ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ಸರಕಾರಿ ವಸತಿ ನಿಲಯಗಳಲ್ಲಿನ ವಾರ್ಡನ್ ಮತ್ತು ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.
ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಎಸ್ಸಿ, ಎಸ್ಟಿ ಹಾಸ್ಟೆಲ್ಗಳಲ್ಲಿ ಸಿಬ್ಬಂದಿ ಕೊರತೆಯ ಕುರಿತಂತೆ ಮಾದ್ಯಮಗಳ ವರದಿ ಆಧರಿಸಿ ಸ್ವಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿದೆ.
ಅರ್ಜಿ ವಿಚಾರಣೆ ವೇಳೆ ಹಾಸ್ಟೆಲ್ಗಳಲ್ಲಿ ಸಿಬ್ಬಂದಿ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗಲಿದೆ. ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ವಿಚಾರದಲ್ಲಿ ಸಿಬ್ಬಂದಿಗಳ ಕೊರತೆ ಒಂದು ಗಂಭಿರ ಸಮಸ್ಯೆ ಎನ್ನುವುದನ್ನು ಕೋರ್ಟ್ ಗಮನಿಸಿದೆ.
ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ ನಿತಿನ್ ರಮೇಶ್ ಹಾಜರಾಗಿ, ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಬಗ್ಗೆ ಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ನಿತಿನ್ ರಮೇಶ್ ಮುಖ್ಯವಾದ ಅಂಶವನ್ನು ಗಮನಕ್ಕೆ ತಂದಿದ್ದಾರೆ, ಈ ಅಂಶಗಳ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆಯನ್ನು ನಾವು ನಿರೀಕ್ಷಿಸುತ್ತೇವೆ. ಈ ಬಗ್ಗೆ ಸಮಗ್ರವಾದ ವಿವರಣೆಯುಳ್ಳ ವರದಿ ಸಲ್ಲಿಸಬೇಕು ಎಂದು ಸರಕಾರದ ಪರ ವಕೀಲರಿಗೆ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತ ವರದಿಯನ್ನು ಅಮಿಕಸ್ ಕ್ಯೂರಿ ಅವರಿಗೆ ಒಂದು ಪ್ರತಿಯನ್ನು ಅರ್ಜಿ ವಿಚಾರಣೆಗೂ ಬರುವ ಮುನ್ನ ಸಲ್ಲಿಸಬೇಕು. ಅದರಂತೆ ನಾವು ಪ್ರತಿಕ್ರಿಯೆಗೆ ಎರಡು ವಾರಗಳ ಕಾಲಾವಕಾಶ ನೀಡುತ್ತೇವೆ ಎಂದು ಕೋರ್ಟ್ ಹೇಳಿದೆ.
ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ!