ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಎಂಟು ರೋಗಿಗಳು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಎಸ್ಎನ್ಆರ್ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್. ಜಿ.ನಾರಾಯಣಸ್ವಾಮಿ ಮತ್ತು ವೈದ್ಯಕೀಯ ಅಧಿಕಾರಿ (RMO) ಡಾ.ನಾರಾಯಣಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಐದು ಮಂದಿ ಹಾಗೂ ಇತರ ಮೂರು ರೋಗಿಗಳು ಆಮ್ಲಜನಕ ಪೂರೈಕೆ ಕೊರತೆಯಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದ್ದು, ಈ ಸಂಬಂಧ ಅಸಮಾಧಾನ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವೈದ್ಯರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಸೋಮವಾರ ತಡರಾತ್ರಿ 11 ಗಂಟೆ ಸುಮಾರಿಗೆ ಎಸ್ಎನ್ಆರ್ ಆಸ್ಪತ್ರೆಗೆ ತಲುಪಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾಡಳಿತ ಮತ್ತು ವೈಧ್ಯಾಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಆಮ್ಲಜನಕ ಮಟ್ಟ ಹೆಚ್ಚಳಕ್ಕೆ ಕರ್ಪೂರ, ಲವಂಗ, ಅಜಿವಾನ ಮತ್ತು ನೀಲಗಿರಿ ಎಣ್ಣೆ ಬಳಸಬೇಡಿ, ಇದು ಮಾರಣಾಂತಿಕವೂ ಆಗಬಹುದು!
ಆಸ್ಪತ್ರೆಯಲ್ಲಿ ಕೆಲವು ವೆಂಟಿಲೇಟರ್ಗಳು ನಿಷ್ಕ್ರಿಯವಾಗಿರುವುದನ್ನು ಗಮನಿಸಿದ ನಂತರ, ಶಸ್ತ್ರಚಿಕಿತ್ಸಕ ಡಾ.ಎಸ್. ಜಿ.ನಾರಾಯಣಸ್ವಾಮಿ ಮತ್ತು ಆರ್ಎಂಒ ಅವರನ್ನು ಬೇಜವಾಬ್ದಾರಿ ವರ್ತನೆ ಆರೋಪದಲ್ಲಿ ಇಬ್ಬರನ್ನು ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ಘಟನೆ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ ಅವರು ಆಸ್ಪತ್ರೆಯಲ್ಲಿ ಲಭ್ಯವಿರುವ ಆರೋಗ್ಯ ಸೌಲಭ್ಯಗಳ ಎಲ್ಲಾ ವಿವರಗಳನ್ನು ಸಂಗ್ರಹಿಸಿ, ವೆಂಟಿಲೇಟರ್ಗಳ ಹಂಚಿಕೆ ಮತ್ತು ಅವುಗಳ ಕಾರ್ಯವೈಖರಿಯ ಬಗ್ಗೆಯೂ ವಿಚಾರಣೆ ನಡೆಸಿದ್ದಾರೆ.
ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಇದ್ದಕ್ಕಿದಂತೆ ಆಕ್ಸಿಜನ್ ಸರಬರಾಜು ನಿಂತಿದೆ. ಆಮ್ಲಜನಕ ಪೂರೈಕೆ ಆಗುತ್ತಿಲ್ಲ ಎಂದು ರೋಗಿಗಳ ಸಂಬಂಧಿಕರು ವೈದ್ಯಾಧಿಕಾರಿಗಳಿಗೆ ಫೋನ್ ಮಾಡಿದರೂ ಕರೆ ಸ್ವೀಕರಿಸದೇ ನಿರ್ಲಕ್ಷ್ಯ ತೋರಿಸಿದ್ದಾರೆ. ಹೀಗಾಗಿ ಐಸಿಯುನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಜಿಲ್ಲಾ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮತ್ತು ವೈದ್ಯರೊಂದಿಗೆ ಚರ್ಚಿಸಿರುವ ಆರೋಗ್ಯ ಸಚಿವರು, ಆಮ್ಲಜನಕದ ಕೊರತೆ ಅಥವಾ ಔಷಧಿಗಳ ಪೂರೈಕೆಯ ಬಗ್ಗೆ ಯಾವುದೇ ಸಮಸ್ಯೆಗಳು ಕಂಡುಬಂದರೆ ಯಾವುದೇ ಸಮಯದಲ್ಲಿಯಾದರೂ ತಮ್ಮನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಬೇಕೆಂದು ಸುಧಾಕರ್, ಕೋಲಾರ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?