ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 21,390 ಹೊಸ ಕೊರೊನಾ ಕೇಸ್ಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೆ 15,617 ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 10.96% ಆಗಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 93,009 ಇದ್ದು, ಇದರಲ್ಲಿ 73 ಸಾವಿರ ಪ್ರಕರಣಗಳು ಬೆಂಗಳೂರಿನದಾಗಿವೆ.
ಕೊರೊನಾ ಸಂಬಂಧಿತ ಸಮಸ್ಯೆಗಳಿಂದಾಗಿ 10 ಮಂದಿ ಬಲಿಯಾಗಿದ್ದು, ಇದರಲ್ಲಿ ಬೆಂಗಳೂರಿನಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: 5 ಸಾವಿರ ಗಡಿಯತ್ತ ಓಮಿಕ್ರಾನ್: ಸೋಂಕು ಎಲ್ಲರಿಗೂ ಬರಲಿದೆ, ಬೂಸ್ಟರ್ ಡೋಸ್ ಅದನ್ನು ತಡೆಯದು ಎಂದ ತಜ್ಞರು
ಕೊರೊನಾ ಕೇಸಸ್ಗಳ ಇಂದಿನ ಪಟ್ಟಿಯನ್ನು ಬಿಡುಗಡೆ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ಸರ್ಕಾರದ ನಿಯಮಗಳನ್ನು ಪಾಲಿಸಲಿಲ್ಲ. ಅಧಿಕಾರಿಗಳಿಗೆ ತಮ್ಮ ಕರ್ತವ್ಯ ಮಾಡಲು ಬಿಡಲಿಲ್ಲ. ಈಗ ಮಾನ್ಯ ಉಚ್ಛ ನ್ಯಾಯಾಲಯದ ಛೀಮಾರಿಗಾದರೂ ಕಾಂಗ್ರೆಸ್ ಪಕ್ಷ ತಲೆಬಾಗುವುದೇ..? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷದ ಪ್ರತಿಭಟನೆಗೆ ಅಡ್ಡಿ ಮಾಡಬಾರದು ಎಂಬುದು ಬಿಜೆಪಿ ಸರ್ಕಾರದ ಪ್ರಜಾಸತ್ತಾತ್ಮಕ ಹಾಗೂ ನೈತಿಕ ನಿಲುವೇ ಹೊರತು ದೌರ್ಬಲ್ಯವಲ್ಲ” ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗಿದ್ದರೂ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ಮುಂದುವರಿಸಲು ಹೇಗೆ ಮತ್ತು ಏಕೆ ಅನುಮತಿ ನೀಡಲಾಗುತ್ತಿದೆ ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಕೊರೊನಾ ಪ್ರಕರಣಗಳು ಉಲ್ಬಣವಾಗುತ್ತಿರುವಾಗ ಪಾದಯಾತ್ರೆಯಂತಹ ಚಟುವಟಿಕೆಗೆ ಹೇಗೆ ಅವಕಾಶ ನೀಡಿದ್ದಿರಿ..? ಪಾದಯಾತ್ರೆಗೆ ಅನುಮತಿ ನೀಡಿಲ್ಲ ಎಂದ ಮೇಲೆ ಏಕೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಬೆನ್ನಲ್ಲೆ ಆರೋಗ್ಯ ಸಚಿವರು ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.