ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು ಆಡಳಿತಾತ್ಮಕ ನಿರ್ಧಾರಗಳ ಸರಣಿಯನ್ನು ಅಂಗೀಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಈ ಹಿಂದೆ ಮುಂದೂಡಲಾಗಿದ್ದ ಮಸೂದೆಯನ್ನು ವಿವಿಧ ಇಲಾಖೆಗಳಿಂದ ಬಂದ ಸಲಹೆಗಳನ್ನು ಪರಿಗಣಿಸಿ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಯಿತು.
“ಶಾಸನದ ಕುರಿತು ಹೆಚ್ಚಿನ ವಿವರಗಳನ್ನು ಸರ್ಕಾರ ಪ್ರತ್ಯೇಕವಾಗಿ ಹಂಚಿಕೊಳ್ಳಲಿದೆ. ಹಿಂದೆ ಕಾಯ್ದೆ ಕುರಿತ ನಿರ್ಧಾರ ತೆಗೆದುಕೊಳ್ಳಲು ಮುಂದೂಡಲಾಗಿತ್ತು, ಈಗ ನಾವು ಅದನ್ನು ತೆರವುಗೊಳಿಸಿದ್ದೇವೆ” ಎಂದು ಸಚಿವರು ಹೇಳಿದರು.
ರೋಹಿತ್ ವೇಮುಲ ಮಸೂದೆಯ ಕರಡು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ.ಗಳವರೆಗೆ ಪರಿಹಾರ ಮತ್ತು ತಪ್ಪಿತಸ್ಥರೆಂದು ಕಂಡುಬಂದವರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ.ಗಳ ದಂಡವನ್ನು ಪ್ರಸ್ತಾಪಿಸುತ್ತದೆ ಎಂದು ವರದಿಯಾಗಿದೆ.
ಶಿಕ್ಷಣ ವ್ಯವಸ್ಥೆಯಲ್ಲಿ ಯಾರೂ ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಬಾರದು ಎಂದು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು “ರೋಹಿತ್ ವೇಮುಲಾ ಕಾಯ್ದೆ”ಯನ್ನು ಜಾರಿಗೆ ತರಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ ವರ್ಷ ಏಪ್ರಿಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಕಾಯ್ದೆ ಜಾರಿಯಾಗಲೇಬೇಕು ಎಂದು ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವು ಜನಪರ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರಿದ್ದರು.
2016 ರಲ್ಲಿ, ಹೈದರಾಬಾದ್ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯದಿಂದಾಗಿ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿದ್ದರು.


