Homeಕರ್ನಾಟಕ'ಇಷ್ಟೊಂದು ಮಂದಿ ಶೇ.100 ಅಂಕ ಗಳಿಸುವುದು ಅಸಾಧ್ಯ..'; ನೀಟ್ ಫಲಿತಾಂಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

‘ಇಷ್ಟೊಂದು ಮಂದಿ ಶೇ.100 ಅಂಕ ಗಳಿಸುವುದು ಅಸಾಧ್ಯ..’; ನೀಟ್ ಫಲಿತಾಂಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

- Advertisement -
- Advertisement -

ಹರಿಯಾಣದ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಗಳಿಸಿರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀಟ್ (NEET) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ, ಈ ಹಿಂದೆ ಬಂದ ಟಾಪರ್‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ 67 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ” ಎಂದು ವಿವರಿಸಿದ್ದಾರೆ.

“ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯವೇ ಸರಿ. ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, ‘ಮಾರ್ಕಿಂಗ್ ಪ್ರಕ್ರಿಯೆ’ ಮತ್ತು ‘ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ’ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ? ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ” ಎಂದು ಹೇಳಿದ್ದಾರೆ.

“ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ” ಎಂದಿದ್ದಾರೆ.

“ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ” ಎಂದು ಹೇಳಿದ್ದಾರೆ.

“ಎನ್‌ಟಿಎ ಪ್ರಾಸ್ಪೆಕ್ಟಸ್, ನೀಟ್ ಬ್ರೋಷರ್ ಮತ್ತು ಸರ್ಕಾರಿ ಸೂಚನೆಗಳಲ್ಲಿ ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು. ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು ಮೇ 5, 2024 ರಂದು ನಡೆಸಲಾಯಿತು ಮತ್ತು ಅದರ ಫಲಿತಾಂಶವನ್ನು ಜೂನ್ 14, 2024 ರಂದು ಪ್ರಕಟವಾಗಬೇಕಿತ್ತು. ಆದರೆ, ಇದ್ದಕ್ಕಿದ್ದಂತೆ ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್‌ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ” ಎಂದು ಅವರು ಪ್ರಶ್ನಿಸಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್‌ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತೇನೆ” ಎಂದು ಸಿಎಂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ತಮಿಳುನಾಡಿನಲ್ಲಿ ನೀಟ್ ಪರೀಕ್ಷೆ ರದ್ದುಗೊಳಿಸಿ..’; ಡಿಎಂಕೆ, ಎಐಎಡಿಎಂಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...