Homeಕರ್ನಾಟಕಜೆಡಿಎಸ್ ಒಳಗೆ ಶುರುವಾಗಿರುವ ಬಂಡಾಯದ ರೋಗಕ್ಕೆ ಫೀನಿಕ್ಸ್ ಗೌಡರ ಬಳಿ ಮದ್ದಿದೆಯೇ?

ಜೆಡಿಎಸ್ ಒಳಗೆ ಶುರುವಾಗಿರುವ ಬಂಡಾಯದ ರೋಗಕ್ಕೆ ಫೀನಿಕ್ಸ್ ಗೌಡರ ಬಳಿ ಮದ್ದಿದೆಯೇ?

- Advertisement -
- Advertisement -

ರಾಜಕೀಯದಲ್ಲಿ ಯಾವುದು ಶಾಶ್ವತವೂ ಅಲ್ಲ, ನಿರ್ದಿಷ್ಟವೂ ಅಲ್ಲ. ಆದರೆ, ಜೆಡಿಎಸ್‍ನಲ್ಲಿ ತಲ್ಲಣ ಆರಂಭವಾಗಿರುವುದಂತೂ ಸತ್ಯ. ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಸಾಕ್ಷಾತ್ ದೇವೇಗೌಡ ಮತ್ತು ಕುಮಾರಸ್ವಾಮಿಯಂತವರನ್ನೂ ಸಹ ಹಣ್ಣುಗಾಯಿ ನೀರುಗಾಯಿ ಮಾಡಿದೆ.ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ, ರಾಜಕೀಯ ಫೀನಿಕ್ಸ್ ಖ್ಯಾತಿಯ ದೇವೇಗೌಡರ ನಡೆ ಏನು?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷ ಅತಿಹೆಚ್ಚು ಸ್ಥಾನಗಳಿಸಿದರೂ ಜೆಡಿಎಸ್ ಕಿಂಗ್ ಮೇಕರ್ ಎಂಬ ಹಣೆಪಟ್ಟಿ ಕಳೆದ ಎರಡು ದಶಕಗಳಿಂದ ಗಟ್ಟಿಯಾಗಿತ್ತು. ಕರ್ನಾಟಕದ ಪಾಲಿನ ಪ್ರಬಲ ಪ್ರಾದೇಶಿಕ ಪಕ್ಷ ಎಂಬ ಶ್ರೇಯ ಒಂದು ಕಾಲದಲ್ಲಿ ಜೆಡಿಎಸ್‍ಗೆ ಇದ್ದದ್ದು ನಿಜ. ಆದರೆ, ಜೆಡಿಎಸ್ ಕೋಟೆ ಈಗ ಮುಂಚಿನಂತೆ ಭದ್ರವಾಗಿಲ್ಲ. ಕೆ.ಆರ್. ಪೇಟೆ ಸೋಲಿನ ನಂತರ ಸ್ವತಃ ಮಂಡ್ಯದಲ್ಲೇ ಜೆಡಿಎಸ್ ಬುನಾದಿ ಮೆಲ್ಲನೆ ಅಲುಗಾಡುತ್ತಿರುವುದು ತಿಳಿಯದ ವಿಚಾರವೇನಲ್ಲ.

ಜೆಡಿಎಸ್‍ನಲ್ಲಿ ಪರಿಸ್ಥಿತಿ ಇದೀಗ ಹೇಗಾಗಿದೆ ಎಂದರೆ ಪಕ್ಷದ ವರಿಷ್ಠ ಮಾಜಿ ಸಿಎಂ ಕುಮಾರಸ್ವಾಮಿ ಮಾತಿಗಿರಲಿ, ಸ್ವತಃ ಮಾಜಿ ಪ್ರಧಾನಿ ದೇವೇಗೌಡರ ಮಾತಿಗೂ ಶಾಸಕರು ಕ್ಯಾರೇ ಎನ್ನುತ್ತಿಲ್ಲ. ಜಿ.ಟಿ. ದೇವೇಗೌಡರಂತಹ ಹಿರಿಯ ನಾಯಕರು ಬಹಿರಂಗವಾಗಿಯೇ ಬಿಜೆಪಿಯನ್ನು ಸಮರ್ಥಿಸಿಕೊಂಡು ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸುತ್ತಿದ್ದಾರೆ.

ಅಲ್ಲದೆ, ಯಾವುದೇ ಸಮಯದಲ್ಲಿ ಮತ್ತಷ್ಟು ಶಾಸಕರು ಬಿಜೆಪಿ ಪಾಲಾದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಕನಿಷ್ಟ 13ಕ್ಕೂ ಹೆಚ್ಚು ಶಾಸಕರು ಪಕ್ಷ ತೊರೆದರೂ ಅಚ್ಚರಿ ಇಲ್ಲ ಎನ್ನುತ್ತಿವೆ ರಾಜ್ಯ ರಾಜಕೀಯ ವಠಾರ. ಇದಕ್ಕೆ ಕಾರಣಗಳು ಇಲ್ಲದೇ ಏನಿಲ್ಲ.
ಹಾಗೆ ನೋಡಿದರೆ ಕಿಂಗ್ ಮೇಕರ್ ಎಂಬ ಜೆಡಿಎಸ್ ಕೋಟೆಯನ್ನು ಕೆಡವಿ ಈ ಕೋಟೆಯ ಶವ ಪೆಟ್ಟಿಗೆಗೆ ಮೊದಲ ಮೊಳೆ ಹೊಡೆದದ್ದೇ ಶಾಸಕ ಜಮೀರ್ ಅಹಮದ್ ಅಂಡ್ ಟೀಮ್.

2017ರಲ್ಲಿ ಶಾಸಕ ಜಮೀರ್ ಅಹಮದ್, ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಒಟ್ಟು 9 ಶಾಸಕರು ಹೋಲ್‍ಸೇಲ್ ಆಗಿ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಕಾಂಗ್ರೆಸ್ ಸೇರುವ ಮೂಲಕ ಜೆಡಿಎಸ್ ಪಕ್ಷಕ್ಕೆ ಮೊದಲ ಆಘಾತ ನೀಡಿದ್ದರು. ಜೆಡಿಎಸ್ ಈ ಶಾಕ್‍ನಿಂದ ಹೊರಬರುವುದು ಅಷ್ಟು ಸುಲಭದ ಮಾತಲ್ಲ ಎನ್ನಲಾಗಿತ್ತು. ಆದರೂ, 2018ರ ವಿಧಾನಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ರಾಜ್ಯಾದ್ಯಂತ ಮಿಂಚಿನಂತೆ ಪ್ರಚಾರ ಕಾರ್ಯ ನಡೆಸಿದ್ದರು. ಪರಿಣಾಮ ಜೆಡಿಎಸ್ 37 ಸ್ಥಾನಗಳಲ್ಲಿ ಜಯ ಸಾಧಿಸಿತ್ತು.

ತದನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧಿಸಿ ಒಂದು ವರ್ಷ ಅಧಿಕಾರ ನಡೆಸಿದ್ದು, ಕುಮಾರಸ್ವಾಮಿ ಎರಡನೇ ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ತರುವಾಯ ಈ ಸರ್ಕಾರವನ್ನೂ ಬೀಳಿಸಿ ಆಪರೇಷನ್ ಕಮಲದ ಸಹಾಯದಿಂದ ಬಿಜೆಪಿ ಸರ್ಕಾರ ರಚಿಸಿದ್ದು ಯಡಿಯೂರಪ್ಪ ಸಿಎಂ ಆಗಿದ್ದು ಇಂದು ಇತಿಹಾಸ.

ಆದರೆ, ಬಹುನಿರೀಕ್ಷಿತ ಉಪ ಚುನಾವಣೆಗೂ ಮುನ್ನ ಜೆಡಿಎಸ್ ಶಾಸಕರ ಸಭೆಯಲ್ಲಿ ಶಾಸಕರು ಬಹಿರಂಗವಾಗಿಯೇ ಕುಮಾರಸ್ವಾಮಿಗೆ ಬೆದರಿಕೆ ಹಾಕಿದ್ದರು. ಬಿಜೆಪಿಗೆ ಬಾಹ್ಯ ಬೆಂಬಲ ನೀಡದಿದ್ದರೆ ಪಕ್ಷ ತೊರೆಯುವ ಬೆದರಿಕೆ ಬ್ಲ್ಯಾಕ್‍ಮೇಲ್ ಮಾಡಿದ್ದರು. ಜೆಡಿಎಸ್‍ನೊಳಗಿನ ಈ ಅಂತಃಕಲಹವೂ ಮಾಜಿ ಅನರ್ಹರು ಮೈತ್ರಿಗೆ ಗುಡ್‍ಬೈ ಹೇಳಿ ಬಿಜೆಪಿ ಸೇರುವಲ್ಲಿ ಒಂದು ಪ್ರೇರಣೆಯ ಅಂಶ.

ಜೆಡಿಎಸ್‍ನಲ್ಲಿ ವರಿಷ್ಠರ ವಿರುದ್ಧವೇ ಬ್ಲ್ಯಾಕ್‍ಮೇಲ್ ತಂತ್ರ!

ಹಾಗೆ ನೋಡಿದರೆ ಮೈತ್ರಿ ಸರ್ಕಾರವನ್ನು ಬೀಳಿಸಿದ್ದೆ ಬಿಜೆಪಿ ಮತ್ತು ಬಿ.ಎಸ್. ಯಡಿಯೂರಪ್ಪ ಎಂಬ ವಿಚಾರ ಇದೀಗ ಗುಟ್ಟಾಗೇನು ಉಳಿದಿಲ್ಲ. ಹೀಗಾಗಿ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸಲು ಜೆಡಿಎಸ್ ನಾಯಕರು ಮತ್ತೆ ಕಾಂಗ್ರೆಸ್ ಜೊತೆಗೂಡಿ ಮೈತ್ರಿಯಾಗಿಯೇ ಸೆಣಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಉಭಯ ಪಕ್ಷದ ಪ್ರಮುಖ ನಾಯಕರು ಕೊನೆವರೆಗೂ ಉಪಚುನಾವಣೆಯನ್ನೂ ಮೈತ್ರಿಯಾಗಿಯೇ ಎದುರಿಸಲಿದ್ದೇವೆ ಎಂದು ಹೇಳಿಕೆ ನೀಡುತ್ತಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ಮೈತ್ರಿ ಮುರಿದು ಬಿದ್ದಿತ್ತು. ಪರಿಣಾಮ ಚುನಾವಣೆ ಎದುರಿಸಿದ್ದ 14 ಅನರ್ಹ ಶಾಸಕರ ಪೈಕಿ 12 ಜನ ಗೆಲುವು ಸಾಧಿಸಿದ್ದರು ಮತ್ತು ಈ ಗೆಲುವಿನ ಹಿಂದೆ ಇದ್ದದ್ದು ಸ್ವತಃ ಜೆಡಿಎಸ್ ಶಾಸಕರೇ ಎನ್ನಲಾಗುತ್ತಿದೆ.

ಬಲ್ಲ ಮೂಲಗಳ ಪ್ರಕಾರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮತ್ತೆ ಮೈತ್ರಿ ಸಾಧಿಸುವ ಮೂಲಕ ಅನರ್ಹರಿಗೆ ತಕ್ಕ ಪಾಠ ಕಲಿಸಬೇಕು ಎಂಬುದೇ ಜೆಡಿಎಸ್ ವರಿಷ್ಠರ ಆಶಯವೂ ಆಗಿತ್ತು.

ಆದರೆ, ಚುನಾವಣೆಗೂ ಮುಂಚಿತವಾಗಿ ನಡೆದ ಪಕ್ಷದ ಸಭೆಯಲ್ಲಿ ಜೆಡಿಎಸ್ ಶಾಸಕರು ವರಿಷ್ಠರ ವಿರುದ್ಧವೇ ತಿರುಗಿ ಬಿದ್ದಿದ್ದರು. “ತಾವು ಮಧ್ಯಂತರ ಚುನಾವಣೆ ಎದುರಿಸಲು ಸಿದ್ಧರಿಲ್ಲ, ಹೀಗಾಗಿ ಬಿಜೆಪಿ ಸರ್ಕಾರವನ್ನು ಬೀಳಿಸಬಾರದು. ಅಕಸ್ಮಾತ್ ಚುನಾವಣೆ ನಂತರ ಸಂಖ್ಯೆ ಕೊರತೆ ಆದರೂ ಸಹ ಜೆಡಿಎಸ್ ಬಿಜೆಪಿಗೆ ಬಾಹ್ಯ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದ್ದರು. ಇಲ್ಲದಿದ್ದರೆ ಪಕ್ಷದ 13 ಜನ ಶಾಸಕರು ಈಗಿಂದೀಗಲೆ ಬಿಜೆಪಿಗೆ ಪಕ್ಷಾಂತರ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಇದಕ್ಕೆ ಪೂರಕವಾಗಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಪುಟ್ಟಣ್ಣಯ್ಯ ತಾವು ಜೆಡಿಎಸ್ ತೊರೆಯುವುದಾಗಿ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಕೊನೆಗೆ ಪಕ್ಷದಿಂದಲೇ ಉಚ್ಚಾಟಿತರಾಗಿದ್ದರು. ಇನ್ನು ಹಿರಿಯ ನಾಯಕ ಬಸವರಾಜ ಹೊರಟ್ಟಿ ಪಕ್ಷದಲ್ಲಿ ನಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ನೇರಾನೇರ ಆರೋಪ ಮಾಡಿದ್ದರೆ, ಶಾಸಕ ಜಿ.ಟಿ. ದೇವೇಗೌಡ ಅದಾಗಲೇ ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಾಗಿತ್ತು. ಅಲ್ಲದೆ, ಉಪ ಚುನಾವಣೆ ನಂತರ ಮತ್ತಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗಳು ಜೆಡಿಎಸ್ ವರಿಷ್ಠರಲ್ಲಿ ಆತಂಕ ಹುಟ್ಟುಹಾಕಿದ್ದು ಸುಳ್ಳಲ್ಲ.

ಇದೇ ಕಾರಣಕ್ಕೆ ಚುನಾವಣೆ ಸಂದರ್ಭದಲ್ಲಿ ಸ್ವತಃ ಕುಮಾರಸ್ವಾಮಿ ಮತ್ತು ದೇವೇಗೌಡ ಬಹಿರಂಗವಾಗಿಯೇ ತಾವು ಬಿಜೆಪಿ ಸರ್ಕಾರ ಬೀಳುವುದಕ್ಕೆ ಬಿಡುವುದಿಲ್ಲ ಎಂಬಂತಹ ಹೇಳಿಕೆಗಳನ್ನು ನೀಡಲು ಮುಂದಾದದ್ದು. ಕೊನೆಗೂ ಅಂದುಕೊಂಡಂತೆ ಬಿಜೆಪಿ ಏನೋ ಈ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿತ್ತು. ಆದರೆ, ಜೆಡಿಎಸ್ ಒಳಗಿನ ಆಂತರಿಕ ಕ್ಷೋಭೆ ಮಾತ್ರ ಈವರೆಗೆ ಶಮನವಾಗಿಲ್ಲ.

ಪರಿಷತ್ ಚುನಾವಣೆಯಿಂದ ದಳ ಹಿಂದೆ ಸರಿಯಲು ಕಾರಣವೇನು?

ಡಿಸಿಎಂ ಲಕ್ಷ್ಮಣ ಸವದಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ದಾಖಲಿಸಬೇಕಾದಂತಹ ಅನಿವಾರ್ಯತೆಗೆ ಸಿಲುಕಿದ್ದರು. ಹೀಗಾಗಿ ಸವದಿಗೆ ಸೋಲುಣಿಸುವ ಸಲುವಾಗಿಯೇ ಕಾಂಗ್ರೆಸ್-ಜೆಡಿಎಸ್ ಒಂದಾಗಿತ್ತು. ಪರಿಣಾಮ ಅನಿಲ್ ಕುಮಾರ್ ಎಂಬುವವರು ಕೊನೆ ಗಳಿಗೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಆದರೆ, ಈ ಸಂದರ್ಭದಲ್ಲೂ ಸಹ ಜೆಡಿಎಸ್ ಶಾಸಕರು ವರಿಷ್ಠರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ಅಕಸ್ಮಾತ್ ಚುನಾವಣೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಸೋಲನುಭವಿಸಿದರೆ ತಾವು ಪಕ್ಷ ಬಿಡುವುದಾಗಿ ಮತ್ತು ಚುನಾವಣೆಯಲ್ಲಿ ಅಡ್ಡ ಮತದಾನ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಅಂದು ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಭಾಗವಹಿಸಿದ್ದರೆ 15ಕ್ಕಿಂತ ಹೆಚ್ಚು ಶಾಸಕರು ಅಡ್ಡ ಮತದಾನ ಮಾಡಲು ಸಿದ್ಧರಿದ್ದರು. ಆಗ ಜೆಡಿಎಸ್‍ನೊಳಗಿನ ಭಿನ್ನಮತ ಅಧಿಕೃತವಾಗಿಯೇ ಬೀದಿಗೆ ಬರುತ್ತಿತ್ತು.

ಇದರ ವಾಸನೆ ಅರಿತಿದ್ದ ಕಾರಣಕ್ಕೆ ಕುಮಾರಸ್ವಾಮಿ ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹೊರ ನಡೆದಿದ್ದರು. ಅಲ್ಲದೆ, ಮೈತ್ರಿ ಅಭ್ಯರ್ಥಿಗೆ ತಮ್ಮ ಬೆಂಬಲ ಇಲ್ಲ ಎಂದು ಘೋಷಿಸುವ ಮೂಲಕ ಪ್ರತ್ಯಕ್ಷವಾಗಿಯೇ ಸವದಿ ಗೆಲುವಿಗೆ ಕಾರಣರಾಗಿದ್ದರೂ. ಅಲ್ಲದೇ ತಮ್ಮ ಶಾಸಕರು ಚುನಾವಣೆಯಿಂದ ದೂರ ಉಳಿಯುವಂತೆ ಆದೇಶಿಸಿದ್ದರು. ಆದರೆ, ಹಿರಿಯ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರು ದಿಗ್ಗಜರ ಈ ಆದೇಶವನ್ನೂ ಮೀರಿ ಮತದಾನ ಮಾಡಿದ್ದಾರೆ. ಅವರು ಯಾರಿಗೆ ಮತ ಹಾಕಿದ್ದಾರೆ ಅನ್ನೋದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ.

ಜೆಡಿಎಸ್ ಶವಪೆಟ್ಟಿಗೆಯ ಕೊನೆಯ ಮೊಳೆ ಜಿಟಿಡಿ ಕೈಲಿದೆ

ಮಂಡ್ಯ ಮತ್ತು ಹಳೆ ಮೈಸೂರು ಭಾಗದಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ನಾಯಕ ಜಿ.ಟಿ. ದೇವೇಗೌಡ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನೇ ಸೋಲಿಸುವಷ್ಟು ತಾಕತ್ ಇರುವ ಜೆಡಿಎಸ್‍ನ ಏಕೈಕ ನಾಯಕ ಅವರು.

ಆದರೆ, ಕಳೆದ ದಿನಗಳಿಂದ ‘ಜಿಟಿಡಿ ನಡೆ ಬಿಜೆಪಿ ಕಡೆ’ ಎಂಬಂತಹ ವಾತಾವರಣ ನಿರ್ಮಾಣವಾಗಿದೆ. ಜೆಡಿಎಸ್ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನ ತೋಡಿಕೊಳ್ಳುತ್ತಿರುವ ಜಿ.ಟಿ. ದೇವೇಗೌಡರು, ಇತ್ತೀಚೆಗೆ ಹೆಚ್ಚಾಗಿ ಬಿಜೆಪಿ ನಾಯಕರ ಜೊತೆಗೆ ಕಾಣಿಸಿಕೊಳ್ಳುವ ಮೂಲಕ ವರಿಷ್ಠರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.

ಈ ನಡುವೆ ಪಕ್ಷದಲ್ಲಿರುವ ಮತ್ತೊಂದು ಅಸಮಾಧಾನಿತರ ಗುಂಪನ್ನು ಮುನ್ನಡೆಸುತ್ತಿರುವುದೇ ಜಿ.ಟಿ. ದೇವೇಗೌಡ ಎನ್ನಲಾಗುತ್ತಿದೆ. ಮುಂದಿನ ಚುನಾವಣೆ ವೇಳೆಗೆ ಎ.ಟಿ. ರಾಮಸ್ವಾಮಿ ಸೇರಿದಂತೆ 12 ರಿಂದ 13 ಶಾಸಕರು ಬಿಜೆಪಿ ಪಾಲಾಗಲಿದ್ದಾರೆ. ಈ ಮೂಲಕ ಜಿ.ಟಿ. ದೇವೇಗೌಡರು ಜೆಡಿಎಸ್ ಪಕ್ಷದ ಶವ ಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯಲಿದ್ದಾರೆ ಎಂದು ವಿಶ್ಲೇಷಿಸುತ್ತಿದೆ ರಾಜಕೀಯ ಪಡಸಾಲೆ.

ಆದರೆ, ರಾಜಕೀಯದಲ್ಲಿ ಯಾವುದೂ ಶಾಶ್ವತವೂ ಅಲ್ಲ, ನಿರ್ದಿಷ್ಟವೂ ಅಲ್ಲ. ಆದರೆ, ಜೆಡಿಎಸ್‍ನಲ್ಲಿ ತಲ್ಲಣ ಆರಂಭವಾಗಿರುವುದಂತೂ ಸತ್ಯ. ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಸಾಕ್ಷಾತ್ ದೇವೇಗೌಡ ಮತ್ತು ಕುಮಾರಸ್ವಾಮಿಯಂತವರನ್ನೂ ಸಹ ಹಣ್ಣುಗಾಯಿ ನೀರುಗಾಯಿ ಮಾಡಿರುವುದು ನಿಜ. ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ, ರಾಜಕೀಯ ಫೀನಿಕ್ಸ್ ಖ್ಯಾತಿಯ ದೇವೇಗೌಡರ ನಡೆ ಏನು? ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...