ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವಿವಿಧ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿಗಾಗಿ ಕಳೆದ ತಿಂಗಳು 28ರಂದು ನಡೆಸಿದ್ದ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಬುಧವಾರ ಸಿಐಡಿ ಅಧಿಕಾರಿಗಳು ಇಬ್ಬರು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಕಾಂತ ಬುರಕಲ್, ಅಫಜಲಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಸವರಾಜ ಪೂಜಾರಿ ಅವರನ್ನು ಪರೀಕ್ಷಾ ಅಕ್ರಮಕ್ಕೆ ನೆರವಾದ ಆರೋಪದ ಮೇಲೆ ಸಿಐಡಿ ಪೋಲಿಸರು ಬಂಧನ ಮಾಡಿದ್ದಾರೆ.
ಇಬ್ಬರು ಪ್ರಾಂಶುಪಾಲರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲ ದಿನಗಳ ಹಿಂದೆ ಇವರನ್ನು ಸಿಐಡಿ ಕಚೇರಿಗೆ ಕರೆಸಿದ್ದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಬುಧವಾರ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಕೆಇಎ ಪರೀಕ್ಷೆಯ ವೇಳೆ ಚಂದ್ರಕಾಂತ ಅಫಜಲಪುರದ ರಾಯಲ್ ಪಬ್ಲಿಕ್ ಶಾಲೆಯಲ್ಲಿ ತೆರೆದಿದ್ದ ಪರೀಕ್ಷಾ ಕೇಂದ್ರದ ಮುಖ್ಯಸ್ಥರಾಗಿದ್ದರು. ಬಸವರಾಜ ಸಿಐಡಿ ಕಸ್ಟೋಡಿಯನ್ ಆಗಿದ್ದರು. ಪರೀಕ್ಷಾ ಅಕ್ರಮಕ್ಕೆ ನೆರವಾಗುವ ಸಲುವಾಗಿ ಇವರಿಬ್ಬರು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಕೆಇಎ ಪರೀಕ್ಷೆ ಅಕ್ರಮ :
ಕಳೆದ ಅಕ್ಟೋಬರ್ 28 ರಂದು ರಾಜ್ಯಾದ್ಯಂತ ವಿವಿಧ ಇಲಾಖೆಗಳ ನೇಮಕಾತಿಗೆ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದರು. ಈ ಪ್ರಕರಣ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ತನಿಖೆ ಕೈಗೊಂಡ ಪೊಲೀಸರು ಆರಂಭದಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದರು.
ಅವರ ವಿಚಾರಣೆ ವೇಳೆ ಪ್ರಕರಣದ ಕಿಂಗ್ಪಿನ್ ಆರ್.ಡಿ ಪಾಟೀಲ್ ಎಂಬುವುದು ಬಯಲಾಗಿತ್ತು. ತಲೆಮರೆಸಿಕೊಂಡಿದ್ದ ಆರ್.ಡಿ ಪಾಟೀಲ್ನನ್ನು ಕಲಬುರಗಿ ಪೊಲೀಸರ ವಿಶೇಷ ತಂಡ ನ.10ರಂದು ಮಹಾರಾಷ್ಟ್ರದ ಅಕ್ಕಲಕೋಟ ಬಳಿ ಬಂಧಿಸಿ ಕಲಬುರಗಿಯ ಅಶೋಕ ನಗರ ಠಾಣೆಗೆ ಕರೆ ತಂದಿದ್ದರು. ಇದೀಗ ಪ್ರಕರಣ ಸಂಬಂಧ ಇಬ್ಬರು ಪ್ರಾಂಶುಪಾಲರ ಬಂಧನವಾಗಿದೆ.
ಇದನ್ನೂ ಓದಿ : ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಾಪಸ್ ಪಡೆದ ಡಿಕೆಶಿ