2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಪಕ್ಷ ನಿನ್ನೆಯಷ್ಟೇ (ಮಂಗಳವಾರ) ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಮತ್ತು ರಾಮದುರ್ಗ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳ ಪ್ರಬಲ ಆಕಾಂಕ್ಷಿಗಳಿಗೆ ಟಿಕೆಟ್ ನೀಡುತ್ತಿಲ್ಲ. ಇದರಿಂದ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ಮಧಾನಗೊಂಡಿದ್ದು, ಪಕ್ಷದ ಹೈಕಮಾಂಡ್ ವಿರುದ್ಧವೇ ಗುಡುಗಿದ್ದಾರೆ.
ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹುಬ್ಬಳ್ಳಿ ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ. ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಾರೆ. ಈ ಬಾರಿ ಇಲ್ಲಿಂದಲೇ ಸ್ಪರ್ಧಿಸುವ ಬಯಕೆ ಹೊಂದಿದ್ದರು. ಮೊದಲಪಟ್ಟಿಯಲ್ಲಿ ಏಕೆ ತಮ್ಮ ಹೆಸರು ಘೋಷಣೆ ಆಗಿಲ್ಲ ಎಂಬುದರ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ.
ಅವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನುವ ವಿಚಾರ ನಿನ್ನೆಯಿಂದ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದೇ ಉದ್ದೇಶದಿಂದ ಬಿಜೆಪಿ ಜೈಕಮಾಂಡ್ ಅವರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ ಎನ್ನಲಾಗಿದೆ. ಹೀಗಾಗಿ ಅವರು ಇಂದು (ಬುಧವಾರ) ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.
ಇದನ್ನೂ ಓದಿ: 189 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ಸಂಪೂರ್ಣ ವಿವರ ಇಲ್ಲಿದೆ
ಟಿಕೆಟ್ ನೀಡದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ
ಒಂದು ವೇಳೆ ಈ ಭಾರಿ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಆದಲ್ಲಿ ಜಗದೀಶ್ ಶೆಟ್ಟರ್ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ. ಮೊದಲ ಪಟ್ಟಿ ಘೋಷಣೆಯಾದ ಬಳಿಕ ಅವರು ಪಕ್ಷೇತರ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ.
ಅಸಮಾಧಾನಗೊಂಡಿರುವ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಬರುವಂತೆ ಹೇಳಿದ್ದಾರೆ. ಅವರಿಗೆ ರಾಜ್ಯಪಾಲ ಹುದ್ದೆಯ ಭರವಸೆ ನೀಡಿ ಸಮಾಧಾನಪಡಿಸುವ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗ ಸಿದ್ಧರಾಗಿದ್ದರು. ಟಿಕೆಟ್ ನೀಡದಿರುವುದಕ್ಕೆ ಸಹಜವಾಗಿ ಬೇಸರಗೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ (67) ಸತತವಾಗಿ ಆರು ಬಾರಿ ಗೆದ್ದಿದ್ದಾರೆ. ಹಾಗಾಗಿ ತನಗೆ ಟಿಕೆಟ್ ಸಿಗುತ್ತದೆ ಎನ್ನುವ ಭರವಸೆಯಲ್ಲಿದ್ದ ಶೆಟ್ಟರ್ ಟಿಕೆಟ್ ಕೈತಪ್ಪುವ ಸೂಚನೆ ಸಿಗುತ್ತಿದ್ದಂತೆ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು 6 ಸಲ ಚುನಾವಣೆಯಲ್ಲಿ 21,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಚುನಾಯಿತನಾಗಿದ್ದೇನೆ. ನನ್ನ ವಿರುದ್ಧ ಆರೋಪಗಳಿಲ್ಲ. ಹೀಗಿದ್ದರೂ ಏಕೆ ಚುನಾವಣೆಯಿಂದ ಹೊರಗಿಡಲಾಗಿದೆ? ಚುನಾವಣೆ ಸಂಬಂಧ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇನೆ. ಟಿಕೆಟ್ ನೀಡದಿದ್ದರೂ ನಾನು ಕ್ಷೇತ್ರದಲ್ಲಿ ಪ್ರಚಾರ ಮುಂದುವರಿಸುತ್ತೇನೆ. ಜೊತೆಗೆ ಬರಲಿರುವ ಚುನವಣೆಯಲ್ಲಿ ನಾನು ಸ್ಪರ್ಧಿಸಿಯೇ ತಿರುತ್ತೇನೆ” ಎಂದು ಹೇಳುವ ಮೂಲಕ ಬಿಜೆಪಿಯಿಂದ ಟಿಕೆಟ್ ನೀಡದಿದ್ದರೂ ಪಕ್ಷೇತರರಾಗಿ ಸ್ಪಧಿಸುವ ಮುನ್ಸೂಚನೆ ನೀಡಿದ್ದಾರೆ.
ಈ ಹಿಂದೆ ಬಿಜೆಪಿ ಹೈಕಮಾಂಡ್ ನಾಯಕರು ಮುಂಬರುವ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡುವಂತೆ ಶೆಟ್ಟರ್ ಬಳಿ ಮನವಿ ಮಾಡಿತ್ತು. ಇದರಿಂದ ಬೇಸರಗೊಂಡಿದ್ದ ಅವರು ಸುದ್ದಿಗೋಷ್ಠಿ ನಡೆಸಿ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಟಿಕೆಟ್ ನೀಡದಿದ್ದರೂ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವತಂತ್ರವಾಗಿ ಆಯ್ಕೆ ಮಾಡುವ ಎಚ್ಚರಿಕೆ ನೀಡಿದ್ದರು. ಬಂಡಾಯದ ಬಾವುಟ ನೆಡಲು ಸಿದ್ಧರಾಗಿದ್ದ ಶೆಟ್ಟರ್ಗೆ ದೆಹಲಿ ನಾಯಕರು ಡೋಂಟ್ ಕೇರ್ ಎಂದಿದ್ದಾರೆ.