2010ರಲ್ಲಿ ಕಾಲೇಜು ಪ್ರಾಧ್ಯಾಪಕರೊಬ್ಬರ ಕೈ ಕಡಿದ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಆರು ಜನ ಸದಸ್ಯರನ್ನು ದೋಷಿ ಎಂದು ರಾಜ್ಯದ ವಿಶೇಷ ಎನ್ಐಎ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ಪಿಎಫ್ಐ ಸಂಘಟನೆಯನ್ನು ಒಕ್ಕೂಟ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ.
ಪ್ರಕರಣದ ಎರಡನೇ ಹಂತದ ವಿಚಾರಣೆಯಲ್ಲಿ ವಿಶೇಷ ಎನ್ಐಎ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಕೆ ಭಾಸ್ಕರ್ ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಕೊಲೆ ಯತ್ನ, ಪಿತೂರಿ ಮತ್ತು ಇತರ ವಿವಿಧ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದರು.
ಕೆಲವು ಆರೋಪಿಗಳನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಅಪರಾಧಿಗಳೆಂದು ಪರಿಗಣಿಸಲಾಗಿದೆ. ಪ್ರಕರಣದ ಇತರ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮೊದಲ ಹಂತದಲ್ಲಿ, 31 ಆರೋಪಿಗಳು ವಿಚಾರಣೆಯನ್ನು ಎದುರಿಸಿದ್ದರು. ಅವರಲ್ಲಿ 10 ಜನರನ್ನು ನ್ಯಾಯಾಲಯವು 2015 ರ ಏಪ್ರಿಲ್ನಲ್ಲಿ ಯುಎಪಿಎ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಶಿಕ್ಷೆ ವಿಧಿಸಿತು. ಮೂವರನ್ನು ಅಪರಾಧಿಗಳಿಗೆ ಆಶ್ರಯ ನೀಡಿದ ಕಾರಣಕ್ಕೆ ತಪ್ಪಿತಸ್ಥರೆಂದು ತೀರ್ಪು ನೀಡಿತು. ಈ ವೇಳೆ ಪ್ರಕರಣದಲ್ಲಿ 18 ಮಂದಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.
ಜುಲೈ 4, 2010 ರಂದು ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿರುವ ನ್ಯೂಮನ್ ಕಾಲೇಜಿನ ಪ್ರೊಫೆಸರ್ ಟಿ ಜೆ ಜೋಸೆಫ್ ಅವರ ಬಲಗೈಯನ್ನು ಇಸ್ಲಾಮಿಕ್ ಸಂಘಟನೆಯಾದ ಪಿಎಫ್ಐ ಕಾರ್ಯಕರ್ತರು ಕತ್ತರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಎರ್ನಾಕುಲಂ ಜಿಲ್ಲೆಯ ಮುವಾಟ್ಟುಪುಳದಲ್ಲಿರುವ ಚರ್ಚ್ನಲ್ಲಿ ಭಾನುವಾರದ ಸಾಮೂಹಿಕ ಪೂಜೆಯಲ್ಲಿ ಪಾಲ್ಗೊಂಡು ಕುಟುಂಬದೊಂದಿಗೆ ಮನೆಗೆ ಮರಳುತ್ತಿದ್ದಾಗ ಈ ದಾಳಿ ನಡೆದಿತ್ತು.
ಏಳು ಜನರಿದ್ದ ಗುಂಪಿನ ದಾಳಿಕೋರರು ಪ್ರೊಫೆಸರ್ ಅವರನ್ನು ವಾಹನದಿಂದ ಹೊರಗೆಳೆದು, ಅವರ ಮೇಲೆ ಹಲ್ಲೆ ನಡೆಸಿದರು. ಆನಂತರ ಅವರ ಬಲಗೈಯನ್ನು ಪ್ರಮುಖ ಆರೋಪಿ ಸವಾದ್ ಕತ್ತರಿಸಿದ ಅವರು ಇನ್ನೂ ತಲೆಮರೆಸಿಕೊಂಡಿದ್ದಾರೆ.
”ನ್ಯೂಮನ್ ಕಾಲೇಜಿನಲ್ಲಿ ಬಿಕಾಂ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧಪಡಿಸಿದ ಪ್ರಶ್ನೆ ಪತ್ರಿಕೆಯಲ್ಲಿ ಧಾರ್ಮಿಕ ಅವಹೇಳನಕಾರಿ ಹೇಳಿಕೆಗಳಿಗಾಗಿ ಜೋಸೆಫ್ ಅವರನ್ನು ಕೊಲ್ಲಲು ಬಯಸಿದ್ದರು” ಎಂದು ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೇಳಿದ್ದರು.
ಇದನ್ನೂ ಓದಿ: ಬಜರಂಗದಳ, ಪಿಎಫ್ಐ ನಿಷೇಧ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ