಕ್ಕಿನಲ್ಲಿ ಪರ್ಯಾವಸಾನ ಆಗುತ್ತದೆ ಎಂಬುದನ್ನು ಈಗಲೇ ಊಹಿಸುವುದು ಕಷ್ಟವಾದರೂ ರಾಜಕೀಯ ಬದಲಾವಣೆ ಬಯಸುವ ಹಲವರಲ್ಲಿ ಈ ವಿದ್ಯಮಾನ ಒಂದಷ್ಟು ಆಶಾಭಾವನೆಯನ್ನು ಹುಟ್ಟುಹಾಕಿದೆ. ಇಂಥ ಸನ್ನಿವೇಶದಲ್ಲಿ ವಿರೋಧ ಪಕ್ಷಗಳು ಒಗ್ಗೂಡಿ ಹೋರಾಟಕ್ಕೆ ಇಳಿದರೆ ದೇಶಕ್ಕೆ ಗಂಡಾಂತರವಾಗಿ ಪರಿಣಮಿಸಿರುವ ಆರೆಸ್ಸೆಸ್-ಬಿಜೆಪಿ ಪಕ್ಷಗಳನ್ನು ನಿಗ್ರಹಿಸಬಹುದು


ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಪ್ರಯತ್ನ’: ಪ್ರಕರಣ ದಾಖಲಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...