ಉತ್ತರಪ್ರದೇಶದ ಮುಜಾಫರ್ನಗರ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಲು ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ ವಿಡಿಯೋ ವೈರಲ್ ಬಗ್ಗೆ ಕೇರಳದ ಶಿಕ್ಷಣ ಸಚಿವ ವಿ ಶಿವನ್ಕುಟ್ಟಿ ಪ್ರತಿಕ್ರಿಯಿಸಿದ್ದು, ಇದು ಅಪಾಯಕಾರಿ ಬೆಳವಣಿಗೆ ಮತ್ತು ಸಣ್ಣ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನವನ್ನು ನೋಡುತ್ತಿರುತ್ತಾರೆ. ಇಂತಹ ವಿಭಜನೀಯ ಮತ್ತು ಹಾನಿಕಾರಕ ಕ್ರಿಯೆಗೆ ಪ್ರೇರೇಪಿಸುವ ಶಿಕ್ಷಕರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಸಚಿವರು ಆಗ್ರಹಿಸಿದ್ದಾರೆ.
ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿರುವ ಶಿವನ್ಕುಟ್ಟಿ, ಇದು ವಿದ್ಯಾರ್ಥಿ ಸಮುದಾಯದ ಸಾಮರಸ್ಯಕ್ಕೆ ಧಕ್ಕೆ ತರುವುದಲ್ಲದೆ, ಅಸಂಖ್ಯಾತ ಶಿಕ್ಷಕರ ಶ್ರಮವನ್ನು ವ್ಯರ್ಥ ಮಾಡುತ್ತದೆ ಎಂದು ಹೇಳಿದ್ದಾರೆ.
ಶಿವನ್ಕುಟ್ಟಿ ಅವರು ತಮ್ಮ ಪತ್ರದಲ್ಲಿ, ಶಿಕ್ಷಣ ಸಂಸ್ಥೆಯೊಳಗೆ ವಿಧ್ಯಾರ್ಥಿಗಳನ್ನು ವಿಭಜಿಸುಲು ಪ್ರೇರೇಪಿಸುವ ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದ್ದಾರೆ.
ಇಂತಹ ಘಟನೆಯು ನಮ್ಮ ರಾಷ್ಟ್ರವು ನಿಂತಿರುವ ಜಾತ್ಯತೀತತೆ ಮತ್ತು ಸಹಿಷ್ಣುತೆಯ ತತ್ವಗಳಿಗೆ ವಿರುದ್ಧವಾಗಿರುವುದಲ್ಲದೆ, ಮಾರ್ಗದರ್ಶನ ಮತ್ತು ಸ್ಫೂರ್ತಿಗಾಗಿ ತಮ್ಮ ಶಿಕ್ಷಕರನ್ನು ನೋಡುವ ಯುವ ಮನಸ್ಸುಗಳಿಗೆ ಅಪಾಯಕಾರಿ ಪೂರ್ವ ನಿರ್ದೇಶನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
ಈ ಘಟನೆಯಿಂದ ಸಂತ್ರಸ್ತರಾದ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ವಿಚಾರಿಸಲು ಉತ್ತರಪ್ರದೇಶ ಮುಖ್ಯಮಂತ್ರಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ನಮ್ಮ ಸಮಾಜದಲ್ಲಿ ವಿಶೇಷವಾಗಿ ನಮ್ಮ ಶಿಕ್ಷಣ ಸಂಸ್ಥೆಗಳಂತಹ ಪವಿತ್ರ ಸ್ಥಳಗಳಲ್ಲಿ ಇಂತಹ ನಡವಳಿಕೆಯನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಅಧಿಕಾರಿಗಳು ರವಾನಿಸುವುದು ಕಡ್ಡಾಯವಾಗಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.