Homeಮುಖಪುಟಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

- Advertisement -
- Advertisement -

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಚುನಾವಣಾ ಆಯೋಗ ಇದನ್ನು ‘ಲಿಪಿಕ ದೋಷ’ (ಬರವಣಿಗೆಯ ದೋಷ/ ಸಿಬ್ಬಂದಿ ದೋಷ/ ತಾಂತ್ರಿಕ ತಪ್ಪು-clerical error)’ ಎಂದು ಹೇಳಿ ಸಮಜಾಯಿಸಿ ನೀಡಿದೆ. ಈ ಸಂಬಂಧ ಒಬ್ಬರು ಸಹಾಯಕ ವಿಭಾಗೀಯ ಅಧಿಕಾರಿಯನ್ನು ಆಯೋಗ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಆದರೂ, ಈ ವಿಚಾರದ ಚರ್ಚೆ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಮುಂದುವರಿದಿದೆ.

ಈ ನಡುವೆ ಚುನಾವಣಾ ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೇರಳ ಪೊಲೀಸರು ಸೂಚಿಸಿದ್ದಾರೆ ಎಂದು thewire.in ವರದಿ ಮಾಡಿದೆ.

ಚುನಾವಣಾ ಆಯೋಗದ ಪತ್ರದ ಕುರಿತ ಪೋಸ್ಟ್‌ಗಳು ‘ಗೌರವಾನ್ವಿತ ರಾಷ್ಟ್ರೀಯ ಸಂಸ್ಥೆ’ಯಾದ ಭಾರತೀಯ ಚುನಾವಣಾ ಆಯೋಗವನ್ನು (ಇಸಿಐ) ‘ಬಹಿರಂಗವಾಗಿ ಅವಮಾನಿಸುತ್ತವೆ’ ಎಂದು ಪೊಲೀಸರು ಹೇಳಿದ್ದಾರೆ. ಕುತೂಹಲಕಾರಿಯಾಗಿ ಇವು ‘ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು’ ಹರಡುತ್ತಿವೆ ಎಂಬುವುದಾಗಿ ತಿಳಿಸಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪತ್ರವನ್ನು ಪೋಸ್ಟ್ ಮಾಡಿದ ಬಳಕೆದಾರರಿಗೆ, ಅದನ್ನು ತೆಗೆದು ಹಾಕುವಂತೆ ಕೇರಳ ಪೊಲೀಸರು ಸೂಚಿಸಿರುವುದಾಗಿ ಎಕ್ಸ್‌ ತಿಳಿಸಿದೆ.

“ನಮ್ಮ ಬಳಕೆದಾರರ ಧ್ವನಿಯನ್ನು ಗೌರವಿಸುವುದು ಮತ್ತು ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ. ಆದ್ದರಿಂದ, ಯಾವುದೇ ಕಾನೂನು ಜಾರಿ ಸಂಸ್ಥೆ ಅಥವಾ ಸರ್ಕಾರಿ ಸಂಸ್ಥೆಯಿಂದ ನಿಮ್ಮ ಖಾತೆಯ ಮಾಹಿತಿಯನ್ನು ತೆಗೆದುಹಾಕಲು ನಮಗೆ ವಿನಂತಿ ಬಂದಾಗ, ಆ ಬಗ್ಗೆ ಬಳಕೆದಾರರಿಗೆ ತಿಳಿಸುವುದು ನಮ್ಮ ನೀತಿಯಾಗಿದೆ” ಎಂದು ಪತ್ರಕರ್ತ ಪಿಯೂಷ್ ರೈ ಅವರಂತಹ ಬಳಕೆದಾರರಿಗೆ ಎಕ್ಸ್‌ ಸಂಸ್ಥೆಯಿಂದ ಬಂದ ಇಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ವರದಿ ಹೇಳಿದೆ.

ಚುನಾವಣಾ ಆಯೋಗದ ಪತ್ರವನ್ನು ಪೋಸ್ಟ್ ಮಾಡಿದ್ದಕ್ಕೆ ಎಕ್ಸ್‌ನಿಂದ ಇಮೇಲ್ ಸ್ವೀಕರಿಸಿರುವ ಕಾಂಗ್ರೆಸ್ ನಾಯಕಿ ರುಚಿರಾ ಚತುರ್ವೇದಿ ಅವರು, “ಸಾಮಾಜಿಕ ಮಾಧ್ಯಮಗಳನ್ನು ಸೆನ್ಸಾರ್ ಮಾಡಲು ಈ ರೀತಿಯ ಟೇಕ್‌ಡೌನ್ ನೋಟಿಸ್‌ಗಳು (ತೆಗೆದು ಹಾಕುವಿಕೆ ನೋಟಿಸ್) ನೀಡುವುದು ಈಗ ವಾಡಿಕೆಯ ಅಸ್ತ್ರವಾಗಿಬಿಟ್ಟಿವೆ. ಕೇರಳ ಪೊಲೀಸರ ಪ್ರಕಾರ, ನನ್ನ ಪೋಸ್ಟ್ ಚುನಾವಣಾ ಆಯೋಗವನ್ನು ಅವಮಾನಿಸುತ್ತದೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು ಹರಡುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

“ಚುನಾವಣಾ ಆಯೋಗದ ಈ ‘ಲಿಪಿಕ ದೋಷ’ (clerical error) ಕುರಿತಾದ ಪೋಸ್ಟ್‌ಗಳು ಕೋಮು ಸೌಹಾರ್ದತೆಗೆ ಹೇಗೆ ಧಕ್ಕೆ ತರುತ್ತವೆ ಎಂಬುದು ಪೊಲೀಸರಿಗೇ ಗೊತ್ತಿರಬೇಕು. ಒಂದು ವೇಳೆ ಚುನಾವಣಾ ಆಯೋಗದೊಂದಿಗೆ ಬಿಜೆಪಿಯ ಹೆಸರನ್ನು ಜೋಡಿಸುವುದರಿಂದಲೇ ಅಶಾಂತಿ ಉಂಟಾಗುತ್ತದೆ ಎಂದು ಅವರು ಭಾವಿಸದ ಹೊರತು, ಈ ಆರೋಪದ ಹಿಂದಿನ ಉದ್ದೇಶ ಅಸ್ಪಷ್ಟವಾಗಿದೆ” ಎಂದಿದ್ದಾರೆ.

ಎಕ್ಸ್ ಸಂಸ್ಥೆಯು ಇನ್ನೂ ಆ ಪೋಸ್ಟ್‌ಗಳನ್ನು ತೆಗೆದುಹಾಕಿಲ್ಲದಿದ್ದರೂ, ಕೇರಳ ಪೊಲೀಸರು ನೀಡಿದ ನೋಟಿಸ್‌ನಲ್ಲಿ ಬಳಸಲಾದ ತೀವ್ರ ಪದಬಳಕೆಯು ಅನೇಕರ ಗಮನ ಸೆಳೆದಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಸೈಬರ್ ಕಾರ್ಯಾಚರಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಬಿಜೋಯ್ ಎಸ್. ಸಹಿ ಮಾಡಿರುವ ನೋಟಿಸ್ ಅನ್ನು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಭಾರತಿ ಅವರು ಹಂಚಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ಇಂದು ಬೆಳಗ್ಗೆ ಅವರ ಪ್ರೇಮ ಪತ್ರವನ್ನು (ನೋಟಿಸ್) ನೋಡಿಯೇ ನನ್ನ ಕಣ್ಣು ತೆರೆಯಿತು” ಎಂದು ವ್ಯಂಗ್ಯವಾಡಿದ್ದಾರೆ.

ಪೊಲೀಸ್ ನೋಟಿಸ್ ಅನ್ನು ವಿವಾದಾತ್ಮಕ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ರ ಸೆಕ್ಷನ್ 79(3)(b) ಮತ್ತು ಐಟಿ ನಿಯಮಗಳು, 2021 ರ ಸೆಕ್ಷನ್ 3(1)(d) ಅಡಿಯಲ್ಲಿ ನೀಡಲಾಗಿದೆ. ಮೊದಲನೆಯ ನಿಯಮದ ಪ್ರಕಾರ, ಸರ್ಕಾರಿ ಸಂಸ್ಥೆಯಿಂದ ಸೂಚನೆ ಬಂದ ನಂತರವೂ ‘ಎಕ್ಸ್‌ನಂತಹ ಮಧ್ಯವರ್ತಿ ಸಂಸ್ಥೆಗಳು ಆ ವಿಷಯವನ್ನು ತೆಗೆದುಹಾಕಲು ವಿಫಲವಾದರೆ, ಅವುಗಳಿಗೆ ಇರುವ ಕಾನೂನು ರಕ್ಷಣೆ ರದ್ದಾಗುತ್ತದೆ. ಎರಡನೆಯ ನಿಯಮದಂತೆ, ನ್ಯಾಯಾಲಯದ ಆದೇಶ ಅಥವಾ ಅಧಿಕೃತ ಸರ್ಕಾರಿ ಸಂಸ್ಥೆಯಿಂದ ಸೂಚನೆ ಬಂದ 36 ಗಂಟೆಗಳ ಒಳಗೆ ಅಂತಹ ವಿಷಯಗಳನ್ನು ತೆಗೆದುಹಾಕುವುದು ಕಡ್ಡಾಯವಾಗಿದೆ.

ಎಕ್ಸ್‌ ಜಾಲತಾಣದ 10 ಪೋಸ್ಟ್‌ಗಳನ್ನು ಉಲ್ಲೇಖಿಸಿರುವ ಕೇರಳ ಪೊಲೀಸರು, “ಈ ಎಕ್ಸ್‌ ಪೋಸ್ಟ್ ಭಾರತೀಯ ಚುನಾವಣಾ ಆಯೋಗವನ್ನು ಬಹಿರಂಗವಾಗಿ ಅವಮಾನಿಸುತ್ತದೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವಿಷಯಗಳನ್ನು ಹರಡುತ್ತದೆ. ಈ ಪೋಸ್ಟ್ ಕೇವಲ ಗೌರವಾನ್ವಿತ ರಾಷ್ಟ್ರೀಯ ಸಂಸ್ಥೆಗೆ ಮಾಡಿದ ನೇರ ಅವಮಾನ ಮಾತ್ರವಲ್ಲದೆ, ಸಮಾಜದಲ್ಲಿ ಒಡಕು ಮತ್ತು ಹಗೆತನವನ್ನು ಪ್ರಚೋದಿಸುವ ಮೂಲಕ ಸಾರ್ವಜನಿಕ ಸುವ್ಯವಸ್ಥೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ” ಎಂದು ಹೇಳಿರುವುದಾಗಿ thewire.in ಉಲ್ಲೇಖಿಸಿದೆ.

ಕೇರಳದ ಮುಖ್ಯ ಚುನಾವಣಾಧಿಕಾರಿಯೇ (ಸಿಇಒ) ಇದು ‘ಲಿಪಿಕ ದೋಷ’ (clerical error) ಎಂದು ಈಗಾಗಲೇ ಒಪ್ಪಿಕೊಂಡಿರುವಾಗ, ಈ ಕ್ರಮವನ್ನು ಏಕೆ ಕೈಗೊಳ್ಳಲಾಗುತ್ತಿದೆ ಎಂದು ಪತ್ರಕರ್ತ ಅರವಿಂದ್ ಗುಣಶೇಖರ್ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಪತ್ರದ ನಿರಂತರ ಹಂಚಿಕೆಯು ಭಾರತೀಯ ಚುನಾವಣಾ ಆಯೋಗದ (ಇಸಿಐ) ಸಮಗ್ರತೆಯನ್ನು ಕುಗ್ಗಿಸುತ್ತದೆ ಎಂದು ಕೇರಳ ಪೊಲೀಸರು ಹೇಳಿದ್ದಾರಂತೆ.

“ಇದಲ್ಲದೆ, ಸಿಬ್ಬಂದಿಯ ತಪ್ಪಿನಿಂದಾಗಿ ರಾಜಕೀಯ ಪಕ್ಷವೊಂದರ ಲಾಂಛನವನ್ನು ಅಚಾತುರ್ಯದಿಂದ ಒಳಗೊಂಡಿದ್ದ, ಈಗಾಗಲೇ ತಿದ್ದುಪಡಿ ಮಾಡಲಾದ 2019ರ ಹಳೆಯ ದಾಖಲೆಯನ್ನು ಹೊಂದಿರುವ ಎಲ್ಲಾ ಡಿಜಿಟಲ್ ವಿಷಯಗಳನ್ನು ತಕ್ಷಣವೇ ತೆಗೆದುಹಾಕುವ ತುರ್ತು ಅಗತ್ಯವಿದೆ. ಹಿಂಪಡೆಯಲಾದ ಈ ವಿಷಯದ ನಿರಂತರ ಪ್ರಸರಣವನ್ನು ಸುಳ್ಳು ಆರೋಪಗಳನ್ನು ಹರಡಲು ಬಳಸಲಾಗುತ್ತಿದೆ, ಆ ಮೂಲಕ ಚುನಾವಣಾ ಆಯೋಗದ ಸಮಗ್ರತೆ ಮತ್ತು ಪಾರದರ್ಶಕತೆಗೆ ಧಕ್ಕೆ ತರಲಾಗುತ್ತಿದೆ. ಇಂತಹ ತಪ್ಪು ಮಾಹಿತಿ ನೀಡುವಿಕೆಯು ಸಾರ್ವಜನಿಕ ಸುವ್ಯವಸ್ಥೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಏಕೆಂದರೆ ಇದು ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ವಿಭಜನೆ ಮತ್ತು ಹಗೆತನವನ್ನು ಪ್ರಚೋದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ರಾಜ್ಯಾದ್ಯಂತ ಗಂಭೀರ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳಿಗೆ ಕಾರಣವಾಗಬಹುದು. ಚುನಾವಣಾ ಪ್ರಕ್ರಿಯೆಗೆ ಹೆಚ್ಚಿನ ಹಾನಿಯಾಗದಂತೆ ತಡೆಯಲು ಮತ್ತು ಕೋಮು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಮಾಧ್ಯಮ ಸಂಸ್ಥೆಗಳು ಮತ್ತು ಡಿಜಿಟಲ್ ವೇದಿಕೆಗಳು ಈ ದೋಷಪೂರಿತ ದಾಖಲೆಯ ವಿತರಣೆಯನ್ನು ನಿಲ್ಲಿಸಲು ಮತ್ತು ಅದನ್ನು ತಮ್ಮ ದಾಖಲೆಗಳು ಹಾಗೂ ಸಾಮಾಜಿಕ ಮಾಧ್ಯಮ ಖಾತೆಗಳಿಂದ ತಕ್ಷಣವೇ ತೆಗೆದುಹಾಕಲು ಇದರ ಮೂಲಕ ಸೂಚಿಸಲಾಗಿದೆ” ಎಂದು ಪೊಲೀಸರು ನೀಡಿದ ನೋಟಿಸ್‌ನಲ್ಲಿ ಹೇಳಿದ್ದಾರೆ ಎಂದು thewire.in ತಿಳಿಸಿದೆ.

ಕೇರಳದ ಪೊಲೀಸ್ ಇಲಾಖೆಯು ರಾಜ್ಯ ಸರ್ಕಾರದ ಅಧೀನಕ್ಕೆ ಒಳಪಟ್ಟಿದ್ದು, ಪ್ರಸ್ತುತ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ವಿರೋಧ ಪಕ್ಷವಾದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಇದನ್ನು ಮುನ್ನಡೆಸುತ್ತಿದೆ. ಆದಾಗ್ಯೂ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ರಾಜ್ಯ ಪೊಲೀಸ್ ಮತ್ತು ಅರೆಸೇನಾ ಪಡೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾರತೀಯ ಚುನಾವಣಾ ಆಯೋಗದ (ಇಸಿಐ) ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿಯಂತ್ರಣಕ್ಕೆ ಒಳಪಟ್ಟಿರುತ್ತಾರೆ.

ಚುನಾವಣೆ ಸಮೀಪಿಸುತ್ತಿರುವ ಕೇರಳದಲ್ಲಿ ಎಡರಂಗದ ವಿರುದ್ಧ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಈ ಪೊಲೀಸ್ ನೋಟಿಸ್ ‘ಬಿಜೆಪಿ-ಎಲ್‌ಡಿಎಫ್ ಒಳಸಂಚಿ’ಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದೆ.

“ಬೆಳಿಗ್ಗೆ ಒಂದು ವಿಚಾರವನ್ನು ‘ಸಿಬ್ಬಂದಿ ತಪ್ಪು’ ಎಂದು ಕರೆದು, ಸಂಜೆಯ ವೇಳೆಗೆ ಅದರ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಸೆನ್ಸಾರ್ (ನಿರ್ಬಂಧ) ಮಾಡಲು ಮುಂದಾಗಲು ಸಾಧ್ಯವಿಲ್ಲ. ಇದು ಹಾನಿಯನ್ನು ನಿಯಂತ್ರಿಸುವ ಪ್ರಯತ್ನವಲ್ಲ, ಬದಲಿಗೆ ಹಾನಿ ಸಂಭವಿಸಿದೆ ಎಂಬುದನ್ನು ದೃಢಪಡಿಸುವ ಕ್ರಮ” ಎಂದು ಮಾಜಿ ಐಎಎಸ್ ಅಧಿಕಾರಿ ಹಾಗೂ ಕಾಂಗ್ರೆಸ್ ಸಂಸದ ಶಶಿಕಾಂತ್ ಸೆಂಥಿಲ್ ಬರೆದುಕೊಂಡಿದ್ದಾರೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...