ಕಾಂಗ್ರೆಸ್ ಪಕ್ಷದ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ ಹೊರಟಿರುವುದು ಖಂಡನೀಯ. ಎಲ್ಲ ಕಡೆಗಳಲ್ಲಿ ಕೇಂದ್ರ ಮತ್ತು ರಾಜ್ಯದ ಸಚಿವರು ಮುಂದೆ ನಿಂತು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.
“ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ನಾಲಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ. ಅವರು ಎಷ್ಟೇ ಕೂಗಾಡಲಿ, ಹಾರಾಡಲಿ, ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ” ಎಂದು ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ
“90 ವರ್ಷಗಳ ಹಿಂದಿನ ಜನಗಣತಿ ಆಧಾರದಲ್ಲಿ ಇಂದಿನ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸರಿಯಲ್ಲ. ಹತ್ತು ವರ್ಷಕ್ಕೊಮ್ಮೆ ಜಾತಿ ಗಣತಿ ನಡೆಸುವುದರಿಂದ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕವಾಗಿ ರೂಪಿಸಲು ಮತ್ತು ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ನಮ್ಮ ಕಾಂಗ್ರೆಸ್ ಸರ್ಕಾರ ಇದ್ದಾಗ 180 ಕೋಟಿ ಖರ್ಚು ಮಾಡಿ ಜಾತಿಜನಗಣತಿ ಮಾಡಿಸಿದ್ದೇನೆ ಎಂದು ಅವರ ಅವರು ಹೇಳಿದ್ದಾರೆ.
ಪ್ರಸ್ತುತ ಬೇರೆ ರಾಜ್ಯಗಳು ಜಾತಿ ಗಣತಿ ನಡೆಸುವ ಬಗ್ಗೆ ಆಸಕ್ತಿ ತೋರಿಸುತ್ತಿದೆ ಎಂದಿರುವ ಸಿದ್ದರಾಮಯ್ಯ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಪ್ರಧಾನಿ ಮೋದಿ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿರುವುದನ್ನು ಸ್ವಾಗತಿಸಿದ್ದಾರೆ.
“ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!
“ಮೈಸೂರು ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ವಿಷಾದನೀಯ ಬೆಳವಣಿಗೆ, ಒಪ್ಪಂದದ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಸಿಕ್ಕಿದೆ” ಎಂದು ಅವರು ತಿಳಿಸಿದ್ದಾರೆ.
ಮೆಟ್ರೋ ಉದ್ಘಾಟನಾ ಸಭೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ, “ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ. ಬೇರೆ ರಾಜ್ಯದಿಂದ ಬಂದ ನಾಯಕರು ಹಿಂದಿ/ಇಂಗ್ಲಿಷ್ನಲ್ಲಿ ಭಾಷಣ ಮಾಡಲಿ, ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿ ಕಾರಿದ್ದಾರೆ.
“ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ವಿದ್ಯಾರ್ಥಿಗಳು,ಹೆತ್ತವರು ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣೇಶ ಹಬ್ಬ ಆಚರಿಸಬಹುದು. ಸಾರ್ವಜನಿಕರೂ ಗುಂಪು ಸೇರುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದು, ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ