ಅಮುಲ್- ಕೆಎಂಎಫ್ (ನಂದಿನಿ) ವಿಲೀನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, “ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಿದೆ” ಎಂದು ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು” ಎಂದು ಮನವಿ ಮಾಡಿದ್ದಾರೆ.
“ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ” ಎಂದು ತಿಳಿಸಿದ್ದಾರೆ.
“ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅಮತ್ ಶಾ ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ” ಎಂದು ಹೇಳಿದ್ದಾರೆ.
“ಗುಜರಾತ್ನ ಅಮುಲ್ ಜೊತೆ ಕರ್ನಾಟಕದ ‘ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದು ಟೀಕೆಗೆ ಗುರಿಯಾಗಿದೆ.
“ಅಮುಲ್ ಈಗ ಗುಜರಾತ್ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಅಂತಹ ಸಂಸ್ಥೆಯೊಂದಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದರ ಒಕ್ಕೂಟ (ಕೆಎಂಎಫ್) ವಿಲೀನಗೊಳಿಸುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ಅಮುಲ್ನಿಂದ ಕೆಎಂಎಫ್ ಕಲಿಯುವಂತದ್ದು ಏನೂ ಇಲ್ಲ” ಎಂದು ಸಹಕಾರಿ ಕ್ಷೇತ್ರದ ಚಿಂತಕರು, ಐಐಎಂಬಿ ಪ್ರೊಫೆಸರ್ ಎಂ.ಎಸ್.ಶ್ರೀರಾಮ್ ತಿಳಿಸಿದ್ದಾರೆ.
“ಅಮುಲ್ ನಂತರದಲ್ಲಿ ನಂದಿನಿ ಅತಿದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಎರಡು ಸೇರಿದರೆ ಮಾರ್ಕೆಟ್ ಶೇರ್ ಹೆಚ್ಚುತ್ತದೆ ಎಂಬುದು ನಿಜ. ಆದರೆ ವಿಲೀನ ಮಾಡುವುದು ಸರಿಯಲ್ಲ. ‘ಸಹಕಾರ’ ಎಂಬುವುದು ಸ್ಥಳೀಯರಿಗೆ ಸಂಬಂಧ ಪಟ್ಟ ಸಂಸ್ಥೆ. ಅದು ವಿಲೀನವಾಗುತ್ತಾ ಹೋದಷ್ಟು ಸ್ಥಳೀಯರಿಂದ ದೂರವಾಗುತ್ತದೆ. ಕೆಎಂಎಫ್ಗಿಂತ ದೊಡ್ಡದಾದ ಅಮುಲ್ ಜೊತೆ ಸೇರಿಕೊಂಡರೆ, ಅಮುಲ್ ಹೇಳಿದಂತೆ ಕೇಳಿಕೊಂಡು ಇರಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.
ಅಮಿತ್ ಶಾ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಪ್ರತಿಕ್ರಿಯೆ ನೀಡಿದ್ದು, ““ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ, ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಟೀಕಿಸಿದ್ದಾರೆ.
“ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ” ಎಂದು ತಿಳಿಸಿದ್ದಾರೆ.