ರಾಜ್ಯದಲ್ಲಿ ಅಕಾಲಿಕ ಮಳೆಗೆ ಬೆಳೆ ಹಾನಿ ಉಂಟಾಗಿದ್ದು, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ವೇಳೆ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರದ ಪ್ರಕೃತಿ ವಿಕೋಪ ಕಾರ್ಯದರ್ಶಿಗಳಿಗೆ ಆರ್ಥಿಕ ಇಲಾಖೆ ವತಿಯಿಂದ ಪತ್ರವನ್ನು ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ತುಮಕೂರಿನ ಸಿದ್ಧಗಂಗಾಮಠದ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
“ರಾಜ್ಯದಲ್ಲಿ ಬೆಳೆ ಹಾನಿ ಪರಿಹಾರಕ್ಕೆ 685 ಕೋಟಿ ರೂಪಾಯಿಗಳು ಎಲ್ಲಾ ಜಿಲಾಡಳಿತಗಳಲ್ಲಿ ಈಗಾಗಲೇ ಲಭ್ಯವಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪರಿಹಾರ ಆಪ್ನಲಿ ಮಾಹಿತಿ ಆಪ್ ಲೋಡ್ ಮಾಡಿದವರಿಗೆ ಪರಿಹಾರವನ್ನು ವಿತರಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
ಮುಂದುವರಿದು, “ಹಣಕಾಸಿನ ಅವಶ್ಯಕತೆ ಇದ್ದಲ್ಲಿ ಕೂಡಲೇ ತಿಳಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲು ತಕ್ಷಣವೇ ಒಂದು ತಂಡವನ್ನು ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯ ಸರ್ಕಾರದ ಸಮೀಕ್ಷೆಯೂ ನಡೆದಿದೆ” ಎಂದಿದ್ದಾರೆ.
ಮಳೆಯಿಂದಾಗಿ ರೈತರಿಗೆ ಅಪಾರ ಹಾನಿಯಾಗಿದ್ದು, ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದರು. “ನಿರಂತರವಾಗಿ ಸುರಿದ ಮಳೆಯಿಂದಾಗಿ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟವಾಗಿದೆ. ಲಕ್ಷಾಂತರ ರೂಪಾಯಿ ಸಾಲಮಾಡಿ ರೈತರು ಕಲ್ಕತ್ತಾದಿಂದ ಹೂಗಿಡಗಳನ್ನು ತರಿಸಿ ಹೊಲದಲ್ಲಿ ಹಾಕಿದ್ದರು. ಮಳೆಯಿಂದಾಗಿ ಬೆಳೆಪೂರ್ತಿ ಕೊಚ್ಚಿಹೋಗಿದೆ. ಕಳೆದ 25 ದಿನಗಳಿಂದ ಮಳೆಯಾಗುತ್ತಿದ್ದು ಬೆಳೆ ನಾಶವಾಗಿದೆ. ಸರ್ಕಾರ ಈಗಾಗಲೇ ಬೆಳೆನಷ್ಟದ ಸಮೀಕ್ಷೆ ಮಾಡಿಸಬೇಕಿತ್ತು, ಜಿಲ್ಲಾ ಉಸ್ತುವಾರಿ ಸಚಿವರು, ಮಂತ್ರಿಗಳು ರೈತರ ಸಂಕಷ್ಟ ಆಲಿಸಬೇಕಿತ್ತು. ಇದ್ಯಾವುದನ್ನೂ ಸರ್ಕಾರ ಮಾಡಿಲ್ಲ’ ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇನ್ನೂ ತಡ ಮಾಡದೆ ರಾಜ್ಯ ಸರ್ಕಾರ ತಕ್ಷಣ ಬೆಳೆ ನಷ್ಟದ ಸಮೀಕ್ಷೆ ಮಾಡಿ, ರೈತರಿಗೆ ಪರಿಹಾರದ ಹಣ ನೀಡಬೇಕು ಎಂದು ಮುಖ್ಯಮಂತ್ರಿಯವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದರು.