ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿರುವ ಆರೋಪದಲ್ಲಿ ಕೊಡಗು ಜಿಲ್ಲೆಯ ವೀರಾಜಪೇಟೆ ಪೊಲೀಸರ ವಿರುದ್ಧ ಕ್ರಮ ಕೈಗೊಂಡಿದ್ದು, ಪ್ರಾಥಮಿಕ ವಿಚಾರಣೆಯ ಬಳಿಕ ಎಂಟು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕಳೆದ ವಾರ ಲಾಕ್ಡೌನ್ ಉಲ್ಲಂಘಿಸಿದ್ದಕ್ಕಾಗಿ ವೀರಾಜಪೇಟೆ ಪೊಲೀಸರು ಇಲ್ಲಿನ ಚಿಕ್ಕಪೇಟೆಯ ನಿವಾಸಿ 50 ವರ್ಷದ ರಾಯ್ ಡಿಸೋಜಾ ಅವರನ್ನು ಮಾರಣಾಂತಿಕವಾಗಿ ಥಳಿಸಿದ್ದರು. ರಾಯ್ ಅವರು ಪೊಲೀಸರ ಹಲ್ಲೆಯಿಂದಲೇ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು, ಸಮುದಾಯದ ಮುಖಂಡರು ಆರೋಪಿಸಿದ್ದರು.
“ಪ್ರಾಥಮಿಕ ವರದಿಯ ಆಧಾರದ ಮೇಲೆ ಎಂಟು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮರಣೋತ್ತರ ವರದಿ ಇನ್ನೂ ಬರಬೇಕಿದೆ. ಶವಪರೀಕ್ಷೆಯ ನಂತರವೇ ಸಾವಿಗೆ ಕಾರಣ ಸ್ಪಷ್ಟವಾಗುತ್ತದೆ” ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.
ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ರಾಯ್ ಡಿಸೋಜಾ ಜೂ.9ರಂದು ತಡರಾತ್ರಿ ಮನೆಯಿಂದ ಹೊರಗೆ ಓಡಾಡುತ್ತಿದ್ದರಂತೆ. ಪೊಲೀಸರು ರಾಯ್ ಸುತ್ತಾಡುತ್ತಿರುವುದನ್ನು ಕಂಡು, ಲಾಕ್ಡೌನ್ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆತನನ್ನು ಪ್ರಶ್ನಿಸಿ, ಥಳಿಸಿದ್ದಾರೆ ಎನ್ನಲಾಗಿದೆ.
ರಾಯ್ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ತಲುಪಿದಾಗ ಡಿಸೋಜಾ ಪ್ರಜ್ಞಾಹೀನರಾಗಿದ್ದರು ಎಂದು ಅವರ ಕುಟುಂಬ ಆರೋಪಿಸಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಯ್ ಶನಿವಾರ ನಿಧನರಾಗಿದ್ದಾರೆ.
“ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರು ತನಿಖೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಗಳ ಪ್ರಕಾರ ನಾವು ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸುತ್ತಿದ್ದೇವೆ” ಎಂದು ಕರ್ನಾಟಕ ದಕ್ಷಿಣ ವಲಯದ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಹೇಳಿದ್ದಾರೆ.
ವಿರಾಜಪೇಟೆ ಪೊಲೀಸರ ವರ್ತನೆಗೆ ವ್ಯಾಪಕ ಖಂಡನೇ ವ್ಯಕ್ತವಾಗಿದೆ. ಶನಿವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಐಜಿಪಿ ಪ್ರವೀಣ್ ಮಧುಕರ್ ಪವಾರ್, ’ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಮೃತ ಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಅವರ ಸಹೋದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದೂರು ಸ್ವೀಕರಿಸಿ, ಠಾಣೆಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆ ನಡೆಸಿದ ವಿರಾಜಪೇಟೆ ಡಿವೈಎಸ್ಪಿ ಜಯ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ವರದಿಯ ಆಧಾರದ ಮೇಲೆ 8 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ’ ಎಂದಿದ್ದಾರೆ.
ಪೋಲೀಸರನ್ನು ಬಂಧಿಸುವಂತೆ ಆಗ್ರಹಿಸಿದ್ದು, ಬಂಧನವಾಗದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ. ಜೊತೆಗೆ ಮೃತರ ತಾಯಿಗೆ ಪರಿಹಾರ ನೀಡಬೇಕು ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಖ್ ಖಾನ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ; ರಾಜ್ಯಗಳ ಮೇಲೆ ಸವಾರಿ ದೇಶದ ಸಮಗ್ರತೆಯ ಜತೆ ಚೆಲ್ಲಾಟ:ಎ ನಾರಾಯಣ