ಕೋವಿಡ್ 19 ರೂಪಾಂತರ ಪ್ರಕರಣ ನೆರೆಯ ಕೇರಳದಲ್ಲಿ ಪತ್ತೆ ಬೆನ್ನಲ್ಲೇ ಕರ್ನಾಟಕ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಾರ್ವಜನಿಕರು ನಿಯಮಗಳನ್ನು ಪಾಲಿಸುವಂತೆ ಸಲಹೆಯನ್ನು ನೀಡಿದೆ.
ಕೇರಳದಲ್ಲಿ ಕೋವಿಡ್-19 ರೂಪಾಂತರಿ ಜೆಎನ್ 1 ಪ್ರಕರಣ ಪತ್ತೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳವಂತೆ ಸೂಚನೆ ನೀಡಲಾಗಿದೆ. ಕೇರಳ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡುವಂತೆ ಆದೇಶ ನೀಡಲಾಗಿದೆ.
ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿಯಲ್ಲಿ ಏನೇನಿದೆ?
ಎಲ್ಲಾ ಹಿರಿಯ ನಾಗರೀಕರು ಅದರಲ್ಲೂ 60 ವರ್ಷ ಹಾಗೂ ಮೇಲ್ಪಟ್ಟವರು, ಕಿಡ್ನಿ, ಹೃದಯ, ಲಿವರ್ ಸಮಸ್ಯೆ ಸೇರಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ನ್ನು ಕಡ್ಡಾಯವಾಗಿ ಧರಿಸಬೇಕು. ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದೆ ದೂರ ಇರುವುದು ಸೂಕ್ತವಾಗಿದೆ.
ದೈಹಿಕ ಸ್ವಚ್ಛತೆಯನ್ನು ಕಾಪಾಡಬೇಕು. ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳಬೇಕಿದೆ.
ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಉತ್ತಮ. ಈ ವೇಳೆ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತರನ್ನು ಭೇಟಿ ಮಾಡುವುದನ್ನು ತಪ್ಪಿಸಬೇಕು.
ವಿದೇಶ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕೋವಿಡ್ ರೂಪಾಂತರ ಪ್ರಕರಣ ಪತ್ತೆ ಹಿನ್ನೆಲೆ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ನಿನ್ನೆ ಮನವಿ ಮಾಡಿದ್ದರು. ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ವ್ಯವಸ್ಥೆ ಮಾಡುವ ಬಗ್ಗೆಯೂ ಮಾಹಿತಿಯನ್ನು ನೀಡಿದ್ದರು.
ಕೇರಳದಲ್ಲಿ ಪತ್ತೆಯಾಗಿರುವ ಜೆಎನ್1 ಕೋವಿಡ್ ಉಪಪ್ರಭೇದದ ಬಗ್ಗೆ ಪ್ರತಿಕ್ರಿಯಿಸಿದ್ದ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್, ಆತಂಕ ಪಡಬೇಕಾದ ಅಗತ್ಯವಿಲ್ಲ. ಅದೊಂದು ಉಪಪ್ರಭೇದವಾಗಿದ್ದು, ಕೇರಳದಲ್ಲಿ ಅದನ್ನು ಈಗ ಪತ್ತೆ ಹಚ್ಚಲಾಗಿದೆ. 2-3 ತಿಂಗಳುಗಳ ಹಿಂದೆ ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಗಾಗಿದ್ದ ಭಾರತೀಯರಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ಭಾರತದ ಇತರೆ ರಾಜ್ಯಗಳಲ್ಲಿಯೂ ಈ ವೈರಸ್ ಹರಡಿದೆ. ಆದರೆ ಕೇರಳವು ಮೊದಲೇ ಪತ್ತೆ ಹಚ್ಚಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಉತ್ತಮವಾಗಿರುವುದರಿಂದ ಜಿನೊಮಿಕ್ ಸೀಕ್ವೆನ್ಸಿಂಗ್ ಮೂಲಕ ಅದನ್ನು ನಾವು ಪತ್ತೆ ಹಚ್ಚಲು ಸಾಧ್ಯವಾಗಿದೆ ಎಂದು ಹೇಳಿದ್ದರು.
ಮಂಡ್ಯದಲ್ಲಿ ಕೋವಿಡ್ ಪ್ರಕರಣ ಪತ್ತೆ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.ಇವರಿಗೆ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ.
ಇದನ್ನು ಓದಿ: ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ