ಕೊರೊನಾ ಮತ್ತು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ ಸಂಬಂಧ ವಿವರಣೆ ಕೋರಿ ಎನ್ಜಿಟಿ ನೋಟಿಸ್ ನೀಡಿದ ಬೆನ್ನಲ್ಲೆ ರಾಜ್ಯ ಸರ್ಕಾರ ದೀಪಾವಳಿ ಪಟಾಕಿ ಸಂಪೂರ್ಣ ನಿಷೇಧಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ದೀಪಾವಳಿ ಹತ್ತಿರವಾಗುತ್ತಿರುವ ವಾಯುಮಾಲಿನ್ಯ ಹೆಚ್ಚಾಗುವ ಹಿನ್ನೆಲೆ ಪಟಾಕಿ ನಿಷೇದಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ), ವಾಯುಮಾಲಿನ್ಯ ಹೆಚ್ಚಾಗಿರುವ, ಕರ್ನಾಟಕವೂ ಸೇರಿದಂತೆ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿತ್ತು.
ದೀಪಾವಳಿ ಹೊಸ್ತಿಲಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುವ ನಿರೀಕ್ಷೆ ಇಟ್ಟುಕೊಂಡಿದ್ದ ಜನರಿಗೆ ಸರ್ಕಾರ ಆಘಾತ ನೀಡಿದೆ. ಆದರೆ ಕಳೆದ ಕೆಲ ದಿನಗಳಿಂದಲೂ ಈ ಕುರಿತು ಚರ್ಚೆ ನಡೆಸಲಾಗುತ್ತಿತ್ತು. ಆರೋಗ್ಯ ಸಚಿವ ಡಾ.ಸುಧಾಕರ್ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವ ಕುರಿತು ತಜ್ಞರ ಸಮಿತಿ ನೇಮಿಸಿರುವುದಾಗಿ ತಿಳಿಸಿದ್ದರು.
ಸದ್ಯ ಸರ್ಕಾರ ರಾಜ್ಯದಲ್ಲಿ ಪಟಾಕಿ ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಕೈಗೊಂಡಿದೆ.ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ. ಶೀಘ್ರದಲ್ಲೇ ಅಧಿಕೃತ ಆದೇಶ ನೀಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ವಾಯುಮಾಲಿನ್ಯ: ಪಟಾಕಿ ನಿಷೇಧ ಸಂಬಂಧ 18 ರಾಜ್ಯಗಳಿಗೆ ಎನ್ಜಿಟಿ ನೋಟಿಸ್!
ಕೊರೊನಾ ಸಾಂಕ್ರಾಮಿಕದ ಜೊತೆಗೆ ದೀಪಾವಳಿ ಹಬ್ಬವೂ ಇರುವ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು.
ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಹಿತದೃಷ್ಟಿಯಿಂದ ನವೆಂಬರ್ 7 ರಿಂದ 30 ರವರೆಗೆ ಪಟಾಕಿ ಬಳಕೆಯನ್ನು ನಿಷೇಧಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನವೆಂಬರ್ 2 ರಂದು ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (ಎಂಒಇಎಫ್) ನೋಟಿಸ್ ನೀಡಿತ್ತು.
ದೆಹಲಿಯಲ್ಲಿ ಹದಗೆಡುತ್ತಿರುವ ವಾಯುಮಾಲಿನ್ಯ ಮತ್ತು ಕೊರೊನಾ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ದೆಹಲಿ ಸರ್ಕಾರವು ಹಸಿರು ಪಟಾಕಿ ಸೇರಿದಂತೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಸಿಡಿತವನ್ನು ಸಂಪೂರ್ಣ ನಿಷೇಧಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.