Homeಮುಖಪುಟಜಮ್ಮು ಕಾಶ್ಮೀರ: ಉಗ್ರರ ದಾಳಿಗೆ ಐವರು ಸೇನಾ ಸಿಬ್ಬಂದಿ ಸಾವು

ಜಮ್ಮು ಕಾಶ್ಮೀರ: ಉಗ್ರರ ದಾಳಿಗೆ ಐವರು ಸೇನಾ ಸಿಬ್ಬಂದಿ ಸಾವು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಯೋಧರ ವಾಹನದ ಮೇಲೆ ಹೊಂಚುದಾಳಿ ನಡೆಸಿದ್ದರಿಂದ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓರ್ವ ಯೋಧನಿಗೆ ಗಂಭೀರ ಗಾಯಗಳಾಗಿದ್ದು, ರಜೌರಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿ ನಡೆದಿದೆ ಎಂದು ಸೇನೆಯ ಉತ್ತರ ಕಮಾಂಡ್ ಪ್ರಧಾನ ಕಚೇರಿ ತಿಳಿಸಿದೆ.

“… ರಾಜೌರಿ ಸೆಕ್ಟರ್‌ನಲ್ಲಿ ಭಿಂಬರ್ ಗಲಿ ಮತ್ತು ಪೂಂಚ್ ನಡುವೆ ಚಲಿಸುತ್ತಿದ್ದ ಸೇನಾ ವಾಹನದ ಮೇಲೆ ಅಪರಿಚಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಭಾರೀ ಮಳೆ ಮತ್ತು ಪ್ರದೇಶದಲ್ಲಿನ ಮಸುಕಿನ ವಾತಾವರಣದ ಲಾಭವನ್ನು ಭಯೋತ್ಪಾದಕರು ಪಡೆದಿದ್ದಾರೆ” ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. “ಭಯೋತ್ಪಾದಕರು ಗ್ರೆನೇಡ್‌ಗಳನ್ನು ಬಳಸಿದ್ದರಿಂದ ವಾಹನಕ್ಕೆ ಬೆಂಕಿ ತಲುಲಿದೆ” ಎಂದು ಮಾಹಿತಿ ನೀಡಿದ್ದಾರೆ.

ಮೃತರು ರಾಷ್ಟ್ರೀಯ ರೈಫಲ್ಸ್ ಘಟಕಕ್ಕೆ ಸೇರಿದವರಾಗಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.

ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರತಿಕ್ರಿಯಿಸಿದ್ದು, ಸೇನಾ ಸಿಬ್ಬಂದಿಯ ಸಾವಿನ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ದೇಶಕ್ಕೆ ಅವರು ನೀಡಿರುವ ಉತ್ಕೃಷ್ಟ ಸೇವೆಯನ್ನು ಎಂದಿಗೂ ಮರೆಯಲಾಗದು. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ” ಎಂದು ಅವರು ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಪುಲ್ವಾಮಾ ದಾಳಿಯ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಈ ಆಘಾತಕಾರಿ ಬೆಳವಣಿಗೆಗಳು ಆಗಿವೆ.

“ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು” ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಸ್ಫೋಟಕ ಹೇಳಿಕೆ ನೀಡಿದ್ದರು.

ದಿ ವೈರ್ ಪತ್ರಕರ್ತ ಕರಣ್ ಥಾಪರ್‌ರವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, “ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದರು.

ಇದನ್ನೂ ಓದಿರಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು.

“ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು” ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದರು.

“ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ” ಎಂದು ಪ್ರಶ್ನಿಸಿದ್ದರು. ಸತ್ಯಪಾಲ್‌ ಅವರ ಹೇಳಿಕೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...