ಎಂಟು ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಸಾಕ್ಷ್ಯಗಳ ವಿಚಾರಣೆ ನಡೆಸುವಲ್ಲಿ ‘ಅಮಾನವೀಯ’ ಮತ್ತು ‘ಸಂವೇದನಾರಹಿತ’ ವಾಗಿ ವರ್ತಿಸಿದ್ದಕ್ಕಾಗಿ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರೊಬ್ಬರನ್ನು ತರಾಟೆಗೆ ತೆಗೆದುಕೊಂಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರು, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ವೆಂಕಟೇಶ್ನನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ಆರೋಪಿಯನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ನ್ಯಾಯಾಧೀಶರು, ಪ್ರಾಸಿಕ್ಯೂಷನ್ ಸಾಕ್ಷ್ಯಗಳ ವಿಚಾರಣೆ ವೇಳೆ ‘ಅತೀವ ಸಂವೇದನಾರಾಹಿತ್ಯತೆ’ ಮತ್ತು ‘ವೃತ್ತಿಪರತೆಯ ಕೊರತೆ’ ತೋರಿದ್ದಾರೆ ಎಂದು ಹೈಕೋರ್ಟ್ ಹೇಳಿದೆ.
“ಈ ರೀತಿಯ ತೀರ್ಪು ನೀಡಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಿಗೆ ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ತರಬೇತಿ ನೀಡುವ ಅಗತ್ಯವಿದೆ. ಆದ್ದರಿಂದ, ತೀರ್ಪು ನೀಡಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ತರಬೇತಿ ಪಡೆಯುವಂತೆ ನ್ಯಾಯಾಲಯ ಈ ಮೂಲಕ ಶಿಫಾರಸು ಮಾಡುತ್ತಿದೆ” ಎಂದು ಹೈಕೋರ್ಟ್ ಪೀಠ ಆದೇಶಿಸಿದೆ.
2018ರ ಫೆಬ್ರವರಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಮತ್ತು ಐಪಿಸಿ ಸೆಕ್ಷನ್ಗಳಡಿ ವಿಚಾರಣೆ ಎದುರಿಸಿದ್ದ. ಯಾವುದೇ ಸ್ವತಂತ್ರ ಸಾಕ್ಷಿಗಳನ್ನು ಹಾಜರುಪಡಿಸಿಲ್ಲ ಮತ್ತು ಸಂತ್ರಸ್ತೆಗೆ ಯಾವುದೇ ಗಾಯವಾಗಿಲ್ಲ ಎಂದು ವೈದ್ಯರ ಪುರಾವೆಗಳು ಬಹಿರಂಗಪಡಿಸಿವೆ ಎಂಬ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯ ಡಿಸೆಂಬರ್ 2020ರಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಸರ್ಕಾರ ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು.
ಪೋಕ್ಸೊ ನ್ಯಾಯಾಲಯ ಸಾಕ್ಷ್ಯಗಳನ್ನು “ತಾಂತ್ರಿಕವಾಗಿ ಪರಾಮರ್ಶಿಸಿದೆಯೇ ವಿನಾ, ಸೂಕ್ತ ರೀತಿಯಲ್ಲಿ ಅಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ವಿಚಾರಣಾ ನ್ಯಾಯಾಲಯದ ಕ್ರಮ “ಸಂಪೂರ್ಣವಾಗಿ ತಪ್ಪು, ವಿಕೃತ ಮತ್ತು ಅಮಾನವೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಪ್ರಾಪ್ತ ಬಾಲಕಿ ಮತ್ತು ಆಕೆಯ ಪೋಷಕರ ಪುರಾವೆಗಳು ಪ್ರಸ್ತುತವಾಗಿದ್ದು ನಂಬಲರ್ಹವೆಂದು ಅರ್ಹತೆಯ ಆಧಾರದ ಮೇಲೆ ಹೈಕೋರ್ಟ್ ಕಂಡುಕೊಂಡಿದೆ. ಉಳಿದ ಸಂಬಂಧಿಕರ ಸಾಕ್ಷ್ಯಗಳನ್ನು ವಿಶ್ಲೇಷಿಸಿದ ನಂತರ, ಆರೋಪಿ ಕೃತ್ಯ ಎಸಗಿರುವುದು ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಅಪರಾಧಿಗೆ ಐದು ವರ್ಷಗಳ ಜೈಲು ಶಿಕ್ಷೆಯ ಜೊತೆಗೆ, ಕರ್ನಾಟಕ ಸಂತ್ರಸ್ತರ ಪರಿಹಾರ ಯೋಜನೆಯಡಿ ಅಪ್ರಾಪ್ತ ಬಾಲಕಿಗೆ 5 ಲಕ್ಷ ರೂಗಳ ಪರಿಹಾರ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ : ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ