Homeಕರ್ನಾಟಕಮಾಜಿ ಸಚಿವ ಶ್ರೀರಾಮುಲುಗೆ ಬಂಧನ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

ಮಾಜಿ ಸಚಿವ ಶ್ರೀರಾಮುಲುಗೆ ಬಂಧನ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

- Advertisement -
- Advertisement -

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ನಾಲ್ಕು ಬಾರಿ ಸಮನ್ಸ್‌ ನೀಡಿದ್ದರೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗದ ಮಾಜಿ ಸಚಿವ ಬಿ ಶ್ರೀರಾಮುಲು ಅವರನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್‌, ಮುಂದಿನ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ಆದೇಶದ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕೋರಿ ಬಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ನಡೆಸಿತು.

ಅರ್ಜಿದಾರ ಶ್ರೀರಾಮುಲು ಪರ ವಕೀಲ ಗೌತಮ್‌ ಪ್ರಕರಣದ ಮಾಹಿತಿಯನ್ನು ಪೀಠಕ್ಕೆ ವಿವರಿಸಲು ಮುಂದಾದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿದಾರರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದೆ ಹಾಜರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು.

ವಕೀಲ ಗೌತಮ್‌ ಅವರು, ‘ಇಲ್ಲ’ ಎಂದು ಉತ್ತರಿಸಿದರು. ಆಗ ನ್ಯಾಯಮೂರ್ತಿಗಳು, ವಿಚಾರಣಾಧೀನ ನ್ಯಾಯಾಲಯ ನೋಟಿಸ್ ಅಥವಾ ಸಮನ್ಸ್ ಜಾರಿಗೊಳಿಸಲು ಆದೇಶಿಸಿಲ್ಲವೇ ಎಂದು ಮರು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಗೌತಮ್‌, ಹೌದು ಜಾರಿಗೊಳಿಸಿದೆ. ಆದರೆ, ನಮಗೆ ತಲುಪಿಲ್ಲ ಎಂದರು.

ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರನ್ನು ಉದ್ದೇಶಿಸಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿದಾರರ ವಿರುದ್ಧ ಎಷ್ಟು ಬಾರಿ ಸಮನ್ಸ್ ಹೊರಡಿಸಿದೆ ಎಂದು ನ್ಯಾಯಮೂರ್ತಿಗಳು ಕೇಳಿದರು. ದಾಖಲೆಗಳನ್ನು ಪರಿಶೀಲಿಸಿದ ಜಗದೀಶ್ ಅವರು, ನಾಲ್ಕು ಬಾರಿ ಸಮನ್ಸ್‌ ನೀಡಲಾಗಿದೆ ಎಂದು ಉತ್ತರಿಸಿದರು.

ಇದನ್ನು ಕೇಳಿ ಕೋಪಗೊಂಡ ನ್ಯಾಯಮೂರ್ತಿಗಳು, “ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಂದರೆ‌ ನಿಮಗೆ ಅಷ್ಟೊಂದು ತಮಾಷೆಯಾ? ಮ್ಯಾಜಿಸ್ಟ್ರೇಟ್ ಮುಂದೆ ನಿಂತುಕೊಳ್ಳಲು ನಿಮ್ಮ ಅರ್ಜಿದಾರರಿಗೆ ಯಾವ ಅಂತಸ್ತು ಅಡ್ಡಿಯಾಗಿದೆ? ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಂದರೆ ಏನೆಂದುಕೊಂಡಿದ್ದೀರಿ? ವಿಚಾರಣಾಧೀನ ನ್ಯಾಯಾಲಯ ನಾಲ್ಕು ಬಾರಿ ಸಮನ್ಸ್ ಹೊರಡಿಸಿದ್ದರೂ ಏಕೆ ಹಾಜರಾಗಿಲ್ಲ?” ಎಂದು ಶ್ರೀರಾಮುಲು ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದಿನ ವಿಚಾರಣೆಗೆ ಅರ್ಜಿದಾರ ಶ್ರೀರಾಮುಲು ಖುದ್ದು ಹಾಜರಾಗಬೇಕು. ತಪ್ಪಿದರೆ, ಅವರ ವಿರುದ್ಧ ಬಂಧನ ಆದೇಶ ಹೊರಡಿಸಲಾಗುವುದು ಎಂದು ನ್ಯಾಯಮೂರ್ತಿ ಎಚ್ಚರಿಕೆ ನೀಡಿದರು.

ಪ್ರಕರಣದ ಹಿನ್ನೆಲೆ : ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ 2023ರ ಏಪ್ರಿಲ್‌ 28ರಂದು ಚಿತ್ರದುರ್ಗದ ಚಳ್ಳಕೆರೆ ವಿಧಾನಭಾ ಕ್ಷೇತ್ರದ ತುರವನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಆರ್‌ ಅನಿಲ್‌ ಕುಮಾರ್‌ ಪರ ಶ್ರೀರಾಮುಲು ಚುನಾವಣಾ ಪ್ರಚಾರ ಸಮಾವೇಶ ನಡೆಸಿದ್ದರು. ಈ ಸಂಬಂಧ ಶ್ರೀರಾಮುಲು ವಿರುದ್ಧ ಫ್ಲೈಯಿಂಗ್‌ ಸ್ಕ್ವಾಡ್‌ ತಂಡದ ಅಧಿಕಾರಿಯಾಗಿದ್ದ ಎಂ ತಿಪ್ಪೇಸ್ವಾಮಿ, ಚಿತ್ರದುರ್ಗದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ 2023ರ ಏಪ್ರಿಲ್‌ 29ರಂದು ಖಾಸಗಿ ದೂರು ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ 2023ರ ಮೇ 5ರಂದು ಶ್ರೀರಾಮುಲುಗೆ ಸಮನ್ಸ್‌ ಜಾರಿಗೊಳಿಸಿತ್ತು. ಇದರ ವಿರುದ್ಧ ಶ್ರೀರಾಮುಲು ಹೈಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...