ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರಾಗಿರುವ ಡಾ. ಸೂರಜ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮ ಸಮುದ್ರ ಗ್ರಾಮದ ಎಲ್. ಹನುಮೇಗೌಡ ಎಂಬವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಬುಧವಾರ ಪ್ರಕಟಿಸಿದೆ.
ಸೂರಜ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಪತ್ನಿಗೆ ಸಂಬಂಧಿಸಿದ ಯಾವುದೇ ಮಾಹಿತಿ ತಿಳಿಸಿಲ್ಲ. ಅಲ್ಲದೆ, ಪತ್ನಿಯ ವಿವರ, ನಗದು, ಸ್ಥಿರಾಸ್ತಿ, ಬ್ಯಾಂಕ್ ಖಾತೆ, ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಮತ್ತಿತರ ವಿವರಗಳನ್ನು ನಮೂದಿಸುವ ಕಾಲಂನಲ್ಲಿ; ‘ಅನ್ವಯವಾಗುವುದಿಲ್ಲ’ ಎಂದು ಬರೆದಿದ್ದಾರೆ. ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆಯೂ ಸರಿಯಾದ ಮಾಹಿತಿ ನೀಡಿಲ್ಲ. ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಅರ್ಜಿದಾರ ಹನುಮೇಗೌಡ ಆರೋಪಿಸಿದ್ದರು. ಸೂರಜ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ನ್ಯಾಯಾಲಯವನ್ನು ಕೋರಿದ್ದರು.
ಜನವರಿ 2022ರಲ್ಲಿ ಹಾಸನ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆದ ಚುನಾವಣೆಯಲ್ಲಿ ಸೂರಜ್ ರೇವಣ್ಣ ಗೆಲುವು ದಾಖಲಿಸಿದ್ದರು. ಸೂರಜ್ ರೇವಣ್ಣ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ ರೇವಣ್ಣ ಅವರ ಪುತ್ರ.
ಇದನ್ನೂ ಓದಿ : ಭ್ರಷ್ಟಾಚಾರ ಕೇಸ್: ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್