ಉತ್ತರ ಪ್ರದೇಶದ ಲಖಿಂಪುರ್ ಖೇರಿ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೆನಿ ತಂದೆ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತ ಬಂಧಿಸಬೇಕು ಎಂದು ಆಗ್ರಹಿಸಿ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಕರೆ ನೀಡಿದೆ.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ), ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆದ ರೈತರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘಟನೆಗಳ ಒಕ್ಕೂಟ.
ಕಳೆದ ವರ್ಷ ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಮಾಲೀಕತ್ವದ ಎಸ್ಯುವಿ ಹರಿದು ನಾಲ್ವರು ರೈತರು ಮತ್ತು ಪತ್ರಕರ್ತ ಸಾವನ್ನಪ್ಪಿದರು. ನಂತರದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಕಾರು ಚಾಲಕ ಮೃತಪಟ್ಟಿದ್ದರು. ಮೇಲೆ ಅಕ್ಟೋಬರ್ 3 ರಂದು ಕಾರು ಹರಿಸಿ ರೈತರನ್ನು ಹತ್ಯೆ ಮಾಡಲಾಗಿತ್ತು. ಹಿಂಸಾಚಾರದಲ್ಲಿ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಪ್ರಮುಖ ಆರೋಪಿ. ಈತ ಅಕ್ಟೋಬರ್ 9, 2021 ರಿಂದ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್ ಗನ್ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ
“ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟದಿಂದ ಕೈ ಬಿಡಬೇಕು ಎಂಬ ನಮ್ಮ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳದಿದ್ದಲ್ಲಿ ಜನವರಿ 21 ರಿಂದ ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆಯಾದ ಸ್ಥಳದಲ್ಲಿಯೇ ಪ್ರತಿಭಟನೆ ಆರಂಭಿಸುತ್ತೇವೆ” ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ರೈತ ಸಂಘಗಳ ಸಭೆಯ ಬಳಿಕ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ “ನಿರ್ಲಜ್ಜ ಸಂವೇದನಾಶೀಲತೆ” ಮತ್ತು ತೆನಿಯನ್ನು ತೆಗೆದುಹಾಕುವಲ್ಲಿ ವಿಫಲವಾದ ಸರ್ಕಾರದ ವಿರುದ್ಧ ಲಖಿಂಪುರ ಖೇರಿಯಲ್ಲಿ ಶಾಶ್ವತ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಸ್ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸರ್ಕಾರವು ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ಇರುವ ಕಾರಣ ಜನವರಿ 31 ರಂದು ರಾಷ್ಟ್ರವ್ಯಾಪಿ “ದ್ರೋಹದ ದಿನ” (Day of Betrayal) ಆಚರಿಸಲು ಎಸ್ಕೆಎಂ ಕರೆ ನೀಡಿದೆ.
“ಜನವರಿ 21 ರ ಒಳಗೆ ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ನಾವು ಉತ್ತರ ಪ್ರದೇಶದ ಪ್ರತಿ ಹಳ್ಳಿಗೆ ಭೇಟಿ ನೀಡಿ ಸರ್ಕಾರದ ರೈತ ವಿರೋಧಿ ನೀತಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.
“ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕೃಷಿ ಸಂಘಟನೆಗಳ ಬಗ್ಗೆ ತಿಳಿಸಿರುವ ಎಸ್ಕೆಎಂ, ಚುನಾವಣೆಯಲ್ಲಿ ಭಾಗವಹಿಸುವ ಅಥವಾ ಯಾವುದೇ ರಾಜಕೀಯ ಪಕ್ಷದ ಭಾಗವಾಗಿರುವ ಯಾವುದೇ ರೈತ ನಾಯಕರು ಈ ಸಂಘದ ಭಾಗವಾಗಿರುವುದಿಲ್ಲ. ಅಗತ್ಯವಿದ್ದಲ್ಲಿ, ಈ ನಿರ್ಧಾರವನ್ನು ಈ ವಿಧಾನಸಭಾ ಚುನಾವಣೆಯ ನಂತರ ಏಪ್ರಿಲ್ನಲ್ಲಿ ಪರಿಶೀಲಿಸಲಾಗುವುದು” ಎಂದು ಎಸ್ಕೆಎಂ ತಿಳಿಸಿದೆ.