Homeಅಂಕಣಗಳುಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

ಬಹುಜನ ಭಾರತ: ತುಕ್ಕು ತಗುಲಿತೇ ಉಕ್ಕಿನ ರಕ್ಷಾ ಕವಚಕ್ಕೆ?

- Advertisement -
- Advertisement -

ಲೋಕಸಭಾ ಚುನಾವಣೆಗಳು ಮೂರು ವರ್ಷ ದೂರದಲ್ಲಿವೆ. ಚಂಡಪ್ರಚಂಡರ ವರ್ಚಸ್ಸಿನ ಕವಚಕ್ಕೆ ತಗುಲಿರುವ ತುಕ್ಕನ್ನು ಉಜ್ಜಿ ತೆಗೆದು, ಹೊಸ ತಂತ್ರ-ಕುತಂತ್ರಗಳ ಹೆಣೆಯಲು ಸಾಕಷ್ಟು ಕಾಲಾವಕಾಶವಿದೆ
ಬಂಗಾಳದ ವಿಧಾನಸಭಾ ಚುನಾವಣೆಯ ನಂತರ ಮೌನಕ್ಕೆ ಶರಣಾಗಿದ್ದ ಪ್ರಧಾನಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಜನಾಕ್ರೋಶದ ಖಡ್ಗಕ್ಕೆ ಎದುರಾಗಿ ಕಂಬನಿ ತುಂಬಿದ ಭಾವುಕತೆಯ ಗುರಾಣಿಯನ್ನು ಅಡ್ಡ ಹಿಡಿದಿದ್ದಾರೆ.

ಕೋವಿಡ್ ಮಾರಣಹೋಮ ಕೇಕೆ ಹಾಕಿ ಕೊಳ್ಳೆ ಹೊಡೆದ ಭಾರತದ ದಿಡ್ಡಿ ಬಾಗಿಲನ್ನು ಭಾವುಕತೆಯಿಂದ ಮುಚ್ಚುವ ಅವರ ಎದೆಗಾರಿಕೆ ಅಸಾಧಾರಣ. ಆದರೆ ಕಂಬನಿ ತುಂಬಿ ಗಂಟಲು ಕಟ್ಟಿದ ಸಾಂತ್ವನ, ಶ್ರದ್ಧಾಂಜಲಿ ದಿಟವೆನಿಸುವುದಿಲ್ಲ. ಸಟೆಯೇ ಹೌದು. ಈ ಕಾರಣಕ್ಕಾಗಿಯೇ ಗಾಯದ ಮೇಲೆ ಬರೆ ಎಳೆದಿವೆ. ’ಎಲೆ ದೇವಾ, ಬೆಂದ ಹುಣ್ಣಿಗೆ ಬೇಗೆಯನಿಕ್ಕಲು ಬಂದೀತೇ’ ಎಂಬ ಅಕ್ಕನ ವಚನದ ಸಾಲನ್ನು ನೆನಪಿಸಿವೆ.

ಸಾಮಾನ್ಯ ಕಾಲದಲ್ಲಿ ಸರ್ವಾಂತರಿಯಾಗಿ ವಿಜೃಂಭಿಸುವ ಪ್ರಧಾನಿ ಮೋದಿಯವರು ವಾರಗಳ ಹಿಂದೆ ಕೋವಿಡ್ ನರಮೇಧದ ನಟ್ಟ ನಡುವೆ ಹಠಾತ್ತನೆ ಅಂತರ್ಧಾನರಾದರು. ದೇಶವೇ ಬೇಯುತ್ತಿದ್ದಾಗ ಅವರು ಮುಖ ತೋರಲಿಲ್ಲ, ತುಟಿ ಬಿಚ್ಚಲಿಲ್ಲ.

ಮೊದಲ ಅಲೆ ಮತ್ತು ಎರಡನೆಯ ಅಲೆಯ ನಡುವಣ ಅಂತರವನ್ನು ಪೋಲು ಮಾಡಿದರು. ಆಸ್ಪತ್ರೆಗಳು-ಆಮ್ಲಜನಕ-ಔಷಧಿಗಳು-ಲಸಿಕೆಗಳ ಆಲೋಚನೆಯನ್ನೇ ಮಾಡಲಿಲ್ಲ. ನಿಜವಾದ ನಾಯಕನ ಶಕ್ತಿ ಸಾಮರ್ಥ್ಯ ಮುನ್ನೋಟ ಯೋಜನಾಶಕ್ತಿಯ ಸತ್ವ ಪರೀಕ್ಷೆ ನಡೆಯುವುದು ಸಮರಕಾಲದಲ್ಲೇ ವಿನಾ ಶಾಂತಿಯ ದಿನಗಳಲ್ಲಿ ಅಲ್ಲ. ಈ ಪರೀಕ್ಷೆಯ ಬೆಂಕಿಗೆ ಮುಖ್ಯಮಂತ್ರಿಗಳನ್ನು ಮುಂದೆ ತಳ್ಳಿ ತಾವು ತೆರೆಮರೆಗೆ ಸರಿದುಬಿಟ್ಟರು.

ಗುಜರಾತ್ ಮಾದರಿ
Photo Courtesy: PTI

ಪವಿತ್ರನದಿಗಳಾದ ಗಂಗೆ ಯಮುನೆಯರು ಕೋವಿಡ್ ಶವವಾಹಕಗಳಾಗಿ ಹೋದವು. ಶವ ಸುಡುವ ಕಟ್ಟಿಗೆಯ ದರಗಳು ಮುಗಿಲಿಗೇರಿದವು. ವಾಹನಗಳ ಹಳೆಯ ಟೈರುಗಳ ತಂದು ಚಿತೆ ಹೊತ್ತಿಸಿ ಸುಟ್ಟ ದಾರುಣ ಉದಾಹರಣೆಗಳಿವೆ. ಸತ್ತವರ ಸಂಸ್ಕಾರಕ್ಕೆ ಹಣ ಹೊಂದಿಸಲಾಗದ ಬಂಧುಗಳು ನದೀ ನೀರಿಗೆ ಶವಗಳನ್ನು ತೇಲಿಬಿಟ್ಟರು. ಬಹುತೇಕರು ಗಂಗೆ ಮತ್ತು ಯಮುನೆಯ ನದೀ ದಂಡೆಯ ಮರಳು ತೋಡಿ ಹೂತು ಹಾಕಿದರು. ಕಣ್ಣು ಹರಿದಷ್ಟು ದೂರ ಹರಡಿ ಹಬ್ಬಿದ ಈ ಮರಳ ಸಮಾಧಿಗಳನ್ನು ನಾಯಿಗಳು ತೋಡಿ ಶವಗಳನ್ನು ಕಿತ್ತು ತಿಂದವು. ಉತ್ತರ ಭಾರತದಲ್ಲಿ ಸುರಿದ ಅಕಾಲದ ಮಳೆಯು ಮರಳನ್ನು ಕೊಚ್ಚಿ ಹಾಕಿದ ನಂತರ ಗೋಚರವಾದ ಶವಗಳನ್ನೂ ನಾಯಿಗಳು ಕಿತ್ತು ಜಗಿಯತೊಡಗಿದಾಗ, ನಗರಸಭೆಗಳು ಪೌರಕಾರ್ಮಿಕರನ್ನು ಕರೆತಂದು ಪುನಃ ಮರಳನ್ನು ಎಳೆದು ಮುಚ್ಚಿಸಿದವು. ದಿಕ್ಕಿಲ್ಲದ ಶವಗಳನ್ನು ಆಸ್ಪತ್ರೆಗಳು, ಆಂಬುಲೆನ್ಸ್‌ನವರು ನೀರುಪಾಲು ಮಾಡಿದರು. ಹಿಂದೀ ಪತ್ರಿಕೆಯೊಂದು ತನ್ನ 26 ವರದಿಗಾರರನ್ನು ನಿಯುಕ್ತಿ ಮಾಡಿ ನಡೆಸಿದ ತನಿಖಾ ವರದಿಯಲ್ಲಿ ಗಂಗೆಯುದ್ದಕ್ಕೆ ಎರಡು ಸಾವಿರ ಶವಗಳು ಪತ್ತೆಯಾದವು. ಜೀವಿಸಿರುವವರಿಗೆ
ಆಸ್ಪತ್ರೆಯಲ್ಲಿ ಜಾಗವಿಲ್ಲ, ಸತ್ತವರಿಗೆ ಸ್ಮಶಾನದಲ್ಲಿ ಸಂಸ್ಕಾರವಿಲ್ಲ ಎಂಬ ದುಸ್ಥಿತಿ. ದಿನನಿತ್ಯ ಹಗಲಿರುಳು ಉರಿದ ಸಹಸ್ರಾರು ಚಿತೆಗಳಿಗೆ ಲೆಕ್ಕವಿಲ್ಲ. ತಬ್ಬಲಿಗಳಾದ ಮಕ್ಕಳ ನೆತ್ತಿಯ ಮೇಲಿನ ಹೆತ್ತವರ ನೆರಳು ಎಲ್ಲ ಕಾಲಕ್ಕೂ ಸರಿದುಹೋಯಿತು.

ನಡುವೆ ಗೋಮೂತ್ರ ಸೇವನೆಯಿಂದ, ಗೋವಿನ ಸೆಗಣಿಯ ಲೇಪನದಿಂದ ಕೋವಿಡ್ ವೈರಾಣು ನಾಶವಾಗುತ್ತದೆಂಬ ಪ್ರಚಾರದ ಆರ್ಭಟ ನಡೆದಿದೆ. ಸಂಸದೆಯೂ ಆದ ಸಾಧ್ವಿ ಪ್ರಜ್ಞಾ ಸಿಂಗ್ ಈ ಪ್ರಚಾರದ ಮುಂಚೂಣಿಯಲ್ಲಿದ್ದಾರೆ. ಬೀದಿ ಬೀದಿಗಳಲ್ಲಿ ಬೇವಿನ ಸೊಪ್ಪಿನ ಹೊಗೆ ಹಾಕಿ, ಶಂಖಘೋಷ ಮಾಡಿ ಕೊರೊನಾ ಓಡಿಸುವ ಅವಿವೇಕವೂ ಜರುಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಶಾಖೆಗಳು ಅಂಧಶ್ರದ್ಧೆಗೆ ಕುಮ್ಮಕ್ಕು ನೀಡಿವೆ. ನಿತ್ಯ ಗೋಮೂತ್ರ ಸೇವನೆಯಿಂದಾಗಿ ತಮ್ಮನ್ನು ಕೊರೊನಾ ಬಾಧಿಸಿಲ್ಲ ಎಂಬ ಸಾಧ್ವಿ ಪ್ರಜ್ಞಾ ಅವರು ನಿನ್ನೆ ಹಠಾತ್ತನೆ ಉಸಿರಾಟದ ತೊಂದರೆಯನ್ನು ಎದುರಿಸಿದರು. ಅವರನ್ನು ವಿಮಾನ ಆಂಬುಲೆನ್ಸ್‌ನಿಂದ ಸುರಕ್ಷಿತ ಆಸ್ಪತ್ರೆಗೆ ತಲುಪಿಸಲಾಯಿತು. ಅಂಧಶ್ರದ್ಧೆಗಳ ಕುರಿತು ಪ್ರಧಾನಿ ಚಕಾರ ಎತ್ತಲಿಲ್ಲ. ಈ ಎಲ್ಲ ಎಣೆಯಿಲ್ಲದ ದುಃಖ ದುರಂತದಲ್ಲಿ ಪ್ರಧಾನಿಯವರ ಕಂಚಿನ ಕಂಠ ಬಹುತೇಕ ಅಡಗಿಹೋಗಿತ್ತು.

ಕೋವಿಡ್ ಸಾವುನೋವಿನ ಸೂತಕದ ನಡುವೆ 20 ಸಾವಿರ ಕೋಟಿ ರುಪಾಯಿ ವೆಚ್ಚದ ಹೊಸ ಸಂಸತ್ ಭವನ ಮತ್ತು ಪ್ರಧಾನಿ ನಿವಾಸವನ್ನು ಹೊಂದಿರುವ ಸೆಂಟ್ರಲ್ ವಿಸ್ತಾ ನಿರ್ಮಾಣ ಅಬಾಧಿತವಾಗಿ ನಡೆದಿದೆ. ಈ ಯೋಜನೆಯನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ತೆಗೆದುಕೊಂಡಿದ್ದಾರೆ ಪ್ರಧಾನಿಯವರು. ಮಾರಣಹೋಮದ ನಡುವೆ ನಡೆಯುವ ಮೋಜಿನ ಮೇಜವಾನಿಯಷ್ಟೇ ವಿಕೃತ ಕೃತ್ಯವಿದು. ನೊಂದು ಸತ್ತು ಸಂಸ್ಕಾರವನ್ನೂ ಕಾಣದೆ ನೀರುಪಾಲು ನಾಯಿ ನರಿ ಪಾಲಾದ ಕಳೇಬರಗಳ ಅಡಿಪಾಯದ ಮೇಲೆ ಮೈ ತಳೆಯುವ ಈ ಸೌಧಗಳ ಗೋಡೆ ಮಾಡುಗಳು ನೋವು ನರಳಾಟವನ್ನು ಪಿಸುಗುಡುವುದಿಲ್ಲವೇ? ಅಂತಹ ಸುಖಾಸೀನಗಳ ಮೇಲೆ ಕುಳಿತು ಜನಚಿಂತನೆ ಮಾಡುವುದು ಸಾಧ್ಯವೇ? ಅಂತಹ ಮಹಲಿನ ಹಂಸತೂಲಿಕಾ ತಲ್ಪದಲ್ಲಿ ಪ್ರಧಾನಿಯಾದ ವ್ಯಕ್ತಿ ದಿಂಬಿಗೆ ತಲೆಯಾನಿಸಿ ನಿದ್ರಿಸುವುದು ಸಾಧುವೇ?

ಸಂವೇದನೆಗಳು ಸತ್ತು ಹೋದಂತೆ ನಡೆದುಕೊಂಡಿರುವವರು ಏಕಾಏಕಿ ಮಿಡಿಯುವ ಕಂಬನಿ ಕೃತ್ರಿಮ ಅಲ್ಲವೆಂದು ನಂಬುವುದಾದರೂ ಹೇಗೆ?

ಸಾವು ಸಂಕಟಗಳ ನಡುವಿನಿಂದ ಮೋದಿ ಆಡಳಿತದ ವಿರುದ್ಧ ಜನಾಕ್ರೋಶ ಸಿಡಿದಿರುವುದು ಸಹಜ ಬೆಳವಣಿಗೆ. ಉತ್ತುಂಗದಲ್ಲಿದ್ದ ಅವರ ಜನಪ್ರಿಯತೆಯ ಉಕ್ಕಿನ ಕವಚಕ್ಕೆ ತುಕ್ಕು ತಗುಲತೊಡಗಿದೆ. ಪಕ್ಷ ಪರಿವಾರದಲ್ಲಿ ಗಾಬರಿಯ ಗಂಟೆ ಮೊಳಗಿದೆ. ಹಾನಿಯನ್ನು ತಡೆಯುವ ಬಗೆಯೆಂತು ಎಂಬ ಕುರಿತು ಚಿಂತನೆ ನಡೆದಿದೆ. ಉತ್ತರಪ್ರದೇಶದ ವಿಧಾನಸಭೆ ಚುನಾವಣೆಗೆ ವರ್ಷವೂ ಉಳಿದಿಲ್ಲ. ಯೋಗಿ ಆದಿತ್ಯನಾಥರಿಗೆ ಹೋಲಿಸಿದರೆ ನರೇಂದ್ರ ಮೋದಿಯವರು ಅದೃಷ್ಟವಂತರು. ಮುಂದಿನ ಲೋಕಸಭಾ ಚುನಾವಣೆಗಳು ಮೂರು ವರ್ಷ ದೂರದಲ್ಲಿವೆ. ಅಷ್ಟರೊಳಗೆ ವರ್ಚಸ್ಸಿನ ಕವಚಕ್ಕೆ ತಗುಲಿರುವ ತುಕ್ಕನ್ನು ಉಜ್ಜಿ ತೆಗೆದು, ಹೊಸ ತಂತ್ರಗಳ ಹೆಣೆಯಲು ಸಾಕಷ್ಟು ಕಾಲಾವಕಾಶ ಉಂಟು.

ಅಳುವ ದೃಶ್ಯ ಮನುಷ್ಯನನ್ನು ವಿನಮ್ರವಾಗಿಸುತ್ತದೆ, ಮಾನವೀಯಗೊಳಿಸುತ್ತದೆ. ಅನುಕಂಪ-ಸಹಾನುಭೂತಿಯನ್ನು ಹುಟ್ಟಿಸುತ್ತದೆ. ಕಣ್ಣೀರಿಡುವ ವ್ಯಕ್ತಿಯು ಸರ್ವಶಕ್ತನೇನೂ ಅಲ್ಲ, ಬದಲಾಗಿ ಮನುಷ್ಯ ಮಾತ್ರನೇ ಎಂಬ ಅನುಕಂಪ ಹುಟ್ಟಿಸುತ್ತದೆ. ಆತ ತಪ್ಪು ಮಾಡಿರಲಾರ, ಮಾಡಿದ್ದರೂ ಪರವಾಗಿಲ್ಲ, ಕಣ್ಣೀರು ಅವನ ಪಶ್ಚಾತ್ತಾಪವೇ ಇದ್ದೀತು ಎಂಬ ಭಾವನೆಯನ್ನು ಹುಟ್ಟಿಸಿಬಿಡುತ್ತದೆ.

ಕಣ್ಣೀರು ಹಾಕಿ ಅದಕ್ಷ ಆಡಳಿತವನ್ನು ಅಸಾಮರ್ಥ್ಯವನ್ನು ಮುಚ್ಚಿಡುವುದು ಸಾಧ್ಯವಿಲ್ಲ. ವಚನಭಂಗ, ಮೋಹಭಂಗವನ್ನು ಅದುಮಿಡುವುದು ಸುಲಭವಲ್ಲ. ಕುಸಿಯತೊಡಗಿರುವ ಜನತಂತ್ರ, ಜನಸಮುದಾಯಗಳ ವಿಶ್ವಾಸ, ಕವಿಯುತ್ತಿರುವ ನಿರುದ್ಯೋಗ, ಹದಗೆಟ್ಟಿರುವ ಅರ್ಥಸ್ಥಿತಿ, ದ್ರುವೀಕರಣ ರಾಜಕಾರಣದಿಂದಾಗಿ ತಲೆಯೆತ್ತುತ್ತಿರುವ ಆರ್ಥಿಕ-ಸಾಮಾಜಿಕ ಘರ್ಷಣೆಗಳ ಕುರೂಪವನ್ನು ಅಡಗಿಸುವುದು ದುಸ್ಸಾಧ್ಯವೇ ಸರಿ. ಸಾವುನೋವುಗಳಿಗೆ ಹನಿಗೂಡದ ಕಣ್ಣುಗಳು ವರ್ಚಸ್ಸಿನ ಹಾನಿಗೆ, ಗತವೈಭವಕ್ಕೆ ಮರುಜೀವ ನೀಡುವುದಕ್ಕೆ ರಾಜಕೀಯ ನಷ್ಟವನ್ನು ತುಂಬಿಕೊಳ್ಳುವುದಕ್ಕೆ ಕಂಬನಿ ತುಂಬುವುದು ಜನದ್ರೋಹ.

ಹೊಟ್ಟೆ ಬಟ್ಟೆಗೆ ಬಡಿದಾಡುವ ನಿತ್ಯ ಯಾತನೆಯ ಲೌಕಿಕ ವಾಸ್ತವಕ್ಕೆ ಜನಸಮೂಹಗಳನ್ನು ತುಸುಕಾಲ ಜೋಮುಗಟ್ಟಿಸಬಹುದು. ಕಡು ಭಾವುಕತೆಯ ಅರಿವಳಿಕೆ ಮದ್ದು ನೀಡಿ ಹುಸಿ ಆವರಣದಲ್ಲಿ ಕೆಲ ಕಾಲ ಬಂಧಿಸಲು ಬಂದೀತು. ಆದರೆ ಅರಿವಳಿಕೆಯ ಮದ್ದಿನ ಪ್ರಭಾವ ಕಾಯಂ ಅಲ್ಲ. ಹೀಗಾಗಿ ಮೈಮರೆವು ಚಿರಾಯು ಅಲ್ಲ.


ಇದನ್ನೂ ಓದಿ: ಲ್ಯುಟಿನ್ಸ್ ದೆಹಲಿಯ ಐಶಾರಾಮದ ಬಗ್ಗೆ ಗೇಲಿ; ಸಾವಿನ ಸರಣಿಯ ಮಧ್ಯೆ 20 ಸಾವಿರ ಕೋಟಿ ಮಹಲು

ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬರಹ ಅರ್ಥಪೂರ್ಣವಾಗಿದೆ. ಬಹುಜನ ಅಪ್ಪಟ ದೇಶ ಭಕ್ತರು ಶಾಶ್ಕವತವಾದ ಗಟ್ಟಿಮುಟ್ಟಾದ ತಳಪಾಯದ ಮೇಲೆ ಕಟ್ಟಿದ್ದ ಏಕತೆ, ಭಾವೈಕ್ಯತೆಯ ಭಾರತ ದೇಶವನ್ನು ಬಿಜೆಪಿ ನೇತೃತ್ವದ ಮನೆಯಾಳ ಮೋದಿ ಬುಡ ಸಹಿತ ಕೇವಲ ೭ ವರ್ಷಗಳಲ್ಲೇ ನೆಲಸಮ ಮಾಡಿ ಸೆಂಟ್ರಲ್ ವಿಸ್ತಾ ಹೆಸರಿನ ಸೂತಕದ ಸೌಧ ನಿರ್ಮಾಣ ಮಾಡುತ್ತಿದ್ದಾರೆ. ಜಗತ್ತಿನಲ್ಲೇ ಅತ್ಯಂತ ದುರ್ಬಲ ಪ್ರಧಾನಿ ಎಂಬ ಕುಖ್ಯಾತಿಯನ್ನು ಮೋದಿ ಪಡೆದುಕೊಳ್ಳುವ ಮೂಲಕ ದೇಶದ ಮಾನ ಮರ್ಯಾದೆಯನ್ನು ಹಾಳು ಮಾಡಿದರು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....