ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ.
ಜೈಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲು ಮಹಿಳಾ ಮೀಸಲಾತಿ ಬಿಲ್ಗೆ ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸರೋಜಿನಿ ನಾಯ್ಡು ಅವರು ಕಾಂಗ್ರೆಸ್ನ ಪ್ರಥಮ ಮಹಿಳಾ ಅಧ್ಯಕ್ಷರಾಗಿದ್ದರು. ನೂರು ವರ್ಷಗಳಲ್ಲಿ ಬಿಜೆಪಿ ಅಥವಾ ಆರ್ಎಸ್ಎಸ್ನಿಂದ ಯಾವುದೆ ಮಹಿಳೆ ಅಧ್ಯಕ್ಷರಾಗಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸದಿದ್ದರೆ ಜನರು ಗುಲಾಮರಾಗುತ್ತಾರೆ ಎಂದು ಖರ್ಗೆ ಹೇಳಿದ್ದಾರೆ.
ಅಸ್ಪೃಶ್ಯರೆಂಬ ಕಾರಣಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಹೊಸ ಸಂಸತ್ ಭವನದ ಶಂಕುಸ್ಥಾಪನೆಗೆ ಆಹ್ವಾನಿಸಿರಲಿಲ್ಲ. ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿರಲಿಲ್ಲ. ಹಲವು ಗಣ್ಯರು ಮತ್ತು ಸಿನಿಮಾ ತಾರೆಯರನ್ನು ಆಹ್ವಾನಿಸಲಾಗಿತ್ತು. ಇದು ರಾಷ್ಟ್ರಪತಿಗೆ ಮಾಡಿದ ಅವಮಾನ ಎಂದು ಖರ್ಗೆ ಹೇಳಿದ್ದಾರೆ.
ಸಂಸತ್ತಿನಲ್ಲಿ ಮಸೂದೆ ಕುರಿತ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ತಕ್ಷಣವೇ ಮಸೂದೆ ಜಾರಿಗೆ ತರಬೇಕು. ಇತರ ಹಿಂದುಳಿದ ವರ್ಗಗಳ (ಒಬಿಸಿ) ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿತ್ತು.