Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

- Advertisement -
- Advertisement -

ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗಿಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಭಾರೀ ಸುದ್ದಿಯಾಗಿತ್ತು. ಇದೀಗ ಘಟನೆಯ ನೆನಪು ಮಾಸುವ ಮುನ್ನ ಕೋಲಾರದಲ್ಲಿ ಮತ್ತೊಂದು ಪ್ರಕರಣ ನಡೆದಿದ್ದು, ಕೋಲಾರ ಜಿಲ್ಲೆಯ ಬೈನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜನವರಿ 30ರಂದು ಸರ್ಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿದೆ. ಶಾಲಾ ಬಾಲಕಿ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋವನ್ನು ಸ್ಥಳೀಯರು ಸೆರೆ ಹಿಡಿದಿದ್ದು, ಶಾಲಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ತೊಡಗಿಸದಂತೆ ಎಚ್ಚರಿಕೆ ನೀಡಿದ್ದರು. ಇದಲ್ಲದೆ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿ ಕಠಿಣ ಕ್ರಮದ ಎಚ್ಚರಿಕೆಯನ್ನು ಕೂಡ ನೀಡಿತ್ತು. ಈ ಆದೇಶವನ್ನು ಗಾಳಿಗೆ ತೂರಿ ಶಿಕ್ಷಕರು ವಿದ್ಯಾರ್ಥಿನಿಯ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿ ತಾನೇ ಶೌಚಾಲಯ ಕ್ಲೀನ್ ಮಾಡಿರುವುದಾಗಿ ಹೇಳಿಕೆ ನೀಡಿದ್ದು, ವಿದ್ಯಾರ್ಥಿನಿಯನ್ನು ಬೆದರಿಸಿ ಶಿಕ್ಷಕ ಆಂಜಿನೇಯ ರೆಡ್ಡಿ ಈ ರೀತಿ ಹೇಳಿಕೆ ಕೊಡಿಸಿದ್ದಾರೆ. ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

2023ರ ಡಿಸೆಂಬರ್‌ 17ರಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿಕೊಂಡಿರುವ ಘಟನೆ ಬಯಲಾಗಿತ್ತು. ಕಲಿಯುವುದಕ್ಕೆಂದು ಶಾಲೆಗೆ ಬರುವ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವುದು ಹೇಯ ಕೃತ್ಯ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಾದ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಭದ್ರಾವತಿಯ ನೇರಲೆಕೆರೆ ಶಾಲೆಯಲ್ಲಿ ಮಕ್ಕಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿತ್ತು. ವಿಡಿಯೋ ನೋಡಿ ಆಕ್ರೋಶಗೊಂಡ ಪೋಷಕರು ಪ್ರತಿಭಟನೆ ನಡೆಸಿದ್ದರು.

ಶಿಕ್ಷಣ ಇಲಾಖೆ ಸುತ್ತೋಲೆ: 

ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಂಡಲ್ಲಿ ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ.

ಇಲಾಖೆಯಿಂದ ಹೊರಡಿಸಲಾಗುವ ಸೂಚನೆ, ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು.  ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಸಿಬ್ಬಂದಿಯ ಕರ್ತವ್ಯ. ಸರ್ಕಾರಿ ಮಾತ್ರವಲ್ಲದೆ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸಹ ಇಂತಹ ಯಾವುದೇ ಪ್ರಕರಣಗಳು ನಡೆಯಬಾರದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ಶಾಲೆಗೆ ನೀಡುತ್ತಿರುವ ಅನುದಾನವನ್ನು ಪ್ರಥಮ ಪ್ರಾಶಸ್ತ್ರದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು .ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಬೇಕು. ಶಾಲಾ ಅವಧಿಯಲ್ಲಿ  ಶೌಚಾಲಯಗಳಿಗೆ ಬೀಗ ಹಾಕದೆ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ ಎಂದು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡ ಸೂಚಿಸಲಾಗಿದೆ.

ಶಾಲೆಯಲ್ಲಿ ಪರಿಶೀಲನೆ ವೇಳೆ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ಬಳಸಿಕೊಂಡಿರುವುದು ಗಮನಕ್ಕೆ ಬಂದಲ್ಲಿ ತಕ್ಷಣವೇ ಕ್ರಮವಹಿಸಲು ಅನುವಾಗುವಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರಿಗೆ(ಆಡಳಿತ) ತಕ್ಷಣ ವರದಿ ಮಾಡಲು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಲಾಗಿದೆ.

ಇದನ್ನು ಓದಿ: ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

0
ಭಾರತಕ್ಕೆ ಚಿಕಿತ್ಸೆಗೆಂದು ಬಂದು ಕಳೆದ ವಾರ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅವರನ್ನು ಬುಧವಾರ ಕೋಲ್ಕತ್ತಾದಲ್ಲಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಢಾಕಾದಲ್ಲಿ ಸುದ್ದಿಗೋಷ್ಠಿಯಲ್ಲಿ...