ರಾಜ್ಯದ ಹಲವೆಡೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು ಬೆಳೆದ ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಈ ಕೂಡಲೆ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಇದರಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ, ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಆದರೆ ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಹಾನಿಯಾಗಿರುವ ಜಿಲ್ಲೆಗಳ ಮಾಹಿತಿಯೆ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿ ಇಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ
ನವೆಂಬರ್ ತಿಂಗಳ ಮಧ್ಯಭಾಗದಲ್ಲೂ ರಾಜ್ಯದ ಹಲವೆಡೆ ನಿರಂತರ ಮಳೆ ಬೀಳುತ್ತಿರುವ ಕಾರಣ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು ಬೆಳೆದ ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು @CMofKarnataka ಅವರನ್ನು ಆಗ್ರಹಿಸುತ್ತೇನೆ. pic.twitter.com/uLjTVcuhqX
— Siddaramaiah (@siddaramaiah) November 11, 2021
’ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂ. ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ.
ಇನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಆದರೂ ಸಹ ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019-20, 2020-21 ರ ವರ್ಷಗಳಲ್ಲಿ ಸುಮಾರು 1.5 ರಿಂದ 2 ಲಕ್ಷ ಕೋಟಿ ರೂಗಳವರೆಗೆ ನಷ್ಟವಾಗಿತ್ತು. ಆದರೆ ಕೇಂದ್ರ ಸರ್ಕಾರ 2019-20 ರಲ್ಲಿ 1652.85, 2020-21 ರಲ್ಲಿ 1328.30 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಅಂದರೆ ಒಟ್ಟು ಬಿಡುಗಡೆ ಮಾಡಿದ ಹಣ ಕೇವಲ 2981.15 ಕೋಟಿ ರೂಗಳು ಮಾತ್ರ. 2021-22ರ ನಷ್ಟಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ. ಕೇಂದ್ರ ಮತ್ತು ರಾಜ್ಯಗಳೆರಡೂ ಈ ಮಟ್ಟದ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆಯಾಗುತ್ತದೆ ಕಿಡಿ ಕಾಡಿದ್ದಾರೆ.
’ಕೊರೊನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ