ಮದುವೆಯ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಜರಂಗದಳದ ನಾಯಕ ದಿಲೀಪ್ ಸಿಂಗ್ ಬಜರಂಗಿ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ಕಾನ್ಪುರದ ಗೋವಿಂದ್ ನಗರದಲ್ಲಿ ನಡೆದಿದೆ.
ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಗೋವಿಂದ್ ನಗರ ಪೊಲೀಸ್ ಠಾಣೆಯ ಹೊರಗೆ ತನ್ನ ಮುಖದ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನಂತರ ಬಜರಂಗಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ದಕ್ಷಿಣ) ಮಹೇಶ್ ಕುಮಾರ್ ತಿಳಿಸಿದ್ದಾರೆ.
ನವೆಂಬರ್ 5, 2024 ರಂದು, ಭಜರಂಗಿ ತನ್ನೊಂದಿಗೆ ಸ್ನೇಹ ಬೆಳೆಸಿ, ಘಂಟಾಘರ್ನ ಹೋಟೆಲ್ಗೆ ಕರೆದೊಯ್ದು ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕಲೆಕ್ಟರ್ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಜರಂಗಿ ಅಶ್ಲೀಲ ವೀಡಿಯೋಗಳನ್ನು ಕೂಡ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಆರಂಭಿಸಲಾಗಿತ್ತು. ಆದರೆ, ಕಾನ್ಪುರದ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾಗಿದ್ದ ಆರೋಪಿ ತಲೆಮರೆಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಸೋಮವಾರ, ಬಜರಂಗಿ ತನ್ನ ಬೆಂಬಲಿಗರು ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ಗೋವಿಂದ್ ನಗರ ಪೊಲೀಸ್ ಠಾಣೆಗೆ ಆಗಮಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಸ್ಟ್ರೀಮ್ ಮಾಡುವಾಗ ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ಪೊಲೀಸ್ ಠಾಣೆಯ ಹೊರಗೆ ಬಜರಂಗಿಯ ಆತ್ಮಾಹುತಿ ಯತ್ನವು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿಪಡಿಸಿದ ಹಾಗೂ ಆತ್ಮಹತ್ಯೆಗೆ ಪ್ರಯತ್ನಿಸಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಿಸಲು ಪೊಲೀಸರನ್ನು ಪ್ರೇರೇಪಿಸಿತು ಎಂದು ಅಧಿಕಾರಿ ಹೇಳಿದರು.
ಇದನ್ನೂ ಓದಿ; ಸಿಪಿಎಂ ಕಾರ್ಯಕರ್ತನ ಹತ್ಯೆ: 9 ಮಂದಿ ಆರೆಸ್ಸೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ


