ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಅಪರಿಚಿತರು ಪತ್ರಕರ್ತರೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ರಕರ್ತವಿಮಲ್ ಕುಮಾರ್ ಯಾದವ್ (35) ಎಂಬುವರನ್ನು ಪ್ರೇಮನಗರ ಗ್ರಾಮದ ಅವರ ನಿವಾಸದಲ್ಲಿ ಹತ್ಯೆ ಮಾಡಲಾಗಿದೆ. ಇವರು ಹಿಂದಿ ದಿನಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಘಟನೆ ಕುರಿತು ಟ್ವೀಟ್ ಮಾಡಿರುವ ಬಿಹಾರ ಪೊಲೀಸರು, ”ದಾಳಿಕೋರರು ಶುಕ್ರವಾರ ಬೆಳಿಗ್ಗೆ 5.30ರ ಸುಮಾರಿಗೆ ಯಾದವ್ ಅವರ ಮನೆಯ ಬಾಗಿಲು ತಟ್ಟಿದ್ದಾರೆ. ಈ ವೇಳೆ ಅವರು ಗೇಟ್ ತೆರೆದ ತಕ್ಷಣ ಗುಂಡು ಹಾರಿಸಿದ್ದಾರೆ” ಎಂದು ಬರೆದಿದ್ದಾರೆ.
ಈ ಗುಂಡಿನ ದಾಳಿಯಲ್ಲಿ ಯಾದವ್ ಸ್ಥಳದಲ್ಲೇ ಮೃತಪಟ್ಟರು. ಸುದ್ದಿ ತಿಳಿದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮತ್ತು ಸಂಬಂಧಪಟ್ಟ ಪೊಲೀಸ್ ಠಾಣೆಯ ರಾಣಿಗಂಜ್ನ ಎಸ್ಎಚ್ಒ ಸ್ಥಳಕ್ಕೆ ಧಾವಿಸಿದ್ದಾರೆ.
ಘಟನೆ ಬಗ್ಗೆ ಮಾತನಾಡಿದ ಅರಾರಿಯಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ಅವರು, ”ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನದಳವನ್ನು ಕರೆಸಲಾಗಿದೆ. ಮೃತ ಪತ್ರಕರ್ತ ಯಾದವ್ ಅವರು ಹಳೆಯ ವಿವಾದದಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ. ಎಲ್ಲಾ ದೃಷ್ಟಿಕೋನದಲ್ಲೂ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಿ, ”ನಾನು ನಿಜವಾಗಿಯೂ ದುಃಖಿತನಾಗಿದ್ದೇನೆ ಮತ್ತು ತಕ್ಷಣವೇ ಘಟನೆಯ ಬಗ್ಗೆ ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಹೇಳಿದ್ದಾರೆ.
#WATCH | On the law and order situation, Bihar Deputy Chief Minister Tejashwi Yadav says, "It is the work of BJP to defame Bihar…According to the NCRB record, the crime is highest in Delhi be it murder, kidnapping, rape or loot. All this is happening in Delhi…" pic.twitter.com/q7X0Iclruq
— ANI (@ANI) August 18, 2023
ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ”ಬಿಹಾರದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ತೋರಿಸುತ್ತದೆ ಎಂದು ಆರೋಪಿಸಿದೆ.
”ಬಿಹಾರದಲ್ಲಿ ಪತ್ರಕರ್ತರು ಸೇರಿದಂತೆ ಅಮಾಯಕ ನಾಗರಿಕರು ಮತ್ತು ಪೊಲೀಸ್ ಸಿಬ್ಬಂದಿಯನ್ನು ಸಹ ಕೊಲ್ಲುತ್ತಿರುವಾಗ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಾಮ್ರಾಟ್ ಚೌಧರಿ ಆರೋಪಿಸಿದ್ದಾರೆ.
ವಿರೋಧಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ”ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಸಿಎಂ ಸೂಚನೆ ನೀಡಿದ್ದಾರೆ. ಬಿಜೆಪಿಯವರು ರಾಜ್ಯದ ಪ್ರತಿಷ್ಠೆಯನ್ನು ಹಾಳು ಮಾಡುವ ಕೆಲಸವನ್ನು ಮಾತ್ರ ಮಾಡುತ್ತಿದ್ದಾರೆ. ಎನ್ಸಿಆರ್ಬಿ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲೇ ಅತಿಹೆಚ್ಚು ಕೊಲೆ, ಅಪಹರಣ ಮತ್ತು ಲೂಟಿ ಸೇರಿದಂತೆ ಅಪರಾಧ ಪ್ರಕರಣಗಳು ದಾಖಲಾಗಿದೆ. ಅಲ್ಲಿ ಪೊಲೀಸ್ ಇಲಾಖೆಯು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿದೆ. ದೇಶದ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಅಲ್ಲಿ ವಾಸಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.