ಒಕ್ಕೂಟ ಸರ್ಕಾರದಿಂದ ತಿರಸ್ಕರಿಸಲ್ಪಟ್ಟ ಪಶ್ಚಿಮ ಬಂಗಾಳ ಸರ್ಕಾರದ ಗಣರಾಜ್ಯೋತ್ಸವದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ತಬ್ಧಚಿತ್ರವನ್ನು ಸೋಮವಾರ ಕೊಲ್ಕತ್ತಾದಲ್ಲಿ ಸಂಪೂರ್ಣ ಡ್ರೆಸ್ ರಿಹರ್ಸಲ್ನಲ್ಲಿ ಪ್ರದರ್ಶಿಸುತ್ತಿರುವುದು ಕಂಡುಬಂದಿದೆ.
ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ನೇತಾಜಿ ಸ್ತಬ್ಧಚಿತ್ರವನ್ನು ಸೇರಿಸಬೇಕೆಂದು ಒತ್ತಾಯಿಸಿ ಕಲ್ಕತ್ತಾ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪಾತ್ರವನ್ನು ಗೌರವಿಸಲು ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು.
ಕೋವಿಡ್ ಮಾರ್ಗಸೂಚಿಗಳ ಕಾರಣದಿಂದಾಗಿ ಸೀಮಿತ ಸಮಯ ಮತ್ತು ಸ್ಥಳಾವಕಾಶದ ಕಾರಣ, ಒಕ್ಕೂಟ ಸರ್ಕಾರ ಈ ವರ್ಷ ಗಣರಾಜ್ಯೋತ್ಸವ ಪರೇಡ್ಗೆ ಕೇವಲ 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂಬತ್ತು ಸಚಿವಾಲಯಗಳನ್ನು ಮಾತ್ರ ಆಯ್ಕೆ ಮಾಡಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ: ಒಕ್ಕೂಟ ಸರ್ಕಾರ ತಿರಸ್ಕರಿಸಿದ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಕೊಲ್ಕತ್ತಾದಲ್ಲಿ ಪ್ರದರ್ಶನ: ಬಂಗಾಳ ಸರ್ಕಾರ
ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಿರುವುದನ್ನು ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಪರೇಡ್ಗೆ ತಮ್ಮ ಸ್ತಬ್ಧಚಿತ್ರ ಆಯ್ಕೆ ಮಾಡದ ನಿರ್ಧಾರದ ವಿರುದ್ಧ ಧ್ವನಿ ಎತ್ತಿದರು.
ಸುಭಾಷ್ ಚಂದ್ರ ಬೋಸ್ ಅವರ ಸ್ತಬ್ಧಚಿತ್ರ ತಿರದ್ಕರಿಸುವ ಮೂಲಕ ಕೇಂದ್ರ ಸರ್ಕಾರ ನೇತಾಜಿಯನ್ನು ಅವಮಾನಿಸಿ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.
“ನಾವು ಕೋಲ್ಕತ್ತಾದಲ್ಲಿ ರೆಡ್ ರೋಡ್ನಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್ನಲ್ಲಿ ಟ್ಯಾಬ್ಲೋವನ್ನು ಪ್ರದರ್ಶಿಸುತ್ತೇವೆ” ಎಂದು ಈ ಹಿಂದೆ ಮಮತಾ ಬ್ಯಾನರ್ಜಿ ತಿಳಿಸಿದ್ದರು.
ಸ್ವಾತಂತ್ರ್ಯ ಹೋರಾಟಗಾರನ ಪ್ರಾಮುಖ್ಯತೆ ಬಿಂಬಿಸುವ ಪಶ್ಚಿಮ ಬಂಗಾಳದ ಟ್ಯಾಬ್ಲೋವನ್ನು ತಿರಸ್ಕರಿಸಿ, ದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕಾಗಿ ಮಮತಾ ಬ್ಯಾನರ್ಜಿ ಒಕ್ಕೂಟ ಸರ್ಕಾರವನ್ನು ಟೀಕಿಸಿದ್ದಾರೆ. ಇದು ರಾಜ್ಯದ ಬಗ್ಗೆ ಕೇಂದ್ರದ ಅಸಡ್ಡೆ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇನ್ನು,ನೇತಾಜಿ ಅವರ 125 ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿರುವ ಅವರು, ಬಿಜೆಪಿ ನೇತೃತ್ವದ ಸರ್ಕಾರ ನೇತಾಜಿ ಕಣ್ಮರೆಯ ಹಿಂದಿನ ರಹಸ್ಯವನ್ನು ಬಹಿರಂಗಪಡಿಸುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರ ಏಕೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಿಲ್ಲ ಎಂದು ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ಮಮತಾ ಬ್ಯಾನರ್ಜಿ ಆಗ್ರಹ