ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಅರೋಪಿಗಳಲ್ಲಿ ಇಬ್ಬರು ಎಬಿವಿಪಿಗೆ ಸೇರಿದವರು ಎಂದು ಎಡ ನೇತೃತ್ವದ ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ. ಇದಲ್ಲದೆ ಲೈಂಗಿಕ ಕಿರುಕುಳ ನೀಡಿದ ದೂರಿನ ಬಗ್ಗೆ ಆಡಳಿತ ಮಂಡಳಿಯ ನಿರ್ಲಕ್ಷ್ಯವನ್ನು ಆರೋಪಿಸಿ ಕ್ಯಾಂಪಸ್ನ ಮುಖ್ಯ ಗೇಟ್ನಲ್ಲಿ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಮಾರ್ಚ್ 31ರ ರಾತ್ರಿ ಕ್ಯಾಂಪಸ್ನಲ್ಲಿ ಇಬ್ಬರು ಮಾಜಿ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ವಿಶ್ವವಿದ್ಯಾನಿಲಯ ಆಡಳಿತವು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.
ಆದರೆ ದುಷ್ಕರ್ಮಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ, ನಾನು ಮೊದಲು ದೂರು ಸಲ್ಲಿಸಿ 30 ಗಂಟೆಗಳಿಗೂ ಹೆಚ್ಚು ಸಮಯ ಕಳೆದಿದೆ ಮತ್ತು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ನನ್ನ ಸ್ನೇಹಿತರು ಮತ್ತು ನಾನು ನಮ್ಮ ತರಗತಿಗಳನ್ನು ಬಿಟ್ಟು ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದೇವೆ, ಆದರೆ ದುಷ್ಕರ್ಮಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಆದರೆ ವಿಶ್ವವಿದ್ಯಾನಿಲಯವು ಪ್ರಕರಣದಲ್ಲಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಿದೆ ಎಂದು ಹೇಳಿಕೊಂಡಿದೆ. ಆರೋಪಿಗಳಿಂದ ವಿವರಣೆಯನ್ನು ಕೇಳಲಾಗಿದೆ ಎಂದು ಜೆಎನ್ಯು ಮುಖ್ಯ ಪ್ರೊಕ್ಟರ್ ಸುಧೀರ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.
ಕ್ಯಾಂಪಸ್ನಲ್ಲಿ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಸಂತ್ರಸ್ತೆ ಮತ್ತಷ್ಟು ಕಳವಳ ವ್ಯಕ್ತಪಡಿಸಿದ್ದು, ನನಗೆ ಕಿರುಕುಳ ನೀಡಿದ ವ್ಯಕ್ತಿಯು ನಾನು ವಾಸಿಸುವ ಅದೇ ಹಾಸ್ಟೆಲ್ನಲ್ಲಿ ವಾಸಿಸುತ್ತಾನೆ ಮತ್ತು ನನಗೆ ಮಾನಸಿಕ ಕಿರುಕುಳಕ್ಕೆ ಕಾರಣವಾದ ವ್ಯಕ್ತಿಯನ್ನು ಎದುರಿಸಲು ನಾನು ಅದೇ ಹಾಸ್ಟೆಲ್, ಅದೇ ಕಾರಿಡಾರ್ಗೆ ಹೋಗಬೇಕಿದೆ, ಇದು ನನಗೆ ಬೆದರಿಕೆಯನ್ನು ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟವು ಈ ವಿಚಾರದಲ್ಲಿ ನಿಷ್ಕ್ರಿಯವಾಗಿರುವುದನ್ನು ಸಂತ್ರೆಸ್ತೆ ಮನಗಂಡಿದ್ದು, ಈ ಬಗ್ಗೆ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಆರೋಪಿಗಳಲ್ಲಿ ಒಬ್ಬರನ್ನು ಸಬರಮತಿ ಹಾಸ್ಟೆಲ್ನಲ್ಲಿದ್ದು, ತಕ್ಷಣವೇ ಅವರನ್ನು ಬಂಧಿಸಬೇಕು. ಆರೋಪಿಯ ನೋಂದಣಿಯನ್ನು ರದ್ದುಪಡಿಸಬೇಕು ಮತ್ತು ತನಗೆ ರಕ್ಷಣೆಯನ್ನು ನೀಡಬೇಕು ಎಂದು ಸಂತ್ರಸ್ತೆ ವಿದ್ಯಾರ್ಥಿನಿ ಆರೋಪಿಸಿದ್ದಾರೆ.
ದೂರುದಾರೆ ಮತ್ತು ಆಕೆಯ ಸ್ನೇಹಿತೆ ಜೆಎನ್ಯು ರಿಂಗ್ ರೋಡ್ ಬಳಿ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೃತ್ಯದಲ್ಲಿ ಇಬ್ಬರು ಹಳೆ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಭಾಗಿಯಾಗಿದ್ದು, ಸಂತ್ರಸ್ತೆಯನ್ನು ಕಾರಿನಲ್ಲಿ ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ನಾಲ್ವರು ಆರೋಪಿಗಳಲ್ಲಿ ಇಬ್ಬರು ಹಳೆ ವಿದ್ಯಾರ್ಥಿಗಳು ಆರೆಸ್ಸೆಸ್ ಸಂಯೋಜಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗೆ ಸೇರಿದವರು ಎಂದು ಎಡ ನೇತೃತ್ವದ ವಿದ್ಯಾರ್ಥಿ ಸಂಘ ಆರೋಪಿಸಿದೆ. ಆದರೆ ಎಬಿವಿಪಿ ಈ ಆರೋಪವನ್ನು ಅಲ್ಲಗಳೆದಿದ್ದು, ಸುಳ್ಳು ಆರೋಪ ಹೊರಿಸಲಾಗುತ್ತಿದೆ ಎಂದು ಪ್ರತಿಕ್ರಿಯೆಯನ್ನು ನೀಡಿದೆ.
ಇದನ್ನು ಓದಿ: ಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ‘ಅಲ್ ಜಝೀರಾ’ಗೆ ನಿರ್ಬಂಧ ವಿಧಿಸಿದ ಇಸ್ರೇಲ್